ಆಲ್ದೂರು: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಜಿಲ್ಲಾ ಕಾನೂನು ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಸಿವಿಲ್ ನ್ಯಾಯಾಧೀಶ ಎ.ಎಸ್ ಸೋಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಕಾನೂನು ಅರಿವು ಬಲು ಮುಖ್ಯ. ಅದರ ತಿಳಿವಳಿಕೆ ಇಲ್ಲದೆ ಅಪರಾಧ ಕೃತ್ಯಗಳಲ್ಲಿ ಕಾನೂನುಬಾಹಿರವಾಗಿ ಭಾಗಿಯಾದರೆ ಕ್ಷಮೆ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಬಾಲ್ಯ ವಿವಾಹ ನಿಷೇಧ ಕಾನೂನು, ಪೋಕ್ಸೊ ಕಾಯ್ದೆ, ಮಾದಕ ವಸ್ತು ಸೇವನೆ ಮತ್ತು ಮಾರಾಟ ನಿಯಂತ್ರಣ ಕುರಿತು ವಿವರವಾಗಿ ತಿಳಿದುಕೊಳ್ಳುವುದು ಅವಶ್ಯಕ’ ಎಂದರು.
ವಕೀಲರಾದ ಚಂದ್ರಶೇಖರ್, ಕಾನೂನುಗಳ ವ್ಯಾಪ್ತಿ, ಅಪರಾಧ ಕೃತ್ಯಗಳ ಕುರಿತು ಮಾಹಿತಿ ನೀಡಿದರು.
ಆಲ್ದೂರು ಪೊಲೀಸ್ ಠಾಣೆಯ ಪಿಎಸ್ಐ ಸಜಿತ್ ಕುಮಾರ್ ಜಿ. ಆರ್., ಹೆಲ್ಮೆಟ್ ರಹಿತ ಸಂಚಾರ ಪ್ರಾಣಕ್ಕೆ ಕುತ್ತು. ಚಾಲನಾ ಪರವಾನಗಿ ಇಲ್ಲದೇ ವಾಹನ ಚಲಾಯಿಸಿದರೆ ವಾಹನದ ಮಾಲೀಕರು ಹಾಗೂ ಪೋಷಕರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಾಚಾರ್ಯ ಪೂರ್ಣೇಶ್ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ಪ್ರಕಾಶ್, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.