ಹಳ್ಳಿಬೈಲು(ಎನ್.ಆರ್.ಪುರ): ‘ಹಳ್ಳಿಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸಿರುವುದು ಸೀತೂರು ಗ್ರಾಮ ಪಂಚಾಯಿತಿಗೆ ಹೆಮ್ಮೆ ತಂದಿದೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಎಚ್.ಇ.ದಿವಾಕರ ಹೇಳಿದರು.
ತಾಲ್ಲೂಕಿನ ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಸಂಕದಕುಣಿ ಕ್ಲಸ್ಟರ್ ಮಟ್ಟದ ವ್ಯಾಪ್ತಿಯ 11 ಶಾಲೆಗಳ 1 ರಿಂದ 7ನೇ ತರಗತಿ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಯೊಂದರಲ್ಲಿ ಬೇಸಿಗೆ ಶಿಬಿರ ಆಯೋಜಿಸಿರುವುದು ತಾಲೂಕಿನಲ್ಲೇ ಪ್ರಥಮವಾಗಿದೆ. ಬೇಸಿಗೆ ಶಿಬಿರಕ್ಕೆ ಗ್ರಾಮ ಪಂಚಾಯಿತಿಯಿಂದ ಎಲ್ಲಾ ಸಹಕಾರ ನೀಡಲಾಗುವುದು’ ಎಂದರು.
ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ನಂಜುಂಡಪ್ಪ ಮಾತನಾಡಿ, ‘ಕೆಲವು ವರ್ಷಗಳ ಹಿಂದೆ ಸರ್ಕಾರದ ವತಿಯಿಂದ ಶಾಲೆಗಳಲ್ಲಿ ಚಿಣ್ಣರ ಅಂಗಳ ಎಂಬ ಕಾರ್ಯಕ್ರಮವನ್ನು ನಡೆಸಲಾಗುತ್ತಿತ್ತು. ಈ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಗೌರವಧನ ಸಹ ನೀಡಲಾಗುತ್ತಿತ್ತು. ನಂತರ ಇದು ನಿಂತು ಹೋಯಿತು. ಸರ್ಕಾರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಆಯೋಜಿಸುವುದರಿಂದ ಮುಂದಿನ ದಿನಗಳಲ್ಲಿ ಉಳಿದ ಶಾಲೆಗಳಿಗೆ ಪ್ರೇರಣೆಯಾಗಬಹುದು’ ಎಂದರು.
ರಾಜ್ಯ ಬಡ್ತಿ ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷ ಅಶೋಕ್ ಮಾತನಾಡಿ, ‘ನಾಲ್ಕು ಗೋಡೆಗಳ ಮಧ್ಯೆ ಶಿಕ್ಷಣ ಪಡೆಯುವ ಮಕ್ಕಳಿಗೆ ಬೇಸಿಗೆ ಶಿಬಿರದಲ್ಲಿ ಪಠ್ಯ ಪುಸ್ತಕದಲ್ಲಿ ಸಿಗದಿರುವ ಅನೇಕ ಜ್ಞಾನ ಸಿಗಲಿದೆ. ಸರ್ಕಾರಿ ಶಾಲೆಯ ಈ ಹೊಸ ಪ್ರಯೋಗ ಬೇರೆ ಶಾಲೆಗಳಿಗೆ ಪ್ರೇರಣೆಯಾಗಲಿ’ ಎಂದರು.
ಅಧ್ಯಕ್ಷತೆಯನ್ನು ಶಾಲೆಯ ಎಸ್.ಡಿ.ಎಂ.ಸಿ.ಅಧ್ಯಕ್ಷ ಅಕ್ಬರ್ ಆಲಿ ವಹಿಸಿದ್ದರು. ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ರೂಪಾ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಆರ್.ನಾಗರಾಜ್, ನಾಗರಮಕ್ಕಿ ಸರ್ಕಾರಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಮಹೇಶ್, ಶಾಲೆಯ ಮುಖ್ಯ ಶಿಕ್ಷಕ ಬಸವರಾಜ್, ಸಹ ಶಿಕ್ಷಕರಾದ ರಂಗನಾಥ, ಸುಪ್ರೀತಾ, ಶ್ವೇತಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.