ಚಿಕ್ಕಮಗಳೂರು: ‘ನಗರ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಿದೆ. ತಗ್ಗಿನ ಪ್ರದೇಶಗಳ ಬಗ್ಗೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,‘ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗಿ ತೊಂದರೆಯಾಗಿದೆ. ಮನೆಗಳಿಗೆ ನೀರು ನುಗ್ಗಿದೆ. ಕೆಲ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಎನ್ಡಿಆರ್ಎಫ್, ಗೃಹ ರಕ್ಷಕ ದಳ, ಪೊಲೀಸ್ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ’ ಎಂದರು.
‘ಬಿಬಿಎಂಪಿಯವರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ತೊಂದರೆಯಾಗದಂತೆ ಕ್ರಮ ವಹಿಸುತ್ತೇವೆ’ ಎಂದು ಪ್ರತಿಕ್ರಿಯಿಸಿದರು.
‘ಮಳೆಯಾಗುತ್ತಿರುವುದರಿಂದ ರೈತರು ಮುಂಗಾರು ಬಿತ್ತನೆಗೆ ತಯಾರಿಯಲ್ಲಿ ತೊಡಗಿದ್ದಾರೆ. ಬೀಜ, ಗೊಬ್ಬರ ಪೂರೈಕೆ ನಿಟ್ಟಿನಲ್ಲಿ ಸೂಚನೆ ನೀಡಿದ್ದೇನೆ. ಡಿಎಪಿ ಗೊಬ್ಬರಕ್ಕೆ ಬೇಡಿಕೆ ಹೆಚ್ಚು ಇದೆ. ಡಿಎಪಿ ತರಿಸಲು ವ್ಯವಸ್ಥೆ ಮಾಡಿದ್ದೇವೆ’ ಎಂದು ತಿಳಿಸಿದರು.
‘ಚಿಕ್ಕಮಗಳೂರು ಜಿಲ್ಲೆಯು ನಿಸರ್ಗ ಸಮದ್ಧವಾಗಿದೆ. ಇಡೀ ರಾಜ್ಯಕ್ಕೆ ಹಂಚುವಷ್ಟು ನಿಸರ್ಗ ಸೊಬಗು ಇಲ್ಲಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಭರವಸೆ ನೀಡಿರುವ ಎಲ್ಲವನ್ನು ಕಾರ್ಯಗತಗೊಳಿಸುತ್ತೇನೆ. ಪ್ರವಾಸೋದ್ಯಮ ಅಭಿವೃದ್ಧಿ ಸಹಿತ ಎಲ್ಲ ಕ್ಷೇತ್ರಗಳಿಗೂ ಒತ್ತು ನೀಡುತ್ತೇವೆ. ಈ ಜಿಲ್ಲೆಗೆ ಉಸ್ತುವಾರಿ ಸಚಿವರನ್ನು ಶೀಘ್ರದಲ್ಲಿ ನೇಮಕ ಮಾಡುತ್ತೇವೆ’ ಎಂದರು.
‘2019ರಲ್ಲಿ ಮೂಡಿಗೆರೆ ತಾಲ್ಲೂಕಿನಲ್ಲಿ ಸಂಭವಿಸಿದ್ದ ಅತಿವೃಷ್ಟಿ ಹಾನಿ ಪರಿಹಾರ ಒದಗಿಸಲು ಗಮನಹರಿಸುತ್ತೇನೆ. ವರದಿ ಪಡೆದು ಪರಿಶೀಲಿಸಿ ಕ್ರಮವಹಿಸುತ್ತೇನೆ’ ಎಂದು ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.