ADVERTISEMENT

ಕಾಫಿ ಮಂಡಳಿಯ ಶತಮಾನೋತ್ಸವ: ಲಾಂಛನ, ಧ್ಯೇಯವಾಕ್ಯ ಬಿಡುಗಡೆ

2047ಕ್ಕೆ ‘ಏಳು ಬೀಜಗಳಿಂದ ಏಳು ಲಕ್ಷ ಟನ್‌ಗೆ ಭಾರತದ ಕಾಫಿ ಜಿಗಿತ’ ಕಾಫಿ ಮಂಡಳಿಯ ಧ್ಯೇಯವಾಕ್ಯ: ದಿನೇಶ್

​ಪ್ರಜಾವಾಣಿ ವಾರ್ತೆ
Published 19 ಜುಲೈ 2025, 6:19 IST
Last Updated 19 ಜುಲೈ 2025, 6:19 IST
ಚಿಕ್ಕಮಗಳೂರು ನಗರದ ಕಾಫಿ ಮಂಡಳಿ ಉಪ ನಿರ್ದೇಶಕರ ವಿಸ್ತರಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಲಾಂಛನ ಹಾಗೂ ಧ್ಯೇಯವಾಕ್ಯ ಅನಾವರಣ ಕಾರ್ಯಕ್ರಮ ನಡೆಯಿತು
ಚಿಕ್ಕಮಗಳೂರು ನಗರದ ಕಾಫಿ ಮಂಡಳಿ ಉಪ ನಿರ್ದೇಶಕರ ವಿಸ್ತರಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಲಾಂಛನ ಹಾಗೂ ಧ್ಯೇಯವಾಕ್ಯ ಅನಾವರಣ ಕಾರ್ಯಕ್ರಮ ನಡೆಯಿತು   

ಚಿಕ್ಕಮಗಳೂರು: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 2047ಕ್ಕೆ 100 ವರ್ಷವಾಗುತ್ತಿರುವ ಸಂಬಂಧ ಕಾಫಿ ಮಂಡಳಿಯು ‘ಏಳು ಬೀಜಗಳಿಂದ ಏಳು ಲಕ್ಷ ಟನ್‌ಗೆ ಭಾರತದ ಕಾಫಿ ಜಿಗಿತ’ ಎಂಬ ಧ್ಯೇಯವಾಕ್ಯವನ್ನು ಹೊಂದಿದೆ ಎಂದು ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ತಿಳಿಸಿದರು.

ನವೆಂಬರ್‌ನಲ್ಲಿ ಶತಮಾನೋತ್ಸವ ಆಚರಣೆ ಸಂಭ್ರಮದ ಹೊಸ್ತಿಲಲ್ಲಿರುವ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಲಾಂಛನ, ಧ್ಯೇಯವಾಕ್ಯ ಅನಾವರಣ ಹಾಗೂ ಕಾಫಿ ಯಾತ್ರಾ ವಸ್ತು ಪ್ರದರ್ಶನ 2.0 ಅನ್ನು ನಗರದ ಕಾಫಿ ಮಂಡಳಿ ಉಪ ನಿರ್ದೇಶಕರ ವಿಸ್ತರಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

2047ಕ್ಕೆ ಏಳು ಬೀಜಗಳಿಂದ ಏಳು ಲಕ್ಷ ಟನ್‌ಗೆ ಜಿಗಿತಕ್ಕೆ ಸಾಧಿಸುವ ಗುರಿಯನ್ನೇ ಮಂಡಳಿ ಮುಖ್ಯ ಧ್ಯೇಯವಾಗಿಸಿಕೊಂಡಿದೆ. ನವೆಂಬರ್‌ನಲ್ಲಿ ಶತಮಾನೋತ್ಸವ ಆಚರಣೆ ಸಂದರ್ಭವೇ ಬಾಳೆಹೊನ್ನೂರಿನ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ ರೋಗ ನಿರೋಧಕ ಹೊಸ ಕಾಫಿ ತಳಿಯನ್ನು ಬಿಡುಗಡೆ ಮಾಡಲಿದೆ. ಇದರ ಜೊತೆಗೆ ಈ ಸಂಸ್ಥೆ ವೈಜ್ಞಾನಿಕ ಸಂಶೋಧನೆ, ಬೆಳೆಗಾರರ ಪಾಲ್ಗೊಳ್ಳುವಿಕೆ, ಮಾರುಕಟ್ಟೆ ವಿಸ್ತರಣೆ ಈ ಆಶಯಗಳನ್ನು ಹೊಂದಿದೆ. ಬೆಳೆಗಾರರು ಈ ಯೋಜನೆಯಲ್ಲಿ ಪಾಲ್ಗೊಳ್ಳುವುದರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು ಎಂದು ಹೇಳಿದರು.

ADVERTISEMENT

ಕಾಫಿ ಮೌಲ್ಯ ವರ್ಧನೆ ಹೆಚ್ಚಿಸುವ ಉದ್ದೇಶವೂ ಇದೆ. ಮೌಲ್ಯವರ್ಧನೆ ಎಂದರೆ ಉತ್ಪಾದನೆ ಹೆಚ್ಚಿಸುವಿಕೆ ಹಾಗೂ ನಿರ್ವಹಣಾ ವೆಚ್ಚ ಕಡಿತಗೊಳಿಸುವುದು. ದೇಶೀಯ ಮಾರುಕಟ್ಟೆಯಲ್ಲೇ ಕಾಫಿಗೆ ಉತ್ತಮ ಬೆಲೆಯನ್ನು ತರುವುದು. ಈ ಹಿನ್ನೆಲೆಯಲ್ಲಿ ಸಂಶೋಧನಾ ಕೇಂದ್ರದಲ್ಲಿ ಡಿಪ್ಲೊಮಾ ಇನ್ ಮಾರ್ಕೆಟಿಂಗ್‌ ಮ್ಯಾನೇಜ್‌ಮೆಂಟ್ ಬಗ್ಗೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಿಸಿಆರ್‌ಐ ತನ್ನ ಶತಮಾನೋತ್ಸವ ಸಂವತ್ಸರದ ಸಂಭ್ರಮದಲ್ಲಿ ವೈಜ್ಞಾನಿಕ ಆಂದೋಲನದ ಮೂಲಕ ತನ್ನ ಲಾಂಛನ ಮತ್ತು ಧ್ಯೇಯ ವಾಕ್ಯ ಬಿಡುಗಡೆ ಮಾಡಿದೆ. ಕರ್ನಾಟಕ ಕಾಫಿಗೆ ತನ್ನದೇ ಇತಿಹಾಸ ಮತ್ತು ಸಂಸ್ಕೃತಿ ಇದೆ. ಇದನ್ನು ಮುಂದಿನ ಜನಾಂಗಕ್ಕೆ ತಲುಪಸಬೇಕಿದೆ. ಇದೇ ಸಂದರ್ಭದಲ್ಲಿ ಕಾಫಿ ಬೆಳೆಗಾರರಿಗೆ ಪ್ರಯೋಜನವಾಗಲೆಂದು ಕಾಫಿ ವಸ್ತು ಸಂಗ್ರಹಾಲಯವನ್ನು ನವೀಕರಿಸಿ ಪುನರ್ ಸಮರ್ಪಣೆ ಮಾಡಲಾಗುತ್ತಿದೆ. ವಂತಲಾ ಸಂಧ್ಯಾ ಮತ್ತು ಕರ‍್ರ ಸಾವಿತ್ರಿ ಹೆಚ್ಚಿನ ವಿದ್ಯಾಭ್ಯಾಸ ಪಡೆಯದಿದ್ದರೂ ತರಬೇತಿ ಕೇಂದ್ರದಲ್ಲಿ ಕೃಷಿ ಪದವೀಧರರಿಗೆ ತರಬೇತಿ ನೀಡುತ್ತಿದ್ದಾರೆ ಎಂದರು.

ಮಂಡಳಿಯ ಕಾರ್ಯದರ್ಶಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂರ್ಮರಾವ್ ಮಾತನಾಡಿ, ಬಾಳೆಹೊನ್ನೂರಿನ ಕಾಫಿ ಸಂಶೋಧನಾ ಕೇಂದ್ರ ವಿಶ್ವಮಟ್ಟದ ಸಂಶೋಧನಾ ಸಂಸ್ಥೆ. ಅಲ್ಲಿ ಗ್ರಂಥಾಲಯವಿದ್ದು, ಅದೂ ವಿಶ್ವಮಟ್ಟದ ಗ್ರಂಥ ಭಂಡಾರವಾಗಿದೆ. ಈಗಾಗಲೇ 16 ಬಗೆಯ ಕಾಫಿ ತಳಿಗಳನ್ನು ಅಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಅವುಗಳಲ್ಲಿ ಚಂದ್ರಗಿರಿ ಅತ್ಯಂತ ಜನಪ್ರಿಯವಾದ ತಳಿ. ಮುಂದಿನ ನೂರು ವರ್ಷಗಳಿಗೆ ಈ ತಳಿಯನ್ನು ಒಯ್ಯಬೇಕೆನ್ನುವುದು ಎಲ್ಲರ ಜವಾಬ್ದಾರಿ. ಗುಣಮಟ್ಟದೊಡನೆ ಉತ್ಪಾದನೆ ಹೆಚ್ಚಿಸಬೇಕಾಗಿದೆ ಎಂದು ಹೇಳಿದರು.

ಏರ್‌ಡೆಕ್ಕನ್‌ನ ಸಂಸ್ಥಾಪಕ ಹಾಗೂ ಕಾಫಿ ಬೆಳೆಗಾರ ಕ್ಯಾ.ಜಿ.ಆರ್.ಗೋಪಿನಾಥ್, ಕೊಡಗು ಬೆಳೆಗಾರರ ಸಂಘದ ಅಧ್ಯಕ್ಷ ಎ.ನಂದಾ ಬೆಳ್ಯಪ್ಪ, ಅಖಿಲ ಭಾರತ ಕಾಫಿ ಕ್ಯೂರ‍್ಸ್ ಸಂಘದ ಅಧ್ಯಕ್ಷ ಎ.ಎನ್.ದೇವರಾಜ್, ಒರಿಸ್ಸಾ ಕಾಫಿ ಬೆಳೆಗಾರರ ಸಂಘದ ಪ್ರದೀಪ್‌ಕುಮಾರ್ ಮೊಹಂತಿ, ಭಾರತೀಯ ಕಾಫಿ ಮಾರುಕಟ್ಟೆ ಸಹಕಾರ ಸಂಸ್ಥೆಯ ಅಧ್ಯಕ್ಷ ಎ.ಎ.ಶಿವ, ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಚ್.ಬಿ.ಶಿವಣ್ಣ, ಹಾಸನ ಜಿಲ್ಲಾ ಬೆಳೆಗಾರರ ಸಂಘದ ಅಧ್ಯಕ್ಷ ಎ.ಎಸ್.ಪರಮೇಶ್, ಕರ್ನಾಟಕ ಬೆಳೆಗಾರರ ಸಂಘದ ಅಧ್ಯಕ್ಷ ಎ.ಅರವಿಂದರಾವ್ ಭಾಗವಹಿಸಿದ್ದರು.

ಸರ್ಫೇಸಿ ಕಾಯ್ದೆ: ಸಚಿವರೊಂದಿಗೆ ಚರ್ಚೆ

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಸರ್ಫೇಸಿ ಕಾಯ್ದೆಯಿಂದ ಕಾಫಿ ಬೆಳೆಯನ್ನು ಹೊರಗಿಡಬೇಕೆಂದು ಸಂಸತ್ತಿನಲ್ಲಿ ಚರ್ಚಿಸಿ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ. ಇದೊಂದು ಜಟಿಲ ಸಮಸ್ಯೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಅವರು ಒಂದು ತಾತ್ಕಾಲಿಕ ಸೂತ್ರವನ್ನು ರೂಪಿಸಿ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಿ ಬಲವಂತದ ಸಾಲ ವಸೂಲಾತಿಯನ್ನು ಸ್ಥಗಿತಗೊಳಿಸಿ ಆರು ತಿಂಗಳ ಕಾಲಕ್ಕೆ ವಿಸ್ತರಿಸಿ ಏಕಕಾಲಕ್ಕೆ ಸಾಲ ತೀರುವಳಿಗೆ ವ್ಯವಸ್ಥೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಸುಸ್ತಿದಾರರಾಗಿರುವ 800 ಕಾಫಿ ಬೆಳೆಗಾರರಲ್ಲಿ ಒನ್‌ಟೈಮ್ ಸೆಟಲ್‌ಮೆಂಟ್ ಮೂಲಕ 500 ಜನ ಸಾಲ ತೀರಿಸಿದ್ದಾರೆ. ಇನ್ನು 300 ಬೆಳೆಗಾರರು ಕಾಯ್ದೆ ವ್ಯಾಪ್ತಿಯಲ್ಲಿ ಸಮಯ ಕಾಯುತ್ತಿದ್ದಾರೆ. ಇದರ ಬಗ್ಗೆಯೂ ಸಚಿವರ ಜೊತೆ ಚರ್ಚಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.