ADVERTISEMENT

ಚಿಕ್ಕಮಗಳೂರು: ಸರ್ಫೇಸಿ ಕಾಟ, ಆನೆ ಹಾವಳಿ ಮುಕ್ತಿಯ ನಿರೀಕ್ಷೆ

2026–27ನೇ ಸಾಲಿನ ಕೇಂದ್ರ ಬಜೆಟ್‌ ಮೇಲೆ ಬೆಳೆಗಾರರ ನಿರೀಕ್ಷೆ

ವಿಜಯಕುಮಾರ್ ಎಸ್.ಕೆ.
Published 3 ಜನವರಿ 2026, 9:11 IST
Last Updated 3 ಜನವರಿ 2026, 9:11 IST
ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಕೊಳೆರೋಗದಿಂದ ಕಾಫಿ ಬೆಳೆ ಹಾಳಾಗಿರುವುದು
ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಕೊಳೆರೋಗದಿಂದ ಕಾಫಿ ಬೆಳೆ ಹಾಳಾಗಿರುವುದು   

ಚಿಕ್ಕಮಗಳೂರು: ಹವಾಮಾನ ವೈಪರೀತ್ಯ, ಕಾರ್ಮಿಕರ ಕೊರತೆ, ಸರ್ಫೇಸಿ ಕಾಯ್ದೆಯ ಕಾಟದ ನಡುವೆ ಕಂಗೆಟ್ಟಿರುವ ಕಾಫಿ ಬೆಳೆಗಾರರು, ಈ ಬಾರಿ ಕೇಂದ್ರ ಸರ್ಕಾರದ ಬಜೆಟ್‌ ಮೇಲೆ ಹೆಚ್ಚಿನ ನಿರೀಕ್ಷೆ ಹೊಂದಿದ್ದಾರೆ.

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಕಾಫಿ ದೇಶಕ್ಕೆ ಹೆಚ್ಚಾಗಿ ವಿದೇಶಿ ವಿನಿಮಯ ತಂದುಕೊಡುವ ಉದ್ಯಮ. ಕಾಫಿ ಹಲವು ವರ್ಷಗಳಿಂದ ಹವಾಮಾನ ವೈಪರೀತ್ಯ, ಕಾರ್ಮಿಕರ ಕೊರತೆ, ಇಳುವರಿ ಕುಸಿತ ಸೇರಿ ಹಲವು ಸಮಸ್ಯೆಗಳಿಂದ ನಲುಗಿದೆ. ಸಮಸ್ಯೆಗಳ ಪಟ್ಟಿಯನ್ನು ಪ್ರತಿವರ್ಷ ಬೆಳೆಗಾರರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈ ವರ್ಷ ಮತ್ತೊಮ್ಮೆ ಕೇಂದ್ರದ ಮನವರಿಕೆ ಮಾಡಲು ಕರ್ನಾಟಕ ಬೆಳೆಗಾರರ ಒಕ್ಕೂಟ(ಕೆಜಿಎಫ್‌) ಸಿದ್ಧತೆ ನಡೆಸಿದೆ.

ಬಾಳೆಹೊನ್ನೂರಿನಲ್ಲಿ ನಡೆದ ಕಾಫಿ ಸಂಶೋಧನಾ ಕೇಂದ್ರದ ಶತಮಾನೋತ್ಸವ ಸಮಾರಂಭಕ್ಕೆ ಬಂದಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಕೇಂದ್ರ ಪ್ಲಾಂಟೇಷನ್ ಕಾರ್ಯದರ್ಶಿ ಯಾದವ್ ಅವರಿಗೆ ಬೆಳೆಗಾರರು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ.  ಸರ್ಫೇಸಿ ಕಾಯ್ದೆಯಿಂದ ಬೆಳೆಗಾರರು ಅನುಭವಿಸುತ್ತಿರುವ ತೊಂದರೆ ಬಗ್ಗೆ ವಿವರವಾದ ಮಾಹಿತಿಯನ್ನು ಅವರು ಕೇಳಿದ್ದು, ಒದಗಿಸಲಾಗುತ್ತಿದೆ ಎಂದು ಬೆಳೆಗಾರರು ಹೇಳುತ್ತಾರೆ.

ADVERTISEMENT

ಸರ್ಫೇಸಿ ಕಾಯ್ದೆ ಮುಂದಿಟ್ಟುಕೊಂಡು ಬ್ಯಾಂಕ್ ಅಧಿಕಾರಿಗಳು ಬೆಳೆಗಾರರ ಮೇಲೆ ಸವಾರಿ ಮಾಡಲು ಹೊರಟಿದ್ದಾರೆ. ಸಾಲ ಮರುಪಾವತಿಸದ ಬೆಳೆಗಾರರ ತೋಟಗಳನ್ನು ಹರಾಜು ಮಾಡುತ್ತಿದ್ದಾರೆ. ಈ ಕಾಯ್ದೆಯಿಂದ ಕಾಫಿ ಉದ್ಯಮವನ್ನು ಹೊರಗಿಡಬೇಕು ಎಂಬುದು ಕಾಫಿ ಬೆಳೆಗಾರರ ಪ್ರಮುಖ ಬೇಡಿಕೆ. ಬ್ಯಾಂಕ್ ಸಾಲದ ಮೇಲಿನ ಬಡ್ಡಿದರ ಕಡಿಮೆ ಮಾಡಬೇಕು. ಇಲ್ಲದಿದ್ದರೆ ಬೆಳೆ ವೈಫಲ್ಯದಿಂದ ಕಂಗೆಟ್ಟಿರುವ ಬೆಳೆಗಾರರು ಮತ್ತಷ್ಟು ಕಷ್ಟಕ್ಕೆ ಸಿಲುಕಲಿದ್ದಾರೆ ಎಂಬುದನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲಾಗುತ್ತಿದೆ. ಹವಾಮಾನ ವೈಪರೀತ್ಯದಿಂದ ಫಸಲು ಕೈಸೇರದಂತಾಗಿದೆ. ಬೆಲೆ ಇದ್ದರೂ ಬೆಳೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಹವಾಮಾನ ಆಧರಿತ ವಿಮೆ ವ್ಯಾಪ್ತಿಗೆ ಕಾಫಿಯನ್ನೂ ಸೇರಿಸಬೇಕು ಎಂಬುದು ಬೆಳೆಗಾರರ ಮನವಿ.

ಹಳಸೆ ಶಿವಣ್ಣ

ಆನೆ ಹಾವಳಿ ತಪ್ಪಿಸಲು ಮನವಿ

ಕಾಡಾನೆ ಹಾವಳಿ ತಪ್ಪಿಸಲು ಕೇಂದ್ರ ಸರ್ಕಾರದ ಸಹಕಾರ ಮುಖ್ಯ. ನಾಡಿಗೆ ಬರುವ ಆನೆಗಳನ್ನು ಹಿಡಿದು ಸಾಫ್ಟ್ ರಿಲೀಸ್ ಕೇಂದ್ರಕ್ಕೆ ಬಿಡಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ಇದಕ್ಕೆ ಕೇಂದ್ರದ ಒಪ್ಪಿಗೆ ಮತ್ತು ನೆರವು ಅಗತ್ಯವಿದೆ. ಈ ವಿಷಯವನ್ನೂ ಬಜೆಟ್‌ನಲ್ಲಿ ಪ್ರಕಟಿಸಬೇಕು ಎಂದು ಬೆಳೆಗಾರರು ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಸಾಫ್ಟ್ ರಿಲೀಸ್ ಕೇಂದ್ರ ತೆರೆಯಲು ರಾಜ್ಯ ಸರ್ಕಾರದಿಂದ ಮಾತ್ರ ಸಾಧ್ಯವಾಗದು ಕೇಂದ್ರ ಸರ್ಕಾರ ಕೂಡ ಹಣಕಾಸಿನ ನೆರವು ನೀಡಬೇಕಾಗುತ್ತಿದೆ. ಈ ವಿಷಯವನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ. ವಿವರವಾದ ಮನವಿ ನೀಡುವಂತೆ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಮನವಿ ತಯಾರಿಸಲಾಗುತ್ತಿದೆ ಎಂದು ಕೆಜಿಎಫ್‌ ಅಧ್ಯಕ್ಷ ಹಳಸೆ ಶಿವಣ್ಣ ತಿಳಿಸಿದರು. ಜ. 6ರಂದು ಕೆಜಿಎಫ್‌ ಮಾಸಿಕ ಸಭೆ ಇದೆ. ಸಭೆಯಲ್ಲಿ ಈ ವಿಷಯಗಳನ್ನು ಚರ್ಚಿಸಿ ವಿವರವಾದ ಮನವಿ ಸಿದ್ಧಪಡಿಸಲಾಗುವುದು ಎಂದರು.

ಅಡಿಕೆ ಸಾಲ ಮನ್ನಾಕ್ಕೆ ಬೇಡಿಕೆ

ಡಿಕೆಗೆ ಎಲೆಚುಕ್ಕಿ ರೋಗ ಮತ್ತು ಹಳದಿ ಎಲೆ ರೋಗದ ಕಾಟ ಹೆಚ್ಚಾಗಿದೆ. ಬೆಳೆ ಕಳೆದುಕೊಂಡ ರೈತರ ಆತ್ಮಹತ್ಯೆ ಹೆಚ್ಚುತ್ತಿದೆ. ಅಡಿಕೆ ಬೆಳೆಗಾರರ ಸಾಲ ಮನ್ನಾ ಮಾಡಬೇಕು. ಸಾಧ್ಯವಾಗದಿದ್ದರೆ ಬಡ್ಡಿ ಮನ್ನಾ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಅಡಿಕೆ ಬೆಳೆಗಾರರು ಮನವಿ ಸಲ್ಲಿಸಿದ್ದಾರೆ. ಅಸಲು ಮರುಪಾವತಿಗೆ 5 ವರ್ಷಗಳ ಕಾಲಾವಕಾಶ ನೀಡಬೇಕು. ಎಚ್.ಡಿ. ಕುಮಾರಸ್ವಾಮಿ ಅವರ ಮೂಲಕ ಮನವಿ ಸಲ್ಲಿಸಲಾಗಿದೆ. ಮಲೆನಾಡಿನಲ್ಲಿ ಹಾಳಾಗಿರುವ ಅಡಿಕೆ ಬೆಳೆ ಬಗ್ಗೆ ಸಂಶೋಧನೆಗೂ ಒತ್ತು ನೀಡಬೇಕೆಂದು ಮನವಿ ಮಾಡಲಾಗಿದೆ ಎಂದು ಬೆಳೆಗಾರರು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.