ನರಸಿಂಹರಾಜಪುರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪರಿಶಿಷ್ಟ ಜನಾಂಗಕ್ಕೆ ಮೀಸಲಿಟ್ಟ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದು, ಇದು ಸಂವಿಧಾನ ವಿರೋಧಿ ಸರ್ಕಾರವಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಆರೋಪಿಸಿದರು.
ಇಲ್ಲಿನ ತಾಲ್ಲೂಕು ಕಚೇರಿ ಮುಂಭಾಗ ಶನಿವಾರ ಜೆಡಿಎಸ್ ತಾಲ್ಲೂಕು ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ವರು ಮಾತನಾಡಿದರು.
ಸರ್ಕಾರವು ಎಲ್ಲಾ ರಂಗದಲ್ಲೂ ಭ್ರಷ್ಟಾಚಾರ ಮಾಡುತ್ತಿದೆ. ವಸತಿ ಸಚಿವರು ಮನೆ ನೀಡುವುದಕ್ಕೆ ಲಂಚ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕರೇ ಆರೋಪಿಸಿದ್ದಾರೆ. ಶೃಂಗೇರಿ ಕ್ಷೇತ್ರದಲ್ಲೂ ಕಳೆದ 7 ವರ್ಷಗಳಿಂದ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಅಧಿಕಾರಿಗಳ ಮೇಲೆ ಶಾಸಕರ ಹಿಡಿತ ಇಲ್ಲವಾಗಿದೆ. ಶಾಸಕರ ನಿಕಟವರ್ತಿಗಳಿಗೆ ಮಾತ್ರ ಸಾಗುವಳಿ ಚೀಟಿ ನೀಡಲಾಗಿದೆ ಎಂದು ದೂರಿದರು.
ತಾಲ್ಲೂಕು ಕಚೇರಿಯಲ್ಲಿ ಪಹಣಿ ಮಾಡಿಸಬೇಕಾದರೆ ಲಂಚ ನೀಡಬೇಕಾದ ಸ್ಥಿತಿಯಿದೆ ಎಂದು ಆರೋಪಿಸಿದ ಅವರು, ಮೊದಲು ಶಾಸಕರು ಎಚ್ಚರಗೊಳ್ಳಬೇಕು. ವಿರೋಧ ಪಕ್ಷಗಳು ನೀಡುವ ಸಲಹೆ ತೆಗೆದುಕೊಳ್ಳಬೇಕು ಎಂದರು.
ಜೆಡಿಎಸ್ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಕಣಿವೆ ವಿನಯ್ ಮಾತನಾಡಿ, ಸರ್ಕಾರವು ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಪಡಿಸಿಕೊಂಡಿದೆ. ಶೃಂಗೇರಿ ಕ್ಷೇತ್ರದ ಎಲ್ಲಾ ರಸ್ತೆಗಳಲ್ಲಿ ಹೊಂಡ ಬಿದ್ದಿದೆ. ಕಾಡಾನೆ ಹಾವಳಿಯಿಂದ ತೋಟ, ಗದ್ದೆ ನಾಶವಾಗುತ್ತಿದೆ ಎಂದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ವಸತಿ ಯೋಜನೆಯಲ್ಲಿ ನೂರಾರು ಕೋಟಿ ಹಗರಣವಾಗಿದೆ. ಕಾಂಗ್ರೆಸ್ ಅಂಬೇಡ್ಕರ್ ಹೆಸರು ಹೇಳಿ ಅಧಿಕಾರಕ್ಕೆ ಬಂದವರು. ಈಗ ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಶೇ 60ರಷ್ಟು ಕಮೀಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.
ಜೆಡಿಎಸ್ ಮುಖಂಡರಾದ ಕೆ.ಶಿವದಾಸ್, ಬಿ.ಟಿ.ರವಿ, ಉಪೇಂದ್ರ, ಸುಭೋದ್, ಸುಪ್ರೀತ್, ಅಬ್ಧುಲ್ ಸುಬಾನ್, ನಾಗೇಶ್, ಮೇಘರ್ಷ, ಮಡಬೂರು ಸತೀಶ್, ಮನು, ಶಾರದಾ, ಎನ್.ಎಂ.ಮರುಳಪ್ಪ, ಚಂದ್ರು, ತಿಮ್ಮಣ್ಣ, ನಾಗೇಶ್, ವಿಜಯನ್, ಸನೀಲ್ ಬಾಬು, ಸುರೇಂದ್ರ, ಕಟ್ಟೆಗೌಡ್ರು, ಕೆ.ಟಿ.ಚಂದ್ರು ಮತ್ತಿತರರು ಇದ್ದರು. ನಂತರ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಅರ್ಪಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.