ಚಿಕ್ಕಮಗಳೂರು: ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಶನಿವಾರ 1975ರ ತುರ್ತು ಪರಿಸ್ಥಿತಿ ಕರಾಳ ದಿನ ಆಚರಿಸಲಾಯಿತು.
ನಗರದ ಪಕ್ಷದ ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.ಹಲವರು ತೋಳಿಗೆ ಕಪ್ಪುಪಟ್ಟಿ ಧರಿಸಿದ್ದರು.
ಪಕ್ಷದ ಜಿಲ್ಲಾಘಟಕದ ಉಪಾಧ್ಯಕ್ಷ ಸಿ.ಆರ್ .ಪ್ರೇಮ್ ಕುಮಾರ್ ಮಾತನಾಡಿ, 1975ರ ಜೂನ್ 25ರಂದು ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ತುರ್ತು ಪರಿಸ್ಥಿತಿ ಘೋಷಿಸಿದ್ದರು. ದೇಶದಲ್ಲಿ ಅದನ್ನು ಲಕ್ಷಾಂತರ ಮಂದಿ ವಿರೋಧಿಸಿದ್ದರು. ತುರ್ತುಪರಿಸ್ಥಿತಿ ವಿರೋಧಿಸಿ ಹಲವರು ಸೆರೆವಾಸ ಅನುಭವಿಸಿದರು. ಅದರ ನೆನೆಪಿಗಾಗಿ ಬಿಜೆಪಿ ವತಿಯಿಂದ ಕರಾಳ ದಿನ ಆಚರಿಸಲಾಗುತ್ತಿದೆ’ ಎಂದು ಹೇಳಿದರು.
‘ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರವು ಅಂದು ತುರ್ತು ಪರಿಸ್ಥಿತಿ ಜಾರಿಗೊಳಿಸಿತ್ತು. ಆ ಮೂಲಕ ಪ್ರಜಾಪ್ರಭುತ್ವದ ಕತ್ತು ಹಿಸುಕಿತ್ತು. ಸರ್ವಾಧಿಕಾರಿ ಧೋರಣೆ ಅನುಸರಿಸಿತ್ತು’ ಎಂದು ಟೀಕಿಸಿದರು.
‘ಜಾರಿ ನಿರ್ದೇಶನಾಲಯವು ಸೋನಿಯಾಗಾಂಧಿ, ರಾಹುಲ್ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಕ್ಕೆ ಕಾಂಗ್ರೆಸ್ ನಾಯಕರು ದೇಶದಾದ್ಯಂತ ಪ್ರತಿಭಟನೆ ಮಾಡಿದ್ದಾರೆ. ಒಂದು ಕುಟುಂಬದ ರಕ್ಷಣೆಗೆ ನಿಂತಿದ್ದಾರೆ’ ಎಂದು ಆಪಾದಿಸಿದರು.
ಪಕ್ಷದ ಜಿಲ್ಲಾಘಟಕದ ಅಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ, ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ, ಮುಖಂಡರಾದ ದೀಪಕ್ ದೊಡ್ಡಯ್ಯ, ಜಯರಾಮ್, ನಾಗೇಶ್, ದಿನೇಶ್, ಈಶ್ವರಹಳ್ಳಿ ಮಹೇಶ್, ಸಚಿನ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.