ಕೊಪ್ಪ: ಲೋಕಸೇವಾ ನಿರತ ಎಂ.ಎಸ್.ದ್ಯಾವೇಗೌಡ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ 50 ಹಾಸಿಗೆಯುಳ್ಳ ಕೋವಿಡ್ ಆರೋಗ್ಯ ಕೇಂದ್ರ ತೆರೆಯಲಾಗಿದ್ದು, ರೋಗಿಗಳಿಗೆ ಚಿಕಿತ್ಸೆ ನಡೆಯುತ್ತಿದೆ.
ಪ್ರಸ್ತುತ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್ ಕೊರತೆಯಿದ್ದು, ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮೂಲಕ ಸೋಂಕು ಪತ್ತೆ ಹಚ್ಚಲಾಗುತ್ತಿದೆ. ತಾಲ್ಲೂಕಿನಲ್ಲಿ ಪ್ರತಿದಿನ ಅಂದಾಜು 150 ಮಂದಿ ಸೋಂಕು ಶಂಕಿತ ವ್ಯಕ್ತಿಯಿಂದ ಮಾದರಿ ಸಂಗ್ರಹಿಸಿ ಜಿಲ್ಲಾ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ವರದಿಗಾಗಿ ಒಂದು ದಿನ ಕಾಯಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ.
ತೀವ್ರ ಉಸಿರಾಟ ಸಮಸ್ಯೆ, ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯಕ್ಕೆ ಸಂಬಂಧಿಸಿದ ತೊಂದರೆ ಇನ್ನಿತರೆ ಕಾಯಿಲೆ ಇದ್ದವರನ್ನು ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಒಳಪಡಿಸುವುದರಿಂದ ಕೇವಲ 20 ನಿಮಿಷಗಳಲ್ಲಿ ವರದಿ ಸಿಗುತ್ತದೆ. ಸೋಂಕು ಪತ್ತೆಯಾದಲ್ಲಿ ಆದಷ್ಟು ಬೇಗ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ವರದಿ ತಡವಾದಲ್ಲಿ ಇನ್ನೊಬ್ಬರಿಗೆ ಸೋಂಕು ಹರಡುವ ಸಾಧ್ಯತೆಯೂ ಹೆಚ್ಚು.
ಶೃಂಗೇರಿ ಕ್ಷೇತ್ರದ ಕೊಪ್ಪ, ಶೃಂಗೇರಿ, ಎನ್.ಆರ್.ಪುರ
ತಾಲ್ಲೂಕಿನ ಜನರಿಗೆ ಕೊಪ್ಪದ ಸರ್ಕಾರಿ ಆಸ್ಪತ್ರೆ ಕಟ್ಟಡದಲ್ಲಿ ತೆರೆಯಲಾದ ಕೋವಿಡ್ ಆರೋಗ್ಯ ಕೇಂದ್ರವೇ ಪ್ರಮುಖ ಆಸರೆ. ಕೋವಿಡ್ ಆರೋಗ್ಯ ಕೇಂದ್ರದಲ್ಲಿ ಬುಧವಾರದ ಹೊತ್ತಿಗೆ 17 ಮಂದಿ ಸೋಂಕಿತರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.
‘ತಾಲ್ಲೂಕಿನ ಆಸ್ಪತ್ರೆಯಲ್ಲಿ ಶೇ 50ರಷ್ಟು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಕೊರತೆಯಿದೆ. ಆಸ್ಪತ್ರೆಯ ಒಂದು ಆಂಬುಲೆನ್ಸ್ ಕೆಟ್ಟು ನಿಂತಿದ್ದು, ಅದನ್ನು ದುರಸ್ತಿಪಡಿಸಬೇಕಾದ ಅಗತ್ಯವಿದೆ. ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್ ಕೊರತೆಯಿಂದ
ಸೋಂಕು ಪತ್ತೆಹಚ್ಚುವುದು ತಡವಾಗುತ್ತಿದೆ’ ಎಂಬುದಾಗಿ ಹೆಸರು ಹೇಳಲಿಚ್ಛಿಸದ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.