ADVERTISEMENT

ಬೆಳೆವಿಮೆ ನೋಂದಾಯಿಸಿ ಆರ್ಥಿಕ ನಷ್ಟ ತಪ್ಪಿಸಿ: ಶಾಸಕಿ ನಯನಾ ಮೋಟಮ್ಮ

ಕೃಷಿ ಇಲಾಖೆಯಿಂದ ಪ್ರಚಾರ ರಥಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 6:09 IST
Last Updated 29 ಜುಲೈ 2025, 6:09 IST
ಮೂಡಿಗೆರೆ ಪಟ್ಟಣದಲ್ಲಿ ಕೃಷಿ ಇಲಾಖೆಯಿಂದ ನಡೆದ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಪ್ರಚಾರಕ್ಕೆ ಶಾಸಕಿ ನಯನಾ ಮೋಟಮ್ಮ ಚಾಲನೆ ನೀಡಿದರು
ಮೂಡಿಗೆರೆ ಪಟ್ಟಣದಲ್ಲಿ ಕೃಷಿ ಇಲಾಖೆಯಿಂದ ನಡೆದ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಪ್ರಚಾರಕ್ಕೆ ಶಾಸಕಿ ನಯನಾ ಮೋಟಮ್ಮ ಚಾಲನೆ ನೀಡಿದರು   

ಮೂಡಿಗೆರೆ: ರೈತರು ಬೆಳೆ ವಿಮೆ ಮಾಡಿಸಿಕೊಳ್ಳುವ ಮೂಲಕ ಆರ್ಥಿಕ ನಷ್ಟದಿಂದ ತಪ್ಪಿಸಿಕೊಳ್ಳಬೇಕು ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಪಟ್ಟಣದ ಶಾಸಕರ ಕಚೇರಿ ಆವರಣದಲ್ಲಿ ಸೋಮವಾರ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಭತ್ತದ ಬೆಳೆ ವಿಮೆ ನೋಂದಣಿ ಹಾಗೂ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಮಾಹಿತಿಯ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ʼತಾಲ್ಲೂಕಿನಲ್ಲಿ ಈ ಬಾರಿ ವ್ಯಾಪಕ ಮಳೆಯಾಗುತ್ತಿದೆ. ಅತಿವೃಷ್ಟಿಯಿಂದಾಗಿ ಬೆಳೆಹಾನಿ ಸೇರಿ ಆರ್ಥಿಕ ಸಂಕಷ್ಟ ಎದುರಿಸಲು ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ರೈತರು ಬಳಸಿಕೊಳ್ಳಬೇಕು. ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ತಾಲೂಕಿನಲ್ಲಿ ಎರಡು ತಿಂಗಳಿನಲ್ಲೇ ಮಳೆ ಅಧಿಕವಾಗಿದ್ದು, ಭತ್ತ ಬೆಳೆಗೆ ಮಳೆ ಮಾರಕವಾಗುತ್ತಿದೆ. ಇಲ್ಲಿನ ಸಾಂಪ್ರಾಯಿಕ ಬೆಳೆಯಾದ ಕಾಫಿ, ಕಾಳುಮೆಣಸು, ಅಡಿಕೆ ಬೆಳೆಗೆ ಕೊಳೆರೋಗ ಸೇರಿ ನಾನಾ ರೀತಿಯಲ್ಲಿ ಹಾನಿ ಸಂಭವಿಸುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ರೈತರು ಹಾನಿಯಿಂದಾಗುವ ನಷ್ಟವನ್ನು ತಪ್ಪಿಸಿಕೊಳ್ಳಲು ಬೆಳೆವಿಮೆಯನ್ನು ಬಳಸಿಕೊಳ್ಳಬೇಕುʼ ಎಂದು ಹೇಳಿದರು.

ADVERTISEMENT

ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್.ಅಶೋಕ್ ಕುಮಾರ್ ಮಾತನಾಡಿ, ‘ರೈತರು ಆರ್ಥಿಕ ಸಂಕಷ್ಟ ಬಗೆಹರಿಸಿಕೊಳ್ಳಬೇಕೆಂಬ ದೃಷ್ಟಿಯಿಂದ ಭತ್ತದ ಬೆಳೆ ವಿಮೆ ನೋಂದಣಿ ಹಾಗೂ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಬಗ್ಗೆ ಮೂಡಿಗೆರೆ ಹಾಗೂ ಕಳಸ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದರ ಸದುಪಯೋಗವನ್ನು ಎಲ್ಲಾ ರೈತರು ಪಡೆದುಕೊಳ್ಳಬೇಕು. ಈ ಬಾರಿ ಮಳೆ ಹೆಚ್ಚಾಗಿರುವುದರಿಂದ ಎಲ್ಲಾ ರೈತರು ಬೆಳೆ ವಿಮೆ ಮಾಡಿಸಿಕೊಳ್ಳಬೇಕುʼ ಎಂದು ಮನವಿ ಮಾಡಿದರು.

ಬೆಳೆ ಸಮೀಕ್ಷೆ ಜಾಗೃತಿ ಅರಿವಿನ ಕರಪತ್ರ ಬಿಡುಗಡೆಗೊಳಿಸಲಾಯಿತು.

ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಜಿಲ್ಲಾ ಪ್ರತಿನಿಧಿ ಪಿ.ಕೆ.ನಾಗೇಶ್, ಸಹಾಯಕ ಕೃಷಿ ನಿರ್ದೇಶಕಿ ಸುಮ, ಆತ್ಮ ಯೋಜನೆಯ ತಾಂತ್ರಿಕ ವ್ಯವಸ್ಥಾಪಕರಾದ ಶ್ವೇತಾ, ರಶ್ಮಿ, ಪ್ರದೀಪ್ ಮತ್ತಿತರರು ಉಪಸ್ಥಿತದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.