
ಶೃಂಗೇರಿ: ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಯು ತಾಲ್ಲೂಕಿನ ರೈತರಿಗೆ ಮರೀಚಿಕೆಯಾಗಿದ್ದು, ಕೆಲವು ರೈತರಿಗೆ ಮಾತ್ರ ಅಲ್ಪ ಪ್ರಮಾಣದ ವಿಮೆ ಬಿಡುಗಡೆಯಾಗಿದೆ’ ಎಂದು ನೆಮ್ಮಾರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಕೆ. ದಿನೇಶ್ ಹೆಗ್ಡೆ ಹೇಳಿದರು.
ಶೃಂಗೇರಿ ಪ್ರವಾಸಿ ಮಂದಿರದಲ್ಲಿ ತಾಲ್ಲೂಕಿನ 6 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಶುಕ್ರವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
‘ತಾಲ್ಲೂಕಿನ ರೈತರಿಗೆ ಆಗಿರುವ ಅನ್ಯಾಯದ ಬಗ್ಗೆ ಡಿ. 22ರಂದು ತಾಲ್ಲೂಕು ಕಚೇರಿ ಎದುರು ರೈತರೊಂದಿಗೆ ಪ್ರತಿಭಟನೆ ನಡೆಸಲಾಗುತ್ತದೆ. ಬೆಳೆ ವಿಮೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಬಂದು ಸಮರ್ಪಕ ಮಾಹಿತಿ ನೀಡಬೇಕು ಎಂಬುದು ನಮ್ಮ ಆಗ್ರಹವಾಗಿದೆ. ರೈತರಿಗೆ ಸಮರ್ಪಕ ವಿಮೆ ಬಿಡುಗಡೆಯಾಗದಿದ್ದರೆ ಡಿ. 29ರಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತದೆ. ಅಧಿಕಾರಿಗಳು ಮಳೆಯ ದಾಖಲೆ ಸಮೇತ ಪ್ರತಿಭಟನಾ ಸ್ಥಳಕ್ಕೆ ಬರಬೇಕು’ ಎಂದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಿ.ಸಿ.ಶಂಕರಪ್ಪ ಮಾತನಾಡಿ, ‘ರೈತರು ಬೆಳೆ ವಿಮೆಗಾಗಿ ವಿಮಾ ಕಂತು ಪಾವತಿಸಿ ಒಂದೂವರೆ ವರ್ಷದ ನಂತರ ವಿಮಾ ಪರಿಹಾರ ಬಿಡುಗಡೆಯಾಗುತ್ತಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಅಲ್ಲದೆ, ರೈತರೂ ಕಂತು ಪಾವತಿಸಿದ್ದಾರೆ. ರೈತರಿಗೆ ಆಗಿರುವ ಅನ್ಯಾಯವನ್ನು ಯಾರ ಬಳಿ ಕೇಳಬೇಕು. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಯಾರು ಎಂಬ ಬಗ್ಗೆಯೂ ಗೊಂದಲವಿದೆ. ಅನೇಕ ಗ್ರಾಮ ಪಂಚಾಯಿತಿಯಲ್ಲಿ ಮಳೆ ಮಾಪಕ ಹಾಳಾಗಿದ್ದು, ಈ ಬಗ್ಗೆಯೂ ಗೊಂದಲವಿದೆ. ಸಹಕಾರ ಸಂಘದಲ್ಲಿ ಶೇ 80ರಷ್ಟು ರೈತರು ವಿಮೆ ಮಾಡಿಸಿದ್ದಾರೆ. ಸಹಕಾರ ಸಂಘದ ಆಡಳಿತ ಮಂಡಳಿಗೆ ವಿಮೆ ಬಗ್ಗೆ ಮಾಹಿತಿ ಇಲ್ಲದಿದ್ದರೂ, ರೈತರಿಗೆ ಉತ್ತರ ನೀಡಬೇಕು’ ಎಂದರು.
ಹಾಲಂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಚ್.ನಟರಾಜ್ ಮಾತನಾಡಿ, ‘ವಿಮಾ ಕಂಪನಿಗಳು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಶಾಮೀಲಾಗಿ ಕಂಪನಿಗೆ ಲಾಭ ಮಾಡಿಕೊಳ್ಳುತ್ತಿದ್ದಾರೆ. ರೈತರಿಗೆ ತೀವ್ರ ಅನ್ಯಾಯ ಉಂಟಾಗಿದ್ದು, ಸರ್ಕಾರ ತಕ್ಷಣ ತಾಲ್ಲೂಕಿನ ರೈತರಿಗೆ ವಿಮಾ ಕಂತು ಬಿಡುಗಡೆ ಮಾಡಬೇಕು’ ಎಂದರು.
ಬೆಟ್ಟಗೆರೆ ಪಿಎಸಿಎಸ್ ಅಧ್ಯಕ್ಷ ಕೆ.ಎಂ.ರಮೇಶ್ ಭಟ್, ಕಾವಡಿ ಪಿಎಸಿಎಸ್ ಅಧ್ಯಕ್ಷ ಬೇಗಾನೆ ಪ್ರಸನ್ನ, ಶಾರದಾ ಸಂಘದ ಅಧ್ಯಕ್ಷ ವೆಂಕಟೇಶ್ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.