ADVERTISEMENT

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಬೇಕೆಂಬುದು ಅಲ್ಲಿನವರ ನಿರೀಕ್ಷೆ: ಸಿ.ಟಿ. ರವಿ

​ಪ್ರಜಾವಾಣಿ ವಾರ್ತೆ
Published 22 ಜೂನ್ 2022, 2:47 IST
Last Updated 22 ಜೂನ್ 2022, 2:47 IST
ಸಿ.ಟಿ. ರವಿ
ಸಿ.ಟಿ. ರವಿ   

ಚಿಕ್ಕಮಗಳೂರು: ‘ಮಹಾರಾಷ್ಟ್ರದ ಪ್ರಸ್ತುತ ಸರ್ಕಾರದ ಬಗ್ಗೆ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ಶಾಸಕರು ಹತಾಶರಾಗಿದ್ದಾರೆ. ಸರ್ಕಾರ ಪತನವಾಗಲಿ ಎಂದು ಈ ಪಾಲುದಾರ ಪಕ್ಷಗಳ ಶಾಸಕರೇ ಬಯಸಿದ್ದಾರೆ ಎನಿಸುತ್ತಿದೆ’ ಮಹಾರಾಷ್ಟ್ರದ ಬಿಜೆಪಿ ಉಸ್ತುವಾರಿ ಸಿ.ಟಿ.ರವಿ ಹೇಳಿದರು.

‘ದೇವೇಂದ್ರ ಫಡಣವೀಸ್‌ ಅವರ ನೇತೃತ್ವದ ಸರ್ಕಾರ ಬೇಕು ಎಂಬ ನಿರೀಕ್ಷೆ ಅಲ್ಲಿನವರಿಗೆ ಇದೆ. ಪಕ್ಷದ ನಾಯಕರ ಜೊತೆ ಸಂಪರ್ಕದಲ್ಲಿದ್ದೇನೆ’ ಎಂದು ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಮಹಾರಾಷ್ಟ್ರ ವಿಧಾನಸಭೆಯಿಂದವಿಧಾನ ಪರಿಷತ್‌ನ 10 ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ‘ಮಹಾ ವಿಕಾಸ್ ಅಘಾಡಿ’ಗೆಹಿನ್ನಡೆಯಾದ ಬಳಿಕ ಮಹಾರಾಷ್ಟ್ರ ರಾಜಕಾರಣದಲ್ಲಿ ತೀವ್ರಗತಿಯಲ್ಲಿ ಬೆಳವಣಿಗೆಗಳು ನಡೆದಿವೆ. ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಮೈತ್ರಿಕೂಟವಾಗಿರುವ ಎಂವಿಎ, ಪರಿಷತ್‌ನ ಆರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಆದರೆ, ಎಂವಿಎ ಅಂಗ ಪಕ್ಷಗಳ ಶಾಸಕರು ಅಡ್ಡ ಮತದಾನ ಮಾಡಿದ ಕಾರಣ ಎಂವಿಎಯ ಆರನೇ ಅಭ್ಯರ್ಥಿಗೆ ಸೋಲಾಗಿತ್ತು. ಬಿಜೆಪಿ ಐದು ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದರ ಬೆನ್ನಲ್ಲೇಶಿವಸೇನಾದ ಪ್ರಭಾವಿ ಮುಖಂಡ, ಸಚಿವ ಏಕನಾಥ ಶಿಂಧೆ ಅವರು ಪಕ್ಷದ ಕೆಲವು ಶಾಸಕರೊಂದಿಗೆ ಸೂರತ್‌ನ ಹೋಟೆಲ್‌ನಲ್ಲಿ ತಂಗಿದ್ದು, ಬಂಡಾಯದ ಬಾವುಟ ಹಾರಿಸಿದ್ದರು.

ಸಿದ್ದರಾಮಯ್ಯ, ಸುಳ್ಳು ನಾಣ್ಯದ 2 ಮುಖ: ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸುಳ್ಳು ನಾಣ್ಯದ ಎರಡು ಮುಖಗಳು ಇದ್ದಂತೆ. ಮೋದಿ ಅವರ ಬಗ್ಗೆ ಕೊಂಕು ಮಾತನಾಡುವುದು ಸಿದ್ದರಾಮಯ್ಯ ಅವರಿಗೆ ಇರುವ ಕಾಯಿಲೆ’ ಎಂದು ರವಿ ಕುಟುಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.