ಕೊಟ್ಟಿಗೆಹಾರ: ‘ದತ್ತ ಜಯಂತಿ ಅಂಗವಾಗಿ ತಾಲ್ಲೂಕಿನ ಗಡಿ ಭಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ’ ಎಂದು ಬಣಕಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಡಿ.ವಿ.ರೇಣುಕಾ ಹೇಳಿದರು.
ಕೊಟ್ಟಿಗೆಹಾರ ಚೆಕ್ಪೋಸ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೂಡಿಗೆರೆ ತಾಲ್ಲೂಕು ವ್ಯಾಪ್ತಿಯ ಕೊಟ್ಟಿಗೆಹಾರ, ಬಾಳೂರು ಚೆಕ್ ಪೋಸ್ಟ್, ಜನ್ನಾಪುರ, ಕೊಲ್ಲಿಬೈಲ್, ಕಸ್ಕೇಬೈಲ್ ಮುಂತಾದ ಕಡೆ ನಾಕಾಬಂದಿ ಹಾಕಿ, ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಕೊಟ್ಟಿಗೆಹಾರ ಚೆಕ್ ಪೋಸ್ಟ್ನಲ್ಲಿ ಕಾರ್ಯನಿರ್ವಹಿಸಲು ಸಬ್ಇನ್ಸ್ಪೆಕ್ಟರ್ ಸೇರಿ ಐವರು ಸಿಬ್ಬಂದಿ ನಿಯೋಜಿಸಲಾಗಿದ್ದು, ಕರಾವಳಿ ಭಾಗದಿಂದ ಜಿಲ್ಲೆಗೆ ಬರುವ ವಾಹನಗಳ ಮಾಹಿತಿ ಸಂಗ್ರಹಿಸಲಾಗುವುದು’ ಎಂದರು.
‘ಡಿಸೆಂಬರ್ 13ರಂದು ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಕೊಟ್ಟಿಗೆಹಾರ, ಬಣಕಲ್ ಸೇರಿದಂತೆ ಜಿಲ್ಲೆಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಂಚಿನ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಆದೇಶಿಸಲಾಗಿದೆ. ಪತ್ರಿಕೆ, ಹಾಲು, ಔಷಧ ಅಂಗಡಿ, ಆಸ್ಪತ್ರೆ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಹೋಟೆಲ್, ಕ್ಯಾಂಟೀನ್ಗಳನ್ನು ಮುಚ್ಚಲಾಗುವುದು. ಬಾರ್ ಆಂಡ್ ರೆಸ್ಟೋರೆಂಟ್ಗಳನ್ನು ಡಿ.12ರಿಂದಲೇ ಮುಚ್ಚಲಾಗುವುದು’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.