
ಚಿಕ್ಕಮಗಳೂರು: ಜಿಲ್ಲಾ ಆಸ್ಪತ್ರೆಗೆ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ಅಗತ್ಯ ಔಷಧಿಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಆಸ್ಪತ್ರೆಯ ಹೊರ ರೋಗಿಗಳ ವಿಭಾಗ, ತುರ್ತು ಚಿಕಿತ್ಸಾ ವಿಭಾಗ, ಔಷಧಿ ಉಗ್ರಾಣ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಸಮಸ್ಯೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲಾ ಸರ್ಜನ್ ಡಾ.ಚಂದ್ರಶೇಖರ್ ಎ.ಬಿ. ಮಾತನಾಡಿ, ‘ಜಿಲ್ಲಾಸ್ಪತೆಯಲ್ಲಿ ರೋಗಿಗಳಿಗೆ ದೈನಂದಿನ ತುರ್ತು ಚಿಕಿತ್ಸೆಗೆ ಬೇಕಿರುವ ಅಗತ್ಯ ಔಷಧಿ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದ್ದು, ಯಾವುದೇ ಕೊರತೆ ಕಾಡಿಲ್ಲ’ ಎಂದು ತಿಳಿಸಿದರು.
ನಾಯಿ ಕಡಿತ, ಹಾವು ಕಡಿತ, ವಿಷ ಸೇವನೆಯಂತಹ ಪ್ರಕರಣಗಳು ಬಂದಾಗ ಬೇಕಾಗಿರುವ ಎಲ್ಲಾ ಔಷಧಿಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದೆ. ಆಸ್ಪತ್ರೆಯ ಡಯಾಲಿಸಿಸ್ ವಿಭಾಗ ಎಂದಿನಂತೆ ಕಾರ್ಯ ಪ್ರವೃತ್ತವಾಗಿದ್ದು, ಯಾವುದೇ ಸಮಸ್ಯೆ ಕಂಡುಬಂದಿಲ್ಲ’ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ ಬಾಬು ಮಾತನಾಡಿ, ‘ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿಗಳು ಲಭ್ಯವಿದೆ’ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸರ್ಜನ್ ಡಾ.ಚಂದ್ರಶೇಖರ್ ಸಾಲಿಮಠ್ ಎಸ್, ಆರ್ಸಿಎಚ್ ಅಧಿಕಾರಿ ಡಾ.ಎಚ್.ಕೆ. ಮಂಜುನಾಥ ಉಪಸ್ಥಿತರಿದ್ದರು.
ಔಷಧ ಮತ್ತು ಮಾತ್ರೆ ಕೊರತೆ ಬಗ್ಗೆ ‘ಪ್ರಜಾವಾಣಿ’ ವಿಸ್ತೃತ ವರದಿಯನ್ನು ಸೋಮವಾರ ಪ್ರಕಟಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.