ADVERTISEMENT

ಮೂರು ಹಂತದಲ್ಲಿ ಪ್ರತಿಭಟನೆಗೆ ನಿರ್ಧಾರ

ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ಸಭೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2019, 13:36 IST
Last Updated 7 ಜುಲೈ 2019, 13:36 IST
ಉದ್ಘಾಟನಾ ಸಮಾರಂಭದಲ್ಲಿ ಜೆ.ಕೆ.ಲೋಕೇಶಪ್ಪ, ಅನ್ನಪೂರ್ಣ ಇತರರು ಪಾಲ್ಗೊಂಡಿದ್ದರು.
ಉದ್ಘಾಟನಾ ಸಮಾರಂಭದಲ್ಲಿ ಜೆ.ಕೆ.ಲೋಕೇಶಪ್ಪ, ಅನ್ನಪೂರ್ಣ ಇತರರು ಪಾಲ್ಗೊಂಡಿದ್ದರು.   

ಚಿಕ್ಕಮಗಳೂರು: ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರಿಗೆ ಬಡ್ತಿ ನೀಡುವುದು ಸಹಿತ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯಮಟ್ಟದಲ್ಲಿ ಮೂರು ಹಂತಗಳಲ್ಲಿ ಪ್ರತಿಭಟನೆ ನಡೆಸಲು ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಂಘಟನಾ ಕಾರ್ಯದರ್ಶಿ ಎಸ್.ಇ.ಲೋಕೇಶ್ವರಾಚಾರ್ ತಿಳಿಸಿದ್ದಾರೆ.

ನಗರದ ಆಜಾದ್ ಪಾರ್ಕ್ ಶಾಲೆಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸುವ ಟೂರ್ನಿಗಳಲ್ಲಿ ಕಪ್ಪುಪಟ್ಟಿ ಧರಿಸಿ ಪಾಲ್ಗೊಂಡು ಮೊದಲ ಹಂತದಲ್ಲಿ ಪ್ರತಿಭಟನೆ ಮಾಡುವುದು, ಎರಡನೇ ಹಂತದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದು, ಆಗಲೂ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮೂರನೇ ಹಂತದಲ್ಲಿ ಟೂರ್ನಿಗಳನ್ನು ಬಹಿಷ್ಕರಿಸಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಭೆ ಉದ್ಘಾಟಿಸಿದಸಂಘದ ರಾಜ್ಯಾಧ್ಯಕ್ಷ ಜೆ.ಕೆ.ಲೋಕೇಶಪ್ಪ ಮಾತನಾಡಿ, ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಕರನ್ನು ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಇತರ ಶಿಕ್ಷಕರಂತೆ ಕಾಣದೆ ತಾರತಮ್ಯ ಮಾಡುತ್ತಿದೆ. ವೇತನಬಡ್ತಿ, ಬಡ್ತಿ, ಪ್ರಯಾಣ ಭತ್ಯೆ ಸಹಿತ ವಿವಿಧ ಸವಲತ್ತು ನೀಡದೇ ಶೋಷಣೆ ಮಾಡಲಾಗುತ್ತಿದೆ ಎಂದು ದೂಷಿಸಿದರು.

ADVERTISEMENT

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಎಂಟು ತಿಂಗಳ ಹಿಂದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಗಿದೆ. ಈವರಗೆ ಮನವಿಗೆ ಸ್ಪಂದಿಸಿಲ್ಲ. ಹೋರಾಟದ ಮಾಡುವುದು ಅನಿವಾರ್ಯ ಎಂದರು.

ಸಂಘದ ರಾಜ್ಯ ಘಟಕದ ಉಪಾಧ್ಯಕ್ಷೆ ಅನ್ನಪೂರ್ಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಸಂಘದ ರಾಜ್ಯ ಘಟಕದ ಉಪಾಧ್ಯಕ್ಷರಾದ ವಿ.ಶಂಕರ್, ಲಕ್ಷ್ಮಣ, ಸಂಘಟನಾ ಕಾರ್ಯದರ್ಶಿಗಳಾದ ಗಣೇಶ್, ಎಸ್.ಈ.ಲೋಕೇಶ್ವರಾಚಾರ್, ಸುಧಾ, ಸಹಕಾರ್ಯದರ್ಶಿ ನಾಗರತ್ನ, ಖಜಾಂಚಿ ಎಂ.ಯೋಗೇಶ್, ಜಿಲ್ಲಾ ಕಾರ್ಯದರ್ಶಿ ಫೈರೋಜ್ ಅಹಮದ್, ಪಾಂಡುಕುಮಾರ್ ಸಭೆಯಲ್ಲಿದ್ದರು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.