
ಮಡಬೂರು(ನರಸಿಂಹರಾಜಪುರ): ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಸಾಲ ನೀಡುವುದು ಮಾತ್ರವಲ್ಲದೆ, ಗ್ರಾಮೀಣ ಭಾಗದ ಜನರಿಗೆ ಆರ್ಥಿಕ ಶಕ್ತಿ ನೀಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಎನ್.ಎಂ.ಕಾಂತರಾಜ್ ಹೇಳಿದರು.
ಮಡಬೂರು ಗ್ರಾಮದ ಡಿಎನ್ವಿ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಶೆಟ್ಟಿಕೊಪ್ಪ ಇದರ ಆಶ್ರಯದಲ್ಲಿ ಗುರುವಾರ ನಡೆದ ‘ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ’ಯಲ್ಲಿ ಅವರು ಮಾತನಾಡಿದರು.
ಯೋಜನೆ ವತಿಯಿಂದ ಕೃಷಿಕರಿಗೆ, ಬಡವರಿಗೆ, ಶಾಲಾ ಮಕ್ಕಳಿಗೆ ಸಹಾಯಹಸ್ತ, ಶಾಲೆಗಳಿಗೆ ಪರಿಕರ, ಅತಿಥಿ ಶಿಕ್ಷಕರನ್ನು ನೇಮಿಸಿ ಅವರಿಗೆ ಗೌರವಧನ, ವಯೋವೃದ್ಧರಿಗೆ ಮಾಸಾಶನ ಸಹ ನೀಡುತ್ತಿದೆ ಎಂದರು.
ರೋಟರಿ ಸಂಸ್ಥೆಯ ಅಧ್ಯಕ್ಷ ಕಣಿವೆ ವಿನಯ್ ಮಾತನಾಡಿ, ಸರ್ಕಾರಗಳು ಮಾಡದೆ ಇರುವ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದು ಅವರನ್ನು ಜಾಗೃತಿಗೊಳಿಸುತ್ತಿದೆ. ಧರ್ಮ ಜಾಗೃತಿ ಮೂಡಿಸುವುದರ ಜತೆಗೆ ಸಂಸ್ಕಾರಯುತ ಶಿಕ್ಷಣ ನೀಡುತ್ತಿದೆ ಎಂದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಡಬೂರು ದಾನಿವಾಸ ದುರ್ಗಾಂಬ ದೇವಾಲಯ ಸಮಿತಿಯ ಅಧ್ಯಕ್ಷ ಡಿ.ಸಿ.ದಿವಾಕರ್ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಉತ್ತಮ ಕೆಲಸಗಳನ್ನು ಸಮಾಜಮುಖಿಯಾಗಿ ಮಾಡುತ್ತಿದೆ. ದೇವಾಲಯಗಳ ಜೀರ್ಣೋದ್ಧಾರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅಲ್ಲದೆ ಕ್ಷೇತ್ರದ ವತಿಯಿಂದ ಆರ್ಥಿಕ ಸಹಕಾರ ನೀಡುತ್ತಿದೆ. ಜನರು ಇಂತಹ ಯೋಜನೆಗಳಲ್ಲಿ ಭಾಗವಹಿಸಿ ಹೆಚ್ಚಿನ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.
ಸತ್ಯನಾರಾಯಣ ಪೂಜಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶಶಿಧರ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪ, ನರಸಿಂಹರಾಜಪುರ ತಾಲ್ಲೂಕು ಯೋಜನಾಧಿಕಾರಿ ರಾಜೇಶ್, ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೀಲಮ್ಮ, ಸದಸ್ಯ ಬಾಳೆಮನೆ ಪ್ರವೀಣ್, ವಲಯ ಮೇಲ್ವಿಚಾರಕ ಪುರುಷೋತ್ತಮ್, ಒಕ್ಕೂಟದ ಅಧ್ಯಕ್ಷ ಎ.ಈ.ಎಲ್ದೊ ಆಲಂದೂರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.