ADVERTISEMENT

‘ಜನಸಂಖ್ಯೆ ನಿಯಂತ್ರಣ:ಯುವಪೀಳಿಗೆ ಎಚ್ಚೆತ್ತುಕೊಳ್ಳಲಿ’

ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಸುಜಾತಕೃಷ್ಣಪ್ಪ ಸಲಹೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2019, 12:56 IST
Last Updated 11 ಜುಲೈ 2019, 12:56 IST
ಚಿಕ್ಕಮಗಳೂರಿನಲ್ಲಿ ಏರ್ಪಡಿಸಿದ್ದ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಸುಜಾತಕೃಷ್ಣಪ್ಪ ಉದ್ಘಾಟಿಸಿದರು. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಿಂತಾಅನಿಲ್‌ಕುಮಾರ್ ಇದ್ದಾರೆ.
ಚಿಕ್ಕಮಗಳೂರಿನಲ್ಲಿ ಏರ್ಪಡಿಸಿದ್ದ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಸುಜಾತಕೃಷ್ಣಪ್ಪ ಉದ್ಘಾಟಿಸಿದರು. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಿಂತಾಅನಿಲ್‌ಕುಮಾರ್ ಇದ್ದಾರೆ.   

ಚಿಕ್ಕಮಗಳೂರು: ಜನಸಂಖ್ಯಾ ನಿಯಂತ್ರಣಕ್ಕೆ ಯವಪೀಳಿಗೆ ಎಚ್ಚೆತ್ತುಕೊಳ್ಳಬೇಕು ಎಂದು ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಸುಜಾತಕೃಷ್ಣಪ್ಪ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಪ್ರಪಂಚದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರಗಳಲ್ಲಿ ಚೀನಾ ಪ್ರಥಮ ಸ್ಥಾನದಲ್ಲಿದೆ. ಭಾರತ ದ್ವಿತೀಯ ಸ್ಥಾನದಲ್ಲಿದೆ. ದೇಶದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಕಡಿವಾಣ ಹಾಕದಿದ್ದರೆ, ಮುಂದೊಂದು ದಿನ ಭಾರತ ಪ್ರಥಮ ಸ್ಥಾನಕ್ಕೆ ಬರಲಿದೆ. ಜನಸಂಖ್ಯೆ ನಿಯಂತ್ರಣದಲ್ಲಿ ಗಂಡು - ಹೆಣ್ಣಿನ ಪಾತ್ರ ಮಹತ್ವದ್ದಾಗಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಬೇಕು ಎಂದರು.

ದೇಶದಲ್ಲಿ ಜನನ ಪ್ರಮಾಣ ಹೆಚ್ಚಾಗಿದೆ. ಮರಣ ಪ್ರಮಾಣ ಕಡಿಮೆ ಇದೆ. ಜನಸಂಖ್ಯೆ ಹೆಚ್ಚಳದಿಂದ ಮೂಲಸೌಕರ್ಯಗಳ ಕೊರತೆ ಉಂಟಾಗುತ್ತದೆ. ಬಡತನ, ನಿರುದ್ಯೋಗ ಸಮಸ್ಯೆ ಹೆಚ್ಚಾಗಲಿದೆ. ಜನಸಂಖ್ಯಾ ನಿಯಂತ್ರಣ ವಿಚಾರ ಕೇವಲ ಸಭೆ, ಜಾಥಾಗಳಿಗೆ ಸೀಮಿತವಾಗಬಾರದು ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ರವೀಂದ್ರ ಬೆಳವಾಡಿ ಮಾತನಾಡಿ, ಜನಸಂಖ್ಯೆ ನಿಯಂತ್ರಿಸುವ ಉದ್ದೇಶದಿಂದ ವಿಶ್ವ ಸಂಸ್ಥೆ 1981ರಲ್ಲಿ ವಿಶ್ವ ಸಂಸ್ಥೆ ಜನಸಂಖ್ಯೆ ದಿನ ಘೋಷಿಸಿತು. ಜನಸಂಖ್ಯೆ ನಿಯಂತ್ರಿಸುವ ನಿಮಿತ್ತ ಹಲವಾರು ಸಂಘ, ಸಂಸ್ಥೆಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೂ ಜನಸಂಖ್ಯಾ ಸ್ಪೋಟಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ ಎಂದು ವಿಷಾಧಿಸಿದರು.
ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷ ಜಯಣ್ಣ ನೆಟ್ಟೆಕೆರೆಹಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಜನಸಂಖ್ಯಾ ದಿನಾಚರಣೆ ನಿಮಿತ್ತ ನಗರದ ತಾಲ್ಲೂಕು ಕಚೇರಿ ಆವರಣದಿಂದ ಕುವೆಂಪು ಕಲಾಮಂದಿರದ ವರೆಗೆ ಜಾಗೃತಿ ಜಾಥಾ ನಡೆಸಲಾಯಿತು. ಜಿಲ್ಲಾಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಮಲ್ಲಿಕಾರ್ಜುನಪ್ಪ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಕೆ.ಭರತ್‌ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಗೀತಾ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.