ನರಸಿಂಹರಾಜಪುರ: ಬಡವರ ಪಾಲಿಗೆ ಸಂಜೀವಿನಿಯಾದ ಜನೌಷಧಿ ಕೇಂದ್ರವನ್ನು ಸರ್ಕಾರಿ ಆಸ್ಪತ್ರೆಯಿಂದ ಸ್ಥಳಾಂತರಿಸಬಾರದು ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ವಿ.ನಿಲೇಶ್ ಆಗ್ರಹಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿರುವ ಜನೌಷಧಿ ಕೇಂದ್ರ ಸ್ಥಳಾಂತರಿಸುವುದನ್ನು ವಿರೋಧಿಸಿ, ಬಿಜೆಪಿ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಜನೌಷಧಿ ಕೇಂದ್ರವನ್ನು ಸರ್ಕಾರಿ ಆಸ್ಪತ್ರೆಯಿಂದ ಸ್ಥಳಾಂತರಿಸುವ ಹುನ್ನಾರ ನಡೆಸಿದೆ. ಬಡವರ ಕಷ್ಟವನ್ನು ಅರ್ಥಮಾಡಿಕೊಳ್ಳದ ಕಾಂಗ್ರೆಸ್ ಬಡವರ ಮೇಲೆ ಗದಾಪ್ರಹಾರ ಮಾಡಿಕೊಂಡು ಬಂದಿದೆ. ಪ್ರಸ್ತುತ ಖಾಸಗಿ ಔಷಧಿ ಅಂಗಡಿಯವರ ಕೈಗೊಂಬೆಯಾಗಿರುವ ಕಾಂಗ್ರೆಸ್ ಜನೌಷಧಿ ಕೇಂದ್ರವನ್ನು ಸ್ಥಳಾಂತರಿಸಲು ಮುಂದಾಗಿದೆ ಎಂದು ಆರೋಪಿಸಿದರು. ಜನೌಷಧಿ ಕೇಂದ್ರ ಸ್ಥಳಾಂತರಿಸಲು ಮುಂದಾದರೆ ಆಸ್ಪತ್ರೆ ಮುಂಭಾಗದಲ್ಲಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.
ಬಿಜೆಪಿ ಮುಖಂಡರಾದ ಬಿ.ಎಸ್.ಆಶೀಶ್ ಕುಮಾರ್, ಕೆಸವೆ ಮಂಜುನಾಥ್, ಫರ್ವೀಜ್, ರಾಜೇಂದ್ರ, ಪ್ರೀತಂ, ಮನೋಜ್, ವೈ.ಎಸ್.ರವಿ, ಮಂಜುನಾಥ್ ಲಾಡ್, ಜಯರಾಂ, ದರ್ಶನ್, ಶೇಖರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.