ಹಳಿಯೂರು ಗ್ರಾಮದಲ್ಲಿ ನಿರ್ಮಿಸಿರುವ ಸಿರಿ-ಜೀವಜಲ ಕುಡಿಯುವ ನೀರಿನ ಘಟಕ ಉದ್ಘಾಟನೆಯನ್ನು ಶಾಸಕ ಜಿ.ಎಚ್. ಶ್ರೀನಿವಾಸ್ ನೆರವೇರಿಸಿದರು.
ತರೀಕೆರೆ: ಶುದ್ಧ ಕುಡಿಯುವ ನೀರನ್ನು ಉಪಯೋಗಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.
ಜಿ.ಎಚ್. ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್, ಸೃಷ್ಟಿ ಎಂಟರ್ಪ್ರೈಸಸ್ ಅಜ್ಜಂಪುರ, ತರೀಕೆರೆ ಪುರಸಭೆ ವತಿಯಿಂದ ಹಳಿಯೂರು ಗ್ರಾಮದಲ್ಲಿ ನಿರ್ಮಿಸಿರುವ ಸಿರಿ-ಜೀವಜಲ ಕುಡಿಯುವ ನೀರಿನ ಘಟಕ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಪುರಸಭೆ ಅಧ್ಯಕ್ಷ ವಸಂತಕುಮಾರ್ ಮಾತನಾಡಿ, ಈ ಹಿಂದೆ ಹಳಿಯೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಇತ್ತು. ಇದೀಗ ಜಿ.ಎಚ್. ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್, ಸೃಷ್ಟಿ ಎಂಟರ್ಪ್ರೈಸಸ್, ಪುರಸಭೆ ಸದಸ್ಯ ಕುಮಾರಪ್ಪ ಅವರ ಪ್ರಯತ್ನದಿಂದ ನೀರಿನ ಘಟಕದ ಉದ್ಘಾಟನೆ ನೆರವೇರಿದೆ. ಶಾಸಕ ಜಿ.ಎಚ್. ಶ್ರೀನಿವಾಸ್ ಅವರು ₹54 ಕೋಟಿ ಅನುದಾನದಲ್ಲಿ ತರೀಕೆರೆ ಪಟ್ಟಣದಲ್ಲಿ 24x7 ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಗೊಳಿಸಲಿದ್ದಾರೆ ಎಂದರು.
ಪುರಸಭೆ ಸದಸ್ಯ ಕುಮಾರಪ್ಪ ಮಾತನಾಡಿ, ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ಕೊಟ್ಟ ಮಾತಿನಂತೆ ಹಳಿಯೂರು ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ನೆರವೇರಿಸಿದ್ದಾರೆ. ವಾರ್ಡ್ ನಂ. 2ರ ಉಪ್ಪಾರ ಬಸವನಹಳ್ಳಿಯಲ್ಲಿ ಸಿ.ಸಿ. ರಸ್ತೆ ಹಾಗೂ ಅಂಗನವಾಡಿ, ಪಾಳೆಗಾರ್ ಕ್ಯಾಂಪ್, ಹಳಿಯೂರಿನಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.
ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ, ಕೆಡಿಪಿ ಸದಸ್ಯ ಗಂಗಾಧರ್,ಮಲ್ಲಿಕಾರ್ಜುನ, ಲಕ್ಷ್ಮಣ್, ಪ್ರಸನ್ನಕುಮಾರ್, ಮದನ್, ವಿಜಯಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.