ADVERTISEMENT

ಕೊಪ್ಪ | ಶಿಕ್ಷಣಕ್ಕೆ ಆದ್ಯತೆ ಅಗತ್ಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ

‌ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 4:12 IST
Last Updated 15 ಸೆಪ್ಟೆಂಬರ್ 2025, 4:12 IST
ಕೊಪ್ಪದಲ್ಲಿ ನಾರಾಯಣ ಗುರು ಸಮಾಜ ಸೇವಾ ಸಂಘ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಶಾಸಕ ಟಿ.ಡಿ.ರಾಜೇಗೌಡ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು
ಕೊಪ್ಪದಲ್ಲಿ ನಾರಾಯಣ ಗುರು ಸಮಾಜ ಸೇವಾ ಸಂಘ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಶಾಸಕ ಟಿ.ಡಿ.ರಾಜೇಗೌಡ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು   

ಕೊಪ್ಪ: ‘ವ್ಯವಸ್ಥೆಗಳು ಮೊದಲು ಶಿಕ್ಷಣಕ್ಕೆ ಆದ್ಯತೆ ಕೊಡಬೇಕು. ಈ ಮೂಲಕ ನಾಗರಿಕ ಸಮಾಜ ಸೃಷ್ಟಿಯಾಗಬೇಕು. ನಾವು ಬದುಕುತ್ತಾ ಇನ್ನೊಬ್ಬರಿಗೆ ಬದುಕಲು ಅವಕಾಶ ಮಾಡಿಕೊಡಬೇಕು. ಇದು ನಮ್ಮ ಸಮಾಜದ ಮಾರ್ಗಸೂಚಿ ಮತ್ತು ಚಿಂತನೆಯಾಗಬೇಕು’ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಇಲ್ಲಿನ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ವತಿಯಿಂದ ಹುಲುಮಕ್ಕಿಯಲ್ಲಿರುವ ನಾರಾಯಣ ಗುರು ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಶತಮಾನದ ಹಿಂದೆ ಸಾಮಾಜಿಕ ತುಳಿತಕ್ಕೆ ಒಳಗಾದ ಜನಾಂಗ ನಮ್ಮದು. ಇವತ್ತಿನ ತಲೆಮಾರಿಗೆ ಅಸ್ಪೃಶ್ಯತೆ ಏನೆಂದು ಗೊತ್ತಿಲ್ಲ. ಅತ್ಯಂತ ಬಡತನ ಅನುಭವಿಸಿದ ಎರಡು ಮೂರು ಸಮಾಜಗಳಲ್ಲಿ ನಮ್ಮ ಸಮಾಜವೂ ಒಂದು’ ಎಂದು ತಿಳಿಸಿದರು.

ADVERTISEMENT

ಒಂದು ಕಾಲದಲ್ಲಿ ಶ್ರೀಮಂತರ ಮನೆ ದನದ ಕೊಟ್ಟಿಗೆ ತೊಳೆಯುತ್ತಿದ್ದ ಕಟ್ಟಕಡೆಯ ಸಮುದಾಯದವರ ಮಕ್ಕಳು ಸಾಮಾಜಿಕ ನ್ಯಾಯದಲ್ಲಿ ಮೀಸಲಾತಿ ಹೊಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಲು ಸಂವಿಧಾನ ಅವಕಾಶ ಕಲ್ಪಿಸಿದೆ. ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳ ಪೈಕಿ ಮೂರುವರೆ ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರು ಅಧ್ಯಕ್ಷರಾಗಿದ್ದಾರೆ. ಇದು ಸಂವಿಧಾನದ ಆಶಯ ಮತ್ತು ಜನಸಾಮಾನ್ಯರಿಗೆ ಸಿಕ್ಕ ಅವಕಾಶ’ ಎಂದರು.

ಶಾಸಕ ಟಿ.ಡಿ.ರಾಜೇಗೌಡ ಅವರು ಮಾತನಾಡಿ, ‘ನಿಮ್ಮ ಸಮಾಜದ ಅಭಿವೃದ್ಧಿಗಾಗಿ ಸಹಕಾರ ನೀಡಿದ್ದೇನೆ. ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಒತ್ತು ಕೊಟ್ಟು ಕೆಲಸ ಮಾಡಿದ್ದೇನೆ. ಇಲ್ಲಿನ ಸಮುದಾಯದ ಏಳಿಗೆಗಾಗಿ ಭವನ ನಿರ್ಮಾಣ ಕಾಮಗಾರಿ ನಿಟ್ಟಿನಲ್ಲಿ ಒಟ್ಟು ₹ 73.50 ಲಕ್ಷ ಅನುದಾನ ನೀಡಿದ್ದೇನೆ’ ಎಂದು ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಟಿ.ಡಿ.ರಾಜೇಗೌಡ ಅವರನ್ನು ನಾರಾಯಣಪುರ ಸಮಾಜ ಸೇವಾ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ತಾಲ್ಲೂಕು ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷ ಶರತ್ ಡಿ.ಕಲ್ಲೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘಗಳ ಒಕ್ಕೂಟದ ಅಧ್ಯಕ್ಷ ಎಚ್.ಎಂ.ಸತೀಶ್, ತಾಲ್ಲೂಕು ಸಂಘದ ಉಪಾಧ್ಯಕ್ಷ ಸಂದೇಶ್, ಮಹಿಳಾ ಸಂಘದ ಅಧ್ಯಕ್ಷೆ ಆಶಾಲತಾ, ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.