ADVERTISEMENT

‘ಮಕ್ಕಳು ಪರಿಸರ ಪ್ರೇಮ ಮೈಗೂಢಿಸಿಕೊಳ್ಳಿ’

ವಿಶ್ವಪರಿಸರ ದಿನಾಚರಣೆಯಲ್ಲಿ ನ್ಯಾಯಾಧೀಶೆ ವಿನಿತಾಶೆಟ್ಟಿ ಸಲಹೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2019, 13:28 IST
Last Updated 12 ಜೂನ್ 2019, 13:28 IST
ಚಿಕ್ಕಮಗಳೂರಿನಲ್ಲಿ ಆಯೋಜಿಸಿದ್ದ ವಿಶ್ವಪರಿಸರ ದಿನಾಚರಣೆಯಲ್ಲಿ ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶೆ ವಿನಿತಾಶೆಟ್ಟಿ ಅವರು ಸಸಿಗೆ ನೀರೆರೆದರು. ಉಪವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿಲ್ಪಾ ಇದ್ದಾರೆ.
ಚಿಕ್ಕಮಗಳೂರಿನಲ್ಲಿ ಆಯೋಜಿಸಿದ್ದ ವಿಶ್ವಪರಿಸರ ದಿನಾಚರಣೆಯಲ್ಲಿ ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶೆ ವಿನಿತಾಶೆಟ್ಟಿ ಅವರು ಸಸಿಗೆ ನೀರೆರೆದರು. ಉಪವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿಲ್ಪಾ ಇದ್ದಾರೆ.   

ಚಿಕ್ಕಮಗಳೂರು: ಮಕ್ಕಳು ಪರಿಸರ ಪ್ರೇಮ ಮೈಗೂಡಿಸಿಕೊಳ್ಳಬೇಕು. ಸಾಲುಮರದ ತಿಮ್ಮಕ್ಕ ಅವರಂತೆ ಸಸಿ ನೆಟ್ಟು ಪೋಷಿಸಬೇಕು ಎಂದು ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶೆ ವಿನಿತಾಶೆಟ್ಟಿ ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಅರಣ್ಯ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದೊಂದಿಗೆ ನಗರದ ಹಿರೇಮಗಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಭಾರತ ದೇಶ ಪ್ರಾಕೃತಿಕ ಸಂಪತ್ತಿನಿಂದ ಕೂಡಿದೆ. ಜಾಗತೀಕರಣದ ಪ್ರಭಾವದಿಂದ ಅರಣ್ಯ ಸಂಪತ್ತು ದಿನದಿಂದ ದಿನಕ್ಕೆ ನಾಶವಾಗುತ್ತಿದೆ. ಈ ನಿಮಿತ್ತ ಪ್ರತಿಯೊಬ್ಬರೂ ಪರಿಸರ ಸಂರಕ್ಷರಣೆಗೆ ಮುಂದಾಗಬೇಕು ಎಂದರು.

ADVERTISEMENT

ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಎ.ಅರುಣ್ ಕುಮಾರಿ ಮಾತನಾಡಿ, 1973ರಲ್ಲಿ ವಿಶ್ವಸಂಸ್ಥೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆರಂಭಿಸಲಾಯಿತು. ಪರಿಸರ ಸಂರಕ್ಷಣೆ ಅದರ ಉದ್ದೇಶವಾಗಿದೆ ಎಂದರು.

ಜಾಗತೀಕರಣ, ಕೈಗಾರಿಕರಣದಿಂದ ಪರಿಸರ ನಾಶವಾಗುತ್ತಿದೆ. ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದೆ. ವಾತಾವರಣ ಅಸಮತೋಲನದಿಂದಾಗಿ ವಿಚಿತ್ರ ರೋಗಗಳು ಹಟ್ಟುತ್ತಿವೆ. ಜನರು ಅದನ್ನು ಅರ್ಥ ಮಾಡಿಕೊಳ್ಳಬೇಕು. ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದರು.

ಸಹಾಯಕ ಅರಣ್ಯಾಧಿಕಾರಿ ಮುತ್ತಣ್ಣ ಮಾತನಾಡಿ, ಮನುಷ್ಯನ ಸ್ವಾರ್ಥದಿಂದ ಪರಿಸರ ನಾಶವಾಗುತ್ತಿದೆ. ಗಾಳಿ, ನೀರು ಕಲುಷಿತಗೊಳ್ಳುತ್ತಿದೆ ಎಂದರು.

ವಾತಾವರಣದಲ್ಲಿ ಏರು-ಪೇರಿನ ಬಗ್ಗೆ ವನ್ಯಜೀವಿ ಸಂರಕ್ಷಣಾ ಕಾರ್ಯಕರ್ತ ಗಿರೀಶ್ ಉಪನ್ಯಾಸ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಂಜಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಸ್.ಜಯರಾಂ, ಮುಖ್ಯ ಶಿಕ್ಷಕ ಅಶೋಕ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.