
ಮೂಡಿಗೆರೆ: ರೈತರು ಕೃಷಿ ಜಮೀನಿನಲ್ಲಿ 10 ಎಚ್ಪಿವರೆಗೆ ಉಚಿತ ವಿದ್ಯುತ್ ನೀಡುವ ಬಗ್ಗೆ ಮೆಸ್ಕಾಂ ಅಧಿಕಾರಿಗಳಿಗೆ ದ್ವಂದ್ವ ನಿಲುವಿದ್ದು, ರೈತರಿಗೆ ನೋಟಿಸ್ ನೀಡುತ್ತಿರುವುದನ್ನು ಖಂಡಿಸಿ ರೈತರು ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ನಂತರ ಎಂಜಿನಿಯರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೃಷಿಕ ಅಮರ್ನಾಥ್ ಮಾತನಾಡಿ, 'ಈ ಹಿಂದಿನ ಸರ್ಕಾರ 10 ಎಚ್ಪಿವರೆಗೆ ಕೃಷಿ ನೀರಾವರಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀಡುತ್ತಿತ್ತು. ಇದರಿಂದ ರೈತರು ವಿದ್ಯುತ್ ಬಿಲ್ ಪಾವತಿ ಮಾಡಿಲ್ಲ. ಆದರೆ ಹಿಂದಿನ ಆದೇಶವನ್ನು ಕಾಂಗ್ರೆಸ್ ಸರ್ಕಾರ ಮುಂದುವರೆಸಿದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ಈ ಬಗ್ಗೆ ಪ್ರಶ್ನಿಸಿದರೆ, ಸರ್ಕಾರದಿಂದ ಮೌಖಿಕ ಆದೇಶವಿದೆ ಎಂದು ಅಧಿಕಾರಿಗಳು ವಿದ್ಯುತ್ ಬಿಲ್ ಕಟ್ಟಬೇಕೆಂದು ನೋಟಿಸ್ ನೀಡುತ್ತಿದ್ದಾರೆ. ಬಿಲ್ ಕಟ್ಟದಿದ್ದರೆ ಪಂಪ್ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಕಿರುಕುಳ ನೀಡುತ್ತಿದ್ದಾರೆ’ ಎಂದು ದೂರಿದರು.
ಕೃಷಿಕ ಡಿ.ಕೆ. ಲಕ್ಷ್ಮಣ್ ಗೌಡ ಮಾತನಾಡಿ, 'ಈ ಬಗ್ಗೆ ಹಿಂದೆ ಕೂಡ ಪ್ರತಿಭಟನೆ ನಡೆಸಿ ಸರ್ಕಾರದ ಆದೇಶ ಪರಿಶೀಲಿಸಬೇಕೆಂದು ಒತ್ತಾಯಿಸಿದ್ದ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಬಿಲ್ ವಸೂಲಿ ಹಾಗೂ ವಿದ್ಯುತ್ ಕಡಿತ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಈ ಬಾರಿ ಮತ್ತೆ ನೋಟಿಸ್ ನೀಡಲಾಗುತ್ತಿದೆ. ಇಂತಹ ದ್ವಂದ್ವ ನಿಲುವು ಬಗೆಹರಿಸಿಕೊಳ್ಳಲು ಮೆಸ್ಕಾಂ ಅಧಿಕಾರಿಗಳು ಸರ್ಕಾರದ ಆದೇಶವನ್ನು ಸಮಗ್ರವಾಗಿ ಪರಿಶೀಲಿಸಬೇಕು. ಒಂದು ವೇಳೆ ಯಾವುದೇ ನಿಯಮವಿಲ್ಲದೇ ಸುಖಾ ಸುಮ್ಮನೇ ವಿದ್ಯುತ್ ಕಡಿತಗೊಳಿಸಿದರೆ ಮುಂದಿನ ದಿನಗಳಲ್ಲಿ ಮೆಸ್ಕಾಂ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು' ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಸುನೀಲ್ ಮೇಗಲಪೇಟೆ, ರಾಮೇಗೌಡ ಬೀಜವಳ್ಳಿ, ಶೇಷಪಾಲ್ ಗೋಣಿಬೀಡು, ಪ್ರಕಾಶ್ ಬಕ್ಕಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.