
ಬೀರೂರು(ಕಡೂರು): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಬೆಳಗಾವಿಯ ಸುವರ್ಣಸೌಧಕ್ಕೆ ಡಿ.10ರಂದು ಹಸಿರು ಸೇನೆಯ ನೇತೃತ್ವದಲ್ಲಿ ಸಾವಿರಾರು ರೈತರು ಮುತ್ತಿಗೆ ಹಾಕಲಿದ್ದಾರೆ ಎಂದು ಸಂಘಟನೆಯ ಯುವಘಟಕದ ರಾಜ್ಯಾಧ್ಯಕ್ಷ ಫಯಾಜ್ ಮೈಸೂರು ತಿಳಿಸಿದರು.
ಪ್ರವಾಸಿ ಮಂದಿರದಲ್ಲಿ ಭಾನುವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೆಕ್ಕೆಜೋಳ ಖರೀದಿ, ಕಬ್ಬಿಗೆ ಸೂಕ್ತ ಬೆಂಬಲ ಬೆಲೆ, ನೀರಾವರಿ ಯೋಜನೆಗಳ ಅನುಷ್ಠಾನ, ಮಳೆಹಾನಿಯಿಂದ ಆಗಿರುವ ಬೆಳೆನಷ್ಟಕ್ಕೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ರೈತರ ಜ್ವಲಂತ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸೂಕ್ತವಾಗಿ ಸ್ಪಂದಿಸಬೇಕು. ತುಂಗಭದ್ರಾ ಜಲಾಶಯದಿಂದ ರೈತರ ಎರಡನೇ ಬೆಳೆಗೆ ನೀರು ಒದಗಿಸಬೇಕು ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಈ ಪ್ರತಿಭಟನೆ ನಡೆಯಲಿದೆ. ಚಿಕ್ಕಮಗಳೂರು ಜಿಲ್ಲೆ ಮತ್ತು ಕಡೂರು ತಾಲ್ಲೂಕಿನಿಂದಲೂ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು ಎಂದು ಹೇಳಿದರು.
ರೈತರು ರೈಲಿನ ಮೂಲಕ ಬೆಳಗಾವಿ ಚಲೊ ಕೈಗೊಳ್ಳಲಿದ್ದಾರೆ. ಅಲ್ಲಿ ಪ್ರತಿಭಟನೆಗಾಗಿ ಪೊಲೀಸ್ ಮತ್ತು ಸಂಬಂಧಪಟ್ಟವರ ಅನುಮತಿ ಪಡೆಯಲಾಗಿದೆ. ಸುವರ್ಣಸೌಧದ ಬಳಿ ಧರಣಿ ನಿರತರಿಗೆ ವ್ಯವಸ್ಥೆ ಮಾಡಲಾಗಿದೆ. ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರೈತಸಂಘದ ನಾಗರಾಜ್, ದಳವಾಯಿ ಕುಮಾರ್, ಅರೇಗೌಡ್ರ ವೀರಭದ್ರಪ್ಪ, ಬಿ.ಆರ್.ಬಾಲಕೃಷ್ಣ, ನಂಜುಂಡಪ್ಪ, ಜಿಯಾವುಲ್ಲಾ, ಜಯಣ್ಣ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.