ಕುಸುಬೂರು (ನರಸಿಂಹರಾಜಪುರ): ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗಳಿಗೆ ಸರ್ಕಾರವು ಖಾಸಗಿ ಸಂಘ, ಸಂಸ್ಥೆಗಳೊಂದಿಗೆ ಕೈಜೋಡಿಸಿ ಮೂಲ ಸೌಕರ್ಯ ಒದಗಿಸಿದರೆ ಸರ್ಕಾರಿ ಶಾಲೆಗಳನ್ನು ಉಳಿಸಬಹುದು ಎಂದು ಕ್ಯೂಲರ್ ಟೆಕ್ನಾಲಜಿ ಇಂಡಿಯ ಪ್ರೈವೆಟ್ ಲಿಮಿಟೆಡ್ ಮುಖ್ಯಸ್ಥ, ಶಾಲೆಯ ಹಿರಿಯ ವಿದ್ಯಾರ್ಥಿ ಕೆ.ಬಿ.ಲಕ್ಷ್ಮೀನಾರಾಯಣ ಹೇಳಿದರು.
ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಯೂಲರ್ ಟೆಕ್ನಾಲಜಿ ಇಂಡಿಯ ಪ್ರೈವೇಟ್ ಲಿಮಿಟೆಡ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಿಂದ ನಿರ್ಮಿಸಿದ ನೂತನಶೌಚಾಲಯ, ಕುಡಿಯುವ ನೀರಿನ ಘಟಕ ಹಾಗೂ ರಂಗಮಂದಿರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳಿಗೂ ಮೂಲ ಸೌಕರ್ಯ ದೊರೆಯುವಂತಾಗಬೇಕು. ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗಬೇಕು. ಅಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವಂತೆ ಮಾಡಬೇಕು. ನಮ್ಮ ಸಂಸ್ಕೃತಿಯಲ್ಲಿ ವಿದ್ಯಾರ್ಥಿಗಳನ್ನು ಬೆಳೆಸಬೇಕು. ಮಕ್ಕಳು ಉತ್ತಮ ಶಿಕ್ಷಣ ಪಡೆದು ನಾಯಕರಾಗಬೇಕು ಎಂದರು.
ತುಮಕೂರು ನೆವಿಲ್ ಫೌಂಡೇಷನ್ನ ಕೆ.ಚಂದ್ರಶೇಖರಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಕಂಪನಿಯ ಸಾಮಾಜಿಕ ಹೊಣೆಗಾರಿಕೆಯ ನಿಧಿ(ಸಿಎಸ್ ಆರ್) ಪೋಲಾಗಬಾರದು ಎಂಬ ಉದ್ದೇಶದಿಂದ ಸಂಘ, ಸಂಸ್ಥೆಗಳ ಸಹಕಾರ ಪಡೆದು ಸಮುದಾಯಕ್ಕೆ ಕೊಡುಗೆ ನೀಡಲಾಗಿದೆ ಎಂದರು.
ಹಿರಿಯ ವಿದ್ಯಾರ್ಥಿ ಸಂಘದ ಕೆ.ಮಂಜುನಾಥ್ ಮಾತನಾಡಿ, ಶಿಕ್ಷಣದಿಂದ ಮಾತ್ರ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಲು ಸಾಧ್ಯವಾಗುತ್ತದೆ ಎಂದರು.
ಬೆಂಗಳೂರು ಕ್ಯೂಲರ್ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಶಶಿಶೇಖರ್ ರೆಡ್ಡಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರಶಿಕ್ಷಣಾಧಿಕಾರಿ ಕೆ.ಆರ್.ಪುಷ್ಪಾ ಮಾತನಾಡಿ, ಜಪ ಮಾಡುವ ಕೈಗಳಿಗಿಂತಲೂ ಸೇವೆ ಮಾಡುವ ಕೈಗಳೇ ಶ್ರೇಷ್ಠವಾಗಿದೆ. ಲಕ್ಷ್ಮೀನಾರಾಯಣ ಅವರು ಈ ಶಾಲೆಯ ಹಿರಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಕ್ಯೂಲರ್ ಗ್ರೂಪ್ ಆಫ್ ಇಂಡಿಯದ ಮುಖ್ಯಸ್ಥರಾಗಿರುವುದು ಹೆಮ್ಮೆಯ ವಿಷಯವಾಗಿದೆ. ಓದಿದ ಶಾಲೆಯ ಅಭಿವೃದ್ಧಿಯಲ್ಲಿ ಎಲೆಮರೆ ಕಾಯಿಯಂತೆ ಕಾರ್ಯನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದರು.
ಕ್ಯೂಲರ್ ಕಂಪನಿಯ ಶಶಿಕುಮಾರ್ ಉಡುಪ ಮಾತನಾಡಿದರು.
ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯರಾದ ಬೆಳ್ಳಪ್ಪ, ಸುಧಾಕರ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಎಲ್.ಪ್ರವೀಣ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎನ್.ನಂದೀಶ್, ಕ್ಷೇತ್ರ ಸಮನ್ವಯಾಧಿಕಾರಿ ಸೇವ್ಯಾನಾಯ್ಕ, ಸಿಆರ್ಪಿ ಗೀತಾ, ಮುಖ್ಯಶಿಕ್ಷಕ ಹೇಮರಾಜ್, ಸಹಶಿಕ್ಷಕಿ ಹೇಮಾವತಿ, ಮಂಜುಳಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.