
ನರಸಿಂಹರಾಜಪುರ: ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ನ.26ರಂದು ರಾಷ್ಟ್ರೀಯ ಸಂವಿಧಾನ ದಿನಾಚರಣೆ ಆಯೋಜಿಸಲಾಗಿದೆ. ಅದೇ ದಿನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ. ಸಂವಿಧಾನ ದಿನಾಚರಣೆಯನ್ನು ಹಬ್ಬದಂತೆ ಆಚರಿಸಲು ಎಲ್ಲಾ ಅಧಿಕಾರಿಗಳು, ಸಂಘ ಸಂಸ್ಥೆಗಳು ಸಹಕರಿಸಬೇಕು ಎಂದು ತಹಶೀಲ್ದಾರ್ ನೂರುಲ್ ಹುದಾ ಹೇಳಿದರು.
ಈ ಸಂಬಂಧ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಜಾಥಾ ಆಯೋಜಿಸಬೇಕು. ಜಾಥಾದಲ್ಲಿ ಸಂವಿಧಾನ ಪೂರಕವಾದ ಮಾಹಿತಿಯ ಸ್ತಬ್ಧಚಿತ್ರಗಳು ಇರಬೇಕು.ಸ್ತಬ್ಧಚಿತ್ರಗಳಲ್ಲಿ ಕನ್ನಡಕ್ಕೆ ಹೆಚ್ಚು ಆದ್ಯತೆ ನೀಡಬೇಕು. ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರು ಸಂವಿಧಾನ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.
ಕೊಪ್ಪ ಎಪಿಎಂಸಿ ನಿರ್ದೇಶಕ ಎಚ್.ಎಂ.ಶಿವಣ್ಣ ಮಾತನಾಡಿ, ಜಾಥಾದಲ್ಲಿ ಅಂಬೇಡ್ಕರ್ ಅವರ ಜೀವನ ಚರಿತ್ರೆ ಬಗ್ಗೆ, ಸಂವಿಧಾನದ ಹಕ್ಕುಗಳ ಬಗ್ಗೆಯೇ ಸ್ತಬ್ಧ ಚಿತ್ರಗಳು ಆಗಬೇಕು. ದಲಿತ ಸಂಘಟನೆಗಳಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ತಾಲ್ಲೂಕು ಪಂಚಾಯಿತಿ ಇಒ ಎಚ್.ಡಿ.ನವೀನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎ.ಕೆ.ಪಾಟೀಲ ಮಾತನಾಡಿದರು.
ಇತ್ತೀಚೆಗೆ ಜಿಲ್ಲಾ ಮಟ್ಟದಲ್ಲಿ ನಡೆದ ಸಂವಿಧಾನ ಕುರಿತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು.
ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರೇಂದ್ರ, ಸದಸ್ಯರಾದ ಫಯಾಜ್, ದೇವಂರ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣೇಶ್, ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾಶ್ರೀನಿವಾಸ್, ಗೌರವಾಧ್ಯಕ್ಷೆ ಜಾನಕಿ, ಕೆಡಿಪಿ ಸದಸ್ಯ ಸಾಜು, ಜಿಲ್ಲಾ ಎಸ್.ಸಿ, ಎಸ್.ಟಿ ದೌರ್ಜನ್ಯ ತಡೆ ಸಮಿತಿ ಸದಸ್ಯ ಎಂ.ಮಹೇಶ್, ವಾಲ್ಮೀಕಿ ಸಂಘದ ಕ್ಷೇತ್ರಾಧ್ಯಕ್ಷ ಎ.ಸಿ.ಶ್ರೀನಿವಾಸ್, ಡಿಎಸ್ಎಸ್ ತಾಲ್ಲೂಕು ಅಧ್ಯಕ್ಷ ಪಿ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಎಸ್.ಸುಬ್ರಹ್ಮಣ್ಯ, ದಲಿತ ಮುಖಂಡ ಮಹೇಶ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ್ ,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.