ಚಿಕ್ಕಮಗಳೂರು: ‘ದೇಶದ ಪ್ರಜೆಗಳು ಬದಲಾಗಬೇಕು, ಆಗ ಈ ದೇಶದ ವ್ಯವಸ್ಥೆ ಬದಲಾಗಲು ಸಾಧ್ಯ’ ಎಂದು ಹಿರಿಯ ಸಿವಿಲ್ ನ್ಯಾಯಾದೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.
ನಗರದ ಐಡಿಎಸ್ಜಿ ಕಾಲೇಜಿನಲ್ಲಿ ಐಸಿರಿ ಫೌಂಡೇಷನ್ ಹಾಗೂ ಐಡಿಎಸ್ಜಿ ಸರ್ಕಾರಿ ಕಾಲೇಜು ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ವೀ ದ ಪೀಪಲ್ ಆಫ್ ಇಂಡಿಯಾ’ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನದ ದೃಷ್ಟಿಕೋನಗಳು ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
‘ಭಾರತದ ಪ್ರಜೆಗಳಾದ ನಾವು ಸಂವಿಧಾನದ ಪೀಠಿಕೆ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ಅಂಬೇಡ್ಕರ್ ಅಶಯಗಳಾದ ಶಿಕ್ಷಣ, ಸಂಘಟನೆ, ಹೋರಾಟವನ್ನು ಮೈಗೂಡಿಸಿಕೊಳ್ಳಬೇಕು’ ಎಂದರು.
‘ಮತದಾನದ ಮಹತ್ವ ತಿಳಿಯದೆ ಕೆಲವರು ಮತವನ್ನು ಹಣದ ಆಸೆಗೆ ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಮತವನ್ನು ಪ್ರಮಾಣಿಕವಾಗಿ ಚಲಾಯಿಸುವುದು ನಮ್ಮ ಕೈಯಲ್ಲಿದೆ’ ಎಂದರು.
ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ‘ಮಹಿಳೆಯರಿಗೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಕ್ಕು ದೊರಕಿಸಿಕೊಟ್ಟುವರು ಅಂಬೇಡ್ಕರ್’ ಎಂದರು. ವಕೀಲ ಸತ್ಯನಾರಾಯಣ ಉಪನ್ಯಾಸ ನೀಡಿದರು. ಪ್ರಾಂಶುಪಾಲೆ ಪುಷ್ಪಭಾರತಿ ಅಧ್ಯಕ್ಷತೆ ವಹಿಸಿದ್ದರು, ಐಸಿರಿ ಫೌಂಡೇಷನ್ ಅಧ್ಯಕ್ಷ ರೋಹನ್ ಭಾಗರ್ವಪುರಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.