ಬೀರೂರು (ಕಡೂರು): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಕೂಸು, ಬಡಜನರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ದೇಶಕ್ಕೇ ಮಾದರಿ ಯೋಜನೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಬೀರೂರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಪ್ರವಾಸಿ ಮಂದಿರ ರಸ್ತೆಯಲ್ಲಿ ಶನಿವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಜತೆಗೆ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಕ್ರಮ ವಹಿಸಿರುವುದು ರಾಜ್ಯ ಸರ್ಕಾರದ ಜನಪರ ಕಾಳಜಿಗೆ ಉದಾಹರಣೆಯಾಗಿದೆ. ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಇಲ್ಲಿನ ಕ್ಯಾಂಟೀನ್ ಸ್ಥಾಪನೆಗೆ ಭೂಮಿಪೂಜೆ ನೆರವೇರಿಸಿದ್ದರು. ಅಡೆತಡೆಗಳ ನಡುವೆಯೂ ಕ್ಯಾಂಟೀನ್ ಸ್ಥಾಪನೆಗೆ ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದರು.
ಕೋವಿಡ್ ನಂತರದಲ್ಲಿ ಜನರ ಜೀವನ ನಿರ್ವಹಣೆ ದುರ್ಭರವಾಗಿತ್ತು, ಇಂಥ ಸಮಯದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಎರಡೇ ತಿಂಗಳಿನಲ್ಲಿ ಐದೂ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿತು. ಅದರ ಫಲವಾಗಿ ಯೋಜನೆಗಳನ್ನು ಬಾಹ್ಯವಾಗಿ ವಿರೋಧಿಸುವವರೂ ಸೇರಿ ಎಲ್ಲ ವರ್ಗಗಳ ಜನರೂ ಒಂದಲ್ಲ ಒಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಯಾಗಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪುರಸಭಾಧ್ಯಕ್ಷೆ ಭಾಗ್ಯಲಕ್ಷ್ಮಿಮೋಹನ್ ಮಾತನಾಡಿ, ಸಾಮಾನ್ಯ ವರ್ಗಕ್ಕೆ ಅನುಕೂಲವಾಗಿರುವ ಇಂದಿರಾ ಕ್ಯಾಂಟೀನ್ ಯಶಸ್ವಿಯಾಗಿ ಜನರನ್ನು ತಲುಪಿ ಹಸಿವು ನೀಗಿಸಲಿ ಎಂದರು.
ಪುರಸಭೆ ಮಾಜಿ ಅಧ್ಯಕ್ಷೆ ವನಿತಾ ಮಧುಬಾವಿಮನೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪುರಸಭೆ ಉಪಾಧ್ಯಕ್ಷ ಎನ್.ಎಂ.ನಾಗರಾಜ್, ಸ್ಥಾಯಿಸಮಿತಿ ಅಧ್ಯಕ್ಷ ಜಿ.ಲಕ್ಷ್ಮಣ್, ಸದಸ್ಯರಾದ ಬಿ.ಕೆ.ಶಶಿಧರ್, ಜಿಮ್ ರಾಜು, ಆಶ್ರಯ ಸಮಿತಿ ಸದಸ್ಯ ಬಿ.ಟಿ.ಚಂದ್ರಶೇಖರ್ ಮಾತನಾಡಿದರು.
ಪುರಸಭೆ ಮಾಜಿ ಅಧ್ಯಕ್ಷ ವಿ.ಜಯರಾಮ್, ಮುಖ್ಯಾಧಿಕಾರಿ ಜಿ.ಪ್ರಕಾಶ್, ಸದಸ್ಯರಾದ ಬಿ.ಆರ್.ರವಿಕುಮಾರ್, ಶಾರದಾ ರುದ್ರಪ್ಪ, ಲೋಕೇಶಪ್ಪ, ಟಿ.ಗಂಗಾಧರ್, ಜ್ಯೋತಿ ಸಂತೋಷ್, ಮಾನಿಕ್ ಬಾಷಾ, ನಾಮಿನಿ ಸದಸ್ಯರು, ಜಿಲ್ಲಾ ಯೋಜನಾ ನಿರ್ದೇಶಕ ಗೋಪಾಲ್ ಜಾಧವ್, ಕೆಆರ್ಐಡಿಎಲ್ ಇಇ ಅಶ್ವಿನಿ, ಬೀರೂರು ಸಿಪಿಐ ಶ್ರೀಕಾಂತ್, ಆಶ್ರಯ ಸಮಿತಿ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.