ADVERTISEMENT

ಇಂದಿರಾಗಾಂಧಿ ಬಡಾವಣೆ: ಕಟ್ಟಡ ತೆರವು ಕಾರ್ಯಾಚರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 5:12 IST
Last Updated 5 ಜುಲೈ 2022, 5:12 IST
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಿ.ಗಾಯತ್ರಿ ಶಾಂತೇಗೌಡ, ವಕ್ತಾರ ಎಚ್.ಎಚ್.ದೇವರಾಜ್, ಮುಖಂಡರಾದ ಎಂ.ಎಲ್.ಮೂರ್ತಿ, ಎಚ್.ಪಿ.ಮಂಜೇಗೌಡ, ಮಹಮದ್ ನಯಾಜ್ ಇದ್ದರು.
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಿ.ಗಾಯತ್ರಿ ಶಾಂತೇಗೌಡ, ವಕ್ತಾರ ಎಚ್.ಎಚ್.ದೇವರಾಜ್, ಮುಖಂಡರಾದ ಎಂ.ಎಲ್.ಮೂರ್ತಿ, ಎಚ್.ಪಿ.ಮಂಜೇಗೌಡ, ಮಹಮದ್ ನಯಾಜ್ ಇದ್ದರು.   

ಚಿಕ್ಕಮಗಳೂರು: ನಗರದ ಇಂದಿರಾಗಾಂಧಿ ಬಡಾವಣೆಯಲ್ಲಿ ನಗರಸಭೆ ವತಿಯಿಂದ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಸಂತ್ರಸ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಸ್ವಲ್ಪ ಸಮಯದ ನಂತರ ನಗರಸಭೆ ಎದುರು ಪ್ರತಿಭಟನೆ ನಡೆಸಿದರು. ನಗರಸಭೆ ಆಡಳಿತದ ವಿರುದ್ಧ ಘೋಷಣೆ ಕೂಗಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಿ.ಗಾಯತ್ರಿ ಶಾಂತೇಗೌಡ ಮಾತನಾಡಿ, ಇಂದಿರಾಗಾಂಧಿ ಬಡಾವಣೆಯಲ್ಲಿ ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಸ್ಥರು, ಬಡವರು ಮನೆ ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಅವರಿಗೆ ನಿವೇಶನ ಮಂಜೂರಾತಿ ತಾತ್ಕಾಲಿಕ ಪತ್ರವನ್ನು ನೀಡಲಾಗಿದೆ. ಚುನಾವಣೆ ಸಮಯದಲ್ಲಿ ನಗರಸಭೆ ವತಿಯಿಂದ ಅವರಿಗೆಲ್ಲ ತಿಳಿವಳಿಕೆ ಪತ್ರ ನೀಡಲಾಗಿದೆ. ಅವರು ಅದನ್ನೆ ಹಕ್ಕುಪತ್ರವೆಂದು ಭಾವಿಸಿದ್ದಾರೆ. ಆದರೆ ಈಗ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಸಾಂತಿ ಕದಡುವ ಪ್ರಯತ್ನ ಮಾಡುತ್ತಿದೆ. ಭಾವನಾತ್ಮಕವಾಗಿ ಜನರನ್ನು ಕೆರಳಿಸುತ್ತಿದೆ. ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಪಕ್ಷದ ಮುಖಂಡ ಕೆ.ಮಹಮದ್ ಮಾತನಾಡಿ, ಇಂದಿರಾಗಾಂಧಿ ಬಡಾವಣೆಯಲ್ಲಿ ಬಡವರು ಕೂಲಿ ಹಣದಲ್ಲಿ ಶೆಡ್, ಮನೆ ನಿರ್ಮಿಸಿಕೊಂಡಿದ್ದಾರೆ. ಅವರ ಮನೆಗಳನ್ನು ನಗರಸಭೆಯಿಂದ ಧ್ವಂಸಗೊಳಿಸಿರುವುದು ಖಂಡನೀಯ. ಬಡವರಿಗೂ ಜೀವಿಸುವ ಹಕ್ಕು ಇದೆ ಎನ್ನುವುದನ್ನು ನಗರಸಭೆ ಆಡಳಿತ ಅರ್ಥ ಮಾಡಿಕೊಳ್ಳಬೇಕು ಎಂದರು.

ಪಕ್ಷದ ಮುಖಂಡರಾದ ಶಿವಾನಂದಸ್ವಾಮಿ, ನಯಾಜ್, ಶಿವಾನಂದ್, ಸುರೇಖಾಸಂಪತ್, ಗುಣವತಿ, ಸುದೀಪ್, ಪ್ರಸಾದ್ ಅಮೀನ್, ಸಂದೇಶ್, ಪರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.