ಕಡೂರು: ರೈತರು ಹಲಸು ಬೆಳೆಯತ್ತ ಹೆಚ್ಚು ಆಸಕ್ತಿ ತೋರದಿರುವುದು ವಿಪರ್ಯಾಸ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯ ಶಿವರಾಂ ಅಭಿಪ್ರಾಯಪಟ್ಟರು.
ಭಾರತೀಯ ಕೃಷಿ ಅನುಸಂಧಾನ ಪರಿಷತ್, ಮೂಡಿಗೆರೆ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕಾ ಇಲಾಖೆ,ವಿಶ್ವವಿದ್ಯಾಲಯಮತ್ತಿತರ ಸಂಸ್ಥೆಗಳ ಸಹಯೋಗದಲ್ಲಿ ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಮಂಗಳವಾರ ಆರಂಭವಾದ ಎರಡು ದಿನಗಳ ಹಲಸಿನ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಬೇರೆ ರಾಜ್ಯಗಳಲ್ಲಿ ರೈತರು ಹಲಸಿನ ತೋಟಗಳನ್ನೇ ಮಾಡುತ್ತಾರೆ. ಆದರೆ ನಮ್ಮ ರಾಜ್ಯದಲ್ಲಿ ರೈತರು ಒಂದೋ ಎರಡೋ ಹಲಸಿನ ಗಿಡ ಹಾಕುತ್ತಾರೆ. ಹಲಸನ್ನು ದೊಡ್ಡ ಪ್ರಮಾಣದಲ್ಲಿ ಬೆಳೆದರೆ ಲಾಭ ಪಡೆಯುವುದರಲ್ಲಿ ಅನುಮಾನವಿಲ್ಲ ಎಂದರು.
ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಡಾ.ವೇದಮೂರ್ತಿ ಮಾತನಾಡಿ, ಸಖರಾಯಪಟ್ಟಣ ಹಲಸು ಇಡೀ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಕಾಲ ಈಗಿಲ್ಲ. ಇದನ್ನು ಉಳಿಸಿಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ. ರೈತರು ಅಡಿಕೆಯತ್ತ ಆಕರ್ಷಿತರಾಗಿ ಹಲಸು ಬೆಳೆಯುವಲ್ಲಿ ಅನಾಸಕ್ತಿ ತೋರುತ್ತಿದ್ದಾರೆ ಎಂದರು.
ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ.ಬಿ.ಹೇಮ್ಲಾನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ವಿಜ್ಞಾನಿ ಡಾ.ಎ.ಟಿ.ಕೃಷ್ಣಮೂರ್ತಿ ಮಾತನಾಡಿದರು.
ಮೂಡಿಗೆರೆ ತೋಟಗಾರಿಕಾ ವಿಶ್ವವಿದ್ಯಾಲಯದ ಡೀನ್ ಡಾ.ನಾರಾಯಣ ಎಸ್.ಮಾವರ್ಕರ್,ಡಾ.ಡಿ.ತಿಪ್ಪೇಶ್, ಗ್ರಾಮಪಂಚಾಯಿತಿ ಅಧ್ಯಕ್ಷೆ ಎಚ್. ಶಕುಂತಲಾ, ಕೆನರಾ ಬ್ಯಾಂಕ್ ಸಹಾಯಕ ಮಹಾ ಪ್ರಬಂಧಕ ಅನಿಲ್ ಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ತಿರುಮಲೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಪ್ರಕಾಶ ರಾವ್, ಸಖರಾಯಪಟ್ಟಣ ಹಲಸು ಬೆಳೆಗಾರರ ಸಂಘದ ಅಧ್ಯಕ್ಷ ಎಸ್.ಬಿ.ಈಶ್ವರಪ್ಪ,ಸಚ್ಚಿದಾನಂದ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.