ಕೊಪ್ಪ: ‘ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಅಭಿವೃದ್ಧಿಯನ್ನು ಕಡೆಗಣಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಮೊಟ್ಟೆ ಎಸೆದ ವಿಚಾರಕ್ಕಾಗಿ ಕ್ಷೇತ್ರದಲ್ಲಿ ಶಾಂತಿ ಕದಡುವ ರೀತಿ ವರ್ತಿಸುತ್ತಿರು ವುದು ದುರದೃಷ್ಟಕರ ಸಂಗತಿ’ ಎಂದು ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಸುಧಾಕರ ಎಸ್.ಶೆಟ್ಟಿ ಹೇಳಿದರು.
‘ಶೃಂಗೇರಿ ಕ್ಷೇತ್ರದಲ್ಲಿ ಕಾಡುತ್ತಿರುವ ನಿರುದ್ಯೋಗ ಸಮಸ್ಯೆ, ಭೂಮಂಜೂರಾತಿ ಸಮಸ್ಯೆ, ಅತಿವೃಷ್ಟಿ ಸಮಸ್ಯೆ, ಗ್ರಾಮೀಣ ಭಾಗದಲ್ಲಿ ರಸ್ತೆ ಸಮಸ್ಯೆ, ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮತ್ತಿತರ ಸಮಸ್ಯೆ ಕೈಬಿಟ್ಟು, ಮೊಟ್ಟೆ ವಿಚಾರವನ್ನು ಪ್ರಧಾನವಾಗಿಟ್ಟುಕೊಂಡು ಎರಡೂ ಪಕ್ಷದವರು ಕೈ ಕೈ ಮಿಲಾಯಿಸಲು ಹೊರಟಿದ್ದು ನಿಜಕ್ಕೂ ನಾಚಿಕೆ ಗೇಡಿನ ಸಂಗತಿ ಯಾಗಿದೆ’ ಎಂದು ಟೀಕಿಸಿದ್ದಾರೆ.
‘ಯಾರೊ ಕಿಡಿಗೇಡಿ ಎಸಗಿದ ಕೃತ್ಯಕ್ಕೆ ರಾಜಕೀಯ ಬಣ್ಣ ಹಚ್ಚಿ ಪ್ರಕರಣವನ್ನು ಜೀವಂತವಾಗಿಸುವ ಹುನ್ನಾರ ನಡೆಯುತ್ತಿದೆ. ಇದನ್ನು ರಾಜ್ಯಮಟ್ಟದ ಸಮಸ್ಯೆ ಎಂದು ಬಿಂಬಿಸುತ್ತಿರುವುದು ವ್ಯವಸ್ಥೆಯ ದುರಂತವಾಗಿದೆ. ಆದ್ದರಿಂದ ರಾಷ್ಟ್ರೀಯ ಪಕ್ಷಗಳು ಜನಸಾಮಾನ್ಯರ ಬದುಕನ್ನು ಕಾಡುತ್ತಿರುವ ಸಮಸ್ಯೆ ಬಗೆಹರಿಸಲು ಗಮನ ಹರಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.