ADVERTISEMENT

‘ಹೋಬಳಿ ಮಟ್ಟದಲ್ಲಿ ಸಾಹಿತ್ಯ ಸಮ್ಮೇಳನ’

ಕನ್ನಡ ಸಾಹಿತ್ಯ ಪರಿಷತ್‌ ಕಸಬಾ ಹೋಬಳಿ ಘಟಕದ ಸೇವಾದೀಕ್ಷೆ

​ಪ್ರಜಾವಾಣಿ ವಾರ್ತೆ
Published 22 ಮೇ 2022, 3:01 IST
Last Updated 22 ಮೇ 2022, 3:01 IST
ನರಸಿಂಹರಾಜಪುರದಲ್ಲಿ ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷ್ ಹೋಬಳಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷ ಎಸ್.ಎಚ್.ಪೂರ್ಣೇಶ್ ಅವರಿಗೆ ಸಾಹಿತ್ಯ ಪರಿಷತ್ ಧ್ವಜ ಹಸ್ತಾಂತರಿಸಲಾಯಿತು.
ನರಸಿಂಹರಾಜಪುರದಲ್ಲಿ ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷ್ ಹೋಬಳಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷ ಎಸ್.ಎಚ್.ಪೂರ್ಣೇಶ್ ಅವರಿಗೆ ಸಾಹಿತ್ಯ ಪರಿಷತ್ ಧ್ವಜ ಹಸ್ತಾಂತರಿಸಲಾಯಿತು.   

ನರಸಿಂಹರಾಜಪುರ: ಸಾಹಿತ್ಯ ಪರಿಷತ್ ವತಿಯಿಂದ ಗ್ರಾಮ ಹಾಗೂ ಹೋಬಳಿ ಮಟ್ಟದಲ್ಲಿ ಸಾಹಿತ್ಯ ಸಮ್ಮೇಳನ ಆಯೋಜಿಸಲು ಚಿಂತನೆ ನಡೆಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ಇಲ್ಲಿನ ಅಗ್ರಹಾರದ ಉಮಾ ಮಹೇಶ್ವರಿ ಸಮುದಾಯ ಭವನದಲ್ಲಿ ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷತ್‌ನ ಕಸಬಾ ಹೋಬಳಿ ಘಟಕದ ಸೇವಾ ದೀಕ್ಷೆ ಹಾಗೂ ಪದಗ್ರಹಣ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲೂ ಸಮ್ಮೇಳನ ಆಯೋಜಿಸಲಾಗುವುದು. ದತ್ತಿ ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳೊಂದಿಗೆ ಮುಖಾ ಮುಖಿ ಹಮ್ಮಿಕೊಳ್ಳಲಾಗುವುದು. ಜಿಲ್ಲೆಯ ಸಾಹಿತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪರಿಚಯಿಸಲಾಗುವುದು. ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಜಿಲ್ಲೆಯಲ್ಲಿ ಆಯೋಜಿಸಲಾಗುವುದು ಎಂದರು.

ADVERTISEMENT

ಪ್ರತಿಜ್ಞಾ ವಿಧಿ ಬೋಧಿಸಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್ ಮಾತನಾಡಿ, ಭಾಷೆ ಸಾಹಿತ್ಯ ಉಳಿಯಲು ವಿದ್ಯಾರ್ಥಿಗಳು ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಭಾಷೆಗೆ ಧಕ್ಕೆಯಾದರೆ ಸಂಸ್ಕೃತಿಗೆ ಧಕ್ಕೆಯಾಗಲಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಎಸ್.ಎಸ್.ಸಂತೋಷ್ ಕುಮಾರ್ ಮಾತನಾಡಿ, ಮಕ್ಕಳಲ್ಲಿ ಭಾಷಾ ಪ್ರೇಮ ಮತ್ತು ಸಾಹಿತ್ಯದ ಬಗ್ಗೆ ಒಲವನ್ನು ಬಾಲ್ಯ ದಿಂದಲೇ ಬೆಳೆಸಿದರೆ ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.

ಸಾಹಿತ್ಯ ಚಿಂತಕ ಇಮ್ರಾನ್‌ ಬೇಗ್, ಕನ್ನಡ ನಾಡುನುಡಿ ಹಾಗೂ ಸಾಹಿತ್ಯ ಪರಿಷತ್ತು ನಡೆದು ಬಂದ ಹಾದಿ ಬಗ್ಗೆ ಉಪನ್ಯಾಸ ನೀಡಿದರು.

ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಸಾಂಸ್ಕೃತಿಕ ಚಿಂತಕ ವಿನಯ್ ಕಣಿವೆ ವಹಿಸಿದ್ದರು.

ಸಾಹಿತ್ಯ ಪರಿಷತ್ ಕಸಬಾ ಹೋಬಳಿ ಘಟಕದ ಅಧ್ಯಕ್ಷ ಎಚ್.ಎಚ್.ಪೂರ್ಣೇಶ್, ನಿಕಟಪೂರ್ವ ಅಧ್ಯಕ್ಷ ಕೆ.ಎಸ್.ರಾಜಕುಮಾರ್, ಸಾಹಿತ್ಯ ಪರಿಷತ್ ನಗರ ಘಟಕದ ನೂತನ ಅಧ್ಯಕ್ಷೆ ಜುಬೇದಾ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಾ ನಂಜುಂಡಸ್ವಾಮಿ, ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಜಿಲ್ಲಾ ಘಟಕದ ಅಧ್ಯಕ್ಷ ಹಾತೂರು ಪ್ರಭಾಕರ್, ಸಾಹಿತ್ಯ ಪರಿಷತ್‌ನ ತುಪ್ಪೂರು ಮಂಜುನಾಥ್, ಅಬ್ದುಲ್ ವಹಾಬ್, ಜೇಸಿಐ ಅಧ್ಯಕ್ಷ ವಿ.ಪಿ.ಚರಣ್ ರಾಜ್, ರೋಟರಿ ಅಧ್ಯಕ್ಷ ಪಿ.ಪ್ರಭಾಕರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಪ್ರಸಾದ್ ಇದ್ದರು.

ವರ್ತಕ ಎನ್.ಆರ್.ಸತ್ಯನಾರಾಯಣಶ್ರೇಷ್ಠಿ, ಸೈಯದ್ ಸಾಜಿದ್, ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲ ಕೃಷ್ಣಮೂರ್ತಿ, ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಕೆ.ಉಮೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿದ್ಧಲಿಂಗಪ್ಪ, ತೀರ್ಥರಾಜ್ ಅವರನ್ನು ಅಭಿನಂದಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.