ಚಿಕ್ಕಮಗಳೂರು: ‘ಲಿಂಗಾಯತರಿಗೆ ಪ್ರಾಮುಖ್ಯ ಕೊಡಬೇಕಿಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿರುವುದಾಗಿ ಪತ್ರಿಕಾ ಸುದ್ದಿರೂಪದ ತುಣುಕೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಎಂಬಾತನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ನಗರದ ಬಸವನನಹಳ್ಳಿ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಕೋರ್ಟ್ಗೆ ಹಾಜರುಪಡಿಸಿದ್ದಾರೆ.
‘ದಾವಣಗೆರೆ ಕಾಂಗ್ರೆಸ್ ಜಿಲ್ಲಾ ಘಟಕದ ಐಟಿ ಸೆಲ್ನ ಮಾಜಿ ಸದಸ್ಯ ಹರೀಶ್ ಎಂಬಾತನನ್ನು ಬಂಧಿಸಲಾಗಿದೆ. ತನ್ನ ‘ಫೇಸ್ ಬುಕ್’ ಖಾತೆಗೆ ಬಂದಿದ್ದ ಪೋಸ್ಟ್ ಹಂಚಿಕೊಂಡಿದ್ದೆ, ಆ ಪೋಸ್ಟ್ ತಾನು ಸೃಷ್ಟಿಸಿದ್ದಲ್ಲ ಎಂದು ವಿಚಾರಣೆ ವೇಳೆ ಆರೋಪಿ ಹೇಳಿದ್ದಾರೆ’ ಎಂದು ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದರು.
ಪತ್ರಿಕಾ ಸುದ್ದಿರೂಪದ ತುಣುಕೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯಬಿಟ್ಟಿದ್ದಕ್ಕೆ ಸಂಬಂಧಿಸಿದಂತೆ ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದರು. ಬಸವನಹಳ್ಳಿ ಠಾಣೆಯಲ್ಲಿ ಮೂವರು ವಿರದ್ಧ ಪ್ರಕರಣ ದಾಖಲಾಗಿತ್ತು. ಐಪಿಸಿ 505(2) (ಜಾತಿ, ಧರ್ಮ ಹಾಗೂ ಎರಡು ಗುಂಪಿನ ನಡುವೆ ದ್ವೇಷ ಉಂಟು ಮಾಡುವ ಹೇಳಿಕೆ ಪ್ರಚುರಪಡಿಸಿದ) ಕಲಂನಡಿ ಪ್ರಕರಣ ದಾಖಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.