
ಚಿಕ್ಕಮಗಳೂರು: ಗುತ್ತಿಗೆದಾರರಿಗೆ ಬಾಕಿ ಉಳಿಸಿಕೊಂಡಿರುವ ₹37 ಸಾವಿರ ಕೋಟಿ ಹಣ ಮರು ಪಾವತಿಗೆ ಒತ್ತಾಯಿಸಿ ಮಾ. 5ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಹೇಳಿದರು.
ನಗರದ ಜಿಲ್ಲಾ ಗುತ್ತಿಗೆದಾರರ ಸಂಘದ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ‘ಗುತ್ತಿಗೆದಾರರ ಸಂಕಷ್ಟ ಮನದಟ್ಟು ಮಾಡಲು ಗುತ್ತಿಗೆದಾರರು ಕುಟುಂಬ ಸಮೇತ ಪ್ರತಿಭಟನೆಯಲ್ಲಿ ಭಾಗಿಯಾಗುವ ಮೂಲಕ ಸರ್ಕಾರಕ್ಕೆ ಗುತ್ತಿಗೆದಾರರ ಸಂಕಷ್ಟದ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಹಣ ಬಿಡುಗಡೆಗೆ ಮಾಡಬೇಕು. ನಿರ್ಲಕ್ಷ್ಯ ಮಾಡಿದರೆ 7ರಂದು ರಾಜ್ಯದಾದ್ಯಂತ ಸಾವಿರಾರು ಗುತ್ತಿಗೆದಾರರು ಕೆಲಸ ಸ್ಥಗಿತಗೊಳಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.
ಕಾಮಗಾರಿ ನಿರ್ವಹಿಸಿದ್ದರೂ ಮೂರು ವರ್ಷಗಳಿಂದ ಬಾಕಿ ಬಿಲ್ ಪಾವತಿಸಿಲ್ಲ. ಮುಖ್ಯಮಂತ್ರಿ ಮತ್ತು ಸಂಬಂಧಿಸಿದ ಸಚಿವರಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಬಾಕಿ ಬಿಡುಗಡೆ ಮಾಡದೆ ಸತಾಯಿಸಲಾಗುತ್ತಿದೆ ಎಂದು ದೂರಿದರು.
ರಾಜ್ಯದಾದ್ಯಂತ ಸಣ್ಣ ಗುತ್ತಿಗೆದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸರ್ಕಾರಿ ಕೆಲಸಗಳು ನಿಗದಿತ ಸಮಯಕ್ಕೆ ಪೂರ್ಣಗೊಳಿಸಲಾಗಿದೆ. ಇದಕ್ಕಾಗಿ ಗುತ್ತಿಗೆದಾರರು ಸಾಲ ಮಾಡಿ, ಚಿನ್ನಾಭರಣ ಮತ್ತು ನಿವೇಶನ ಅಡವಿಟ್ಟು ಕಾಮಗಾರಿ ಪೂರ್ಣಗೊಳಿಸಿದ್ದಾರೆ. ಬಡ್ಡಿ ಪಾವತಿಸಿ ಸುಸ್ತಾಗಿದ್ದಾರೆ ಎಂದರು.
‘ಇನ್ನೊಂದೆಡೆ ಜಿಎಸ್ಟಿ ಪಾವತಿಗೆ ನೋಟಿಸ್ ಮೇಲೆ ನೋಟಿಸ್ಗಳು ಬರುತ್ತಿವೆ. ನಮಗೆ ಕೊಡಬೇಕಾದ ಬಾಕಿ ಮೊತ್ತದಲ್ಲೇ ಜಿಎಸ್ಟಿ ಕಡಿತ ಮಾಡಿಕೊಳ್ಳಲಿ. ನಮ್ಮ ಸಮಸ್ಯೆಗಳನ್ನು ಸರ್ಕಾರ ಅರಿತು ಪರಿಹಾರ ಸೂಚಿಸಬೇಕು’ ಎಂದು ಒತ್ತಾಯಿಸಿದರು.
ರಾಜ್ಯ ಗುತ್ತಿಗೆದಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಶಾಂತೇಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬಿ.ಸಿ. ದಿನೇಶ್, ಉಪಾಧ್ಯಕ್ಷ ಬಿ.ಎಸ್. ಗುರುಸಿದ್ದಪ್ಪ, ಮಂಜುನಾಥ್, ಜಂಟಿ ಕಾರ್ಯದರ್ಶಿ ಬಿ.ಎಲ್ .ಮುನಿರಾಜು, ಲಕ್ಷ್ಮಿಪತಿ, ಸುರೇಶ್ಕುಮಾರ್, ಸಂಘಟನಾ ಕಾರ್ಯದರ್ಶಿ ರವಿ ಚಂಗಪ್ಪ, ಹೇಮಂತಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.