ನರಸಿಂಹರಾಜಪುರ: ‘ತಾಲ್ಲೂಕು ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ವಿಪತ್ತು ನಿರ್ವಹಣೆಗೆ ನಿಯೋಜನೆಗೊಂಡ ಅಧಿಕಾರಿಗಳು ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ’ ಎಂದು ತಹಶೀಲ್ದಾರ್ ಎಸ್.ವಿಶ್ವನಾಥ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ನಡೆದ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಮಳೆಗಾಲದ ಅವಧಿಯಲ್ಲಿ ಯಾವುದೇ ಅನಾಹುತಗಳು ಸಂಭವಿಸಿದಲ್ಲಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಬೇಕು. ಮೊಬೈಲ್ ಸ್ವಿಚ್ ಆಫ್ ಮಾಡಬಾರದು. ಕೆಲಸ ಮಾಡುವಲ್ಲಿ ನಿರ್ಲಕ್ಷ್ಯ ತೋರಿದರೆ ವಿಪತ್ತು ನಿರ್ವಹಣಾ ಕಾಯ್ದೆಯ ಪ್ರಕಾರ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.
‘ರಸ್ತೆ ಸಂಪರ್ಕ ಕಡಿತಗೊಂಡರೆ ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಹಾಗೂ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಅದನ್ನು ತೆರವುಗೊಳಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದರು.
ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ವೀರಪ್ರಸಾದ್ ಮಾತನಾಡಿ, ‘ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರ ಆರಂಭವಾದರೆ ಅಲ್ಲಿ ಇರುವ ಜನರನ್ನು ನೋಡಿಕೊಳ್ಳಲು ತಾಲ್ಲೂಕು ಹಾಗೂ ಹೋಬಳಿ ಮಟ್ಟದ ವೈದ್ಯರ ತಂಡವಿದೆ’ ಎಂದರು.
ಪ.ಪಂ. ಮುಖ್ಯಾಧಿಕಾರಿ ಎ.ಚಂದ್ರಕಾಂತ್ ಮಾತನಾಡಿ, ‘ಪಟ್ಟಣದ ವ್ಯಾಪ್ತಿಯಲ್ಲಿ ಚರಂಡಿ ನೀರು ಸರಾಗವಾಗಿ ಹರಿಯುವಂತೆ ಸ್ವಚ್ಛಗೊಳಿಸಲಾಗಿದೆ. ಪಟ್ಟಣ ಪಂಚಾಯಿತಿಯಲ್ಲೂ ಕಂಟ್ರೋಲ್ ರೋಂ ಆರಂಭಿಸಲಾಗಿದೆ. ಕಾಳಜಿ ಕೇಂದ್ರಕ್ಕಾಗಿ ಅಂಬೇಡ್ಕರ್ ಭವನ, ಹೌಸಿಂಗ್ ಬೋರ್ಡ್ ಕಾಲೋನಿ ಸಮುದಾಯ ಭವನ, ಮಹಾವೀರ ಭವನ ಕಾಯ್ದಿರಿಸಲಾಗಿದೆ’ ಎಂದರು.
ಮೆಸ್ಕಾಂ ಎಂಜಿನಿಯರ್ ಗೌತಮ್ ಮಾತನಾಡಿ, ‘ಮಳೆಯಿಂದಾಗಿ ಇದುವರೆಗೆ 79 ವಿದ್ಯುತ್ ಕಂಬಗಳು ಧರೆಗುರುಳಿವೆ. ಇವುಗಳನ್ನು ಬದಲಾಯಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ತಾಲ್ಲೂಕು ಪಂಚಾಯಿತಿ ಇಓ ಎಸ್.ನಯನಾ, ಪೊಲೀಸ್ ಇನ್ಸ್ಪೆಕ್ಟರ್ ವಸಂತ್ ಶಂಕರ್ ಭಾಗವತ್ ಮಾತನಾಡಿದರು. ಗ್ರೇಡ್ 2 ತಹಶೀಲ್ದಾರ್ ಚಂದ್ರಶೇಖರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.