ಶೃಂಗೇರಿ: ‘ಕನ್ನಡ ಭಾಷೆಯನ್ನು ಉಳಿಸಲು ಕನ್ನಡಿಗರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಕರ್ನಾಟಕ ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಜ್ಯ’ ಎಂದು ತಹಶೀಲ್ದಾರ್ ಪಿ.ಗೌರಮ್ಮ ಹೇಳಿದರು.
ಶೃಂಗೇರಿ ತಾಲ್ಲೂಕಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
‘ಮಾತೃಭಾಷೆಗೂ ಪ್ರಾಧಾನ್ಯ ದೊರ ಕಬೇಕು. ಕಲೆ, ಸಾಹಿತ್ಯ, ಸಂಸ್ಕೃತಿಗೆ ಆದ್ಯತೆ ನೀಡಿದ ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನು ಉಳಿಸುವ ಹೊಣೆಗಾರಿಕೆ ಕನ್ನಡಿಗರ ಮೇಲಿದೆ’ ಎಂದರು.
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಮಾತನಾಡಿ, ‘ಕನ್ನಡಕ್ಕೆ ತನ್ನದೇ ಆದ ಪರಂಪರೆ, ಸಂಸ್ಕೃತಿ ಇದೆ. ಬಂಗಾಳಿ ಸಾಹಿತ್ಯದ ಬಳಿಕ ಕನ್ನಡ ಭಾಷೆಗೆ ಉತ್ಕೃಷ್ಟವಾದ ಸ್ಥಾನವಿದೆ. ನಮ್ಮ ಆಚರಣೆಗಳು, ಸಂಪ್ರದಾಯಗಳ ನಡುವೆ ಕನ್ನಡದ ಗ್ರಾಮ್ಯ ಭಾಷೆಯಿದೆ. ಜಾನಪದ ಸಾಹಿತ್ಯ, ಗೀತೆ, ಸಾಂಸ್ಕೃತಿಕ ಉತ್ಸವದಲ್ಲಿ ಕನ್ನಡತನದ ನೆಲೆಗಟ್ಟಿದೆ’ ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಮಾತನಾಡಿ, ‘ರಾಜ್ಯದಲ್ಲಿ ಒಟ್ಟು 346 ಕನ್ನಡ ಸಂಘಗಳಿವೆ. ಆದರೆ, ಶೇ 28 ರಷ್ಟು ಜನರು ಕನ್ನಡ ಮಾತನಾಡುತ್ತಿದ್ದಾರೆ. ನಮ್ಮ ಕನ್ನಡಕ್ಕೆ ಸುದೀರ್ಘವಾದ ಇತಿಹಾಸವಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕನ್ನಡ ತನ ಉಳಿದಿದೆ. ನಗರಗಳಲ್ಲಿ ಕನ್ನಡ ಭಾಷೆ ಅಭಿವೃದ್ಧಿಪಡಿಸಬೇಕು’ ಎಂದರು.
ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಚ್.ಎಸ್ ಸುಬ್ರಹ್ಮಣ್ಯ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಪ್ರಕಾಶ್ ಮತ್ತು ಸದಸ್ಯರು, ಇಒ ಜಯರಾಮ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಪಾದ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.