ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳಿಂದ ಪ್ರಾಣಹಾನಿ, ಬೆಳೆಹಾನಿ ನಿಯಂತ್ರಣ ಮಾಡಲು ವೈಜ್ಞಾನಿಕ ರೀತಿಯಲ್ಲಿ ಶಾಶ್ವತ ಪರಿಹಾರ ಕಾರ್ಯ ಯೋಜನೆ ರೂಪಿಸುವುದಾಗಿ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದ್ರ ಯಾದವ್ ಭರವಸೆ ನೀಡಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
‘ದೆಹಲಿಯಲ್ಲಿ ಮಂಗಳವಾರ ಅರಣ್ಯ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಈ ವೇಳೆ ಆನೆ ದಾಳಿಯಿಂದ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಹಾನಿ ಬಗ್ಗೆ ವಿವರವಾದ ಮಾಹಿತಿ ನೀಡಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಬುಧವಾರ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.
‘ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಚಿಕ್ಕಮಗಳೂರು ತಾಲ್ಲೂಕಿನ ವಿವಿಧೆಡೆ ಆನೆ ದಾಳಿಯಿಂದ 5 ಜನ ಮೃತಪಟ್ಟಿದ್ದಾರೆ. ಒಂದು ವಾರದ ಅಂತರದಲ್ಲೇ ಬನ್ನೂರಿನ ಅನಿತಾ, ಶೃಂಗೇರಿಯ ಸುಬ್ಬೇಗೌಡ ಬಲಿಯಾಗಿದ್ದಾರೆ. ಆನೆಗಳ ದಾಳಿಯಿಂದ ಕೃಷಿ ಚಟುವಟಿಕೆ ನಡೆಸಲು ಕಷ್ಟವಾಗುತ್ತಿದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ’ ಎಂದು ತಿಳಿಸಿದ್ದಾರೆ.
ರಾಜ್ಯ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮೂಲಕ ವರದಿ ಪಡೆದು ಕಾರ್ಯ ಯೋಜನೆ ರೂಪಿಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.