ಚಿಕ್ಕಮಗಳೂರು: ಪಕ್ಷ ಹೊಸ ಜವಾಬ್ದಾರಿಯನ್ನು ನನಗೆ ವಹಿಸಿದೆ, ಅದನ್ನು ಯಶಸ್ವಿಯಾಗಿ ನಿಭಾಯಿಸುತ್ತೇನೆಎಂದುಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡದಿನೇಶ್ ಗುಂಡೂರಾವ್ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಸಂದರ್ಭದಲ್ಲಿ ಪಕ್ಷವು ಪ್ರಮುಖ ಜವಾಬ್ದಾರಿ ನೀಡಿರುವುದು ಹೆಮ್ಮೆಯ ವಿಚಾರ. ಕಾಂಗ್ರೆಸ್– ಜೆಡಿಎಸ್ ಮೈತ್ರಿಯ ಸಮ್ಮಿಶ್ರ ಸರ್ಕಾರವನ್ನು ಯಶಸ್ವಿಯಾಗಿ ನಡೆಯಬೇಕು. ಜತೆಗೆ ಲೋಕಸಭೆ ಚುನಾವಣೆಗೆ ಪಕ್ಷ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಸ್ಫೂರ್ತಿ ತುಂಬಿ ಕೆಲಸ ಮಾಡುತ್ತೇನೆ’ ಎಂದು ಉತ್ತರಿಸಿದರು.
‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಖಚಿತವಾಗಿತ್ತು. ಅಧ್ಯಕ್ಷ ಆಕಾಂಕ್ಷಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇತ್ತು. ರಾಜ್ಯದ ಮುಖಂಡರ ಅಭಿಪ್ರಾಯ ಪಡೆದು ರಾಹುಲ್ ಗಾಂಧಿ ಮತ್ತು ವೇಣುಗೋಪಾಲ್ ಅಂತಿಮಗೊಳಿಸಿದ್ದಾರೆ. ನಾನು ತುಂಬಾ ಹಿರಿಯನೂ ಅಲ್ಲ, ತುಂಬಾ ಕಿರಿಯನೂ ಅಲ್ಲ. ಸಮತೋಲನದಲ್ಲಿ ಎಲ್ಲರನ್ನೂ ಸಂಭಾಳಿಸುತ್ತೇನೆ. ಜಿಲ್ಲೆ, ತಾಲ್ಲೂಕುಗಳಲ್ಲಿ ಹೊಸ ನಾಯಕತ್ವ ಬೆಳೆಸುವ ಕೆಲಸ ಮಾಡುತ್ತೇನೆ’ ಎಂದರು.
ಪಕ್ಷದಲ್ಲಿ ಅನೇಕ ವರ್ಷಗಳಿಂದ ಕೆಲಸ ಮಾಡಿದ್ದೇನೆ. ಬೆಂಗಳೂರಿನ ಜಿಲ್ಲಾಧ್ಯಕ್ಷ, ಯುವ ಘಟಕ ಅಧ್ಯಕ್ಷ, ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ ಅನುಭವ ಇದೆ. ಈ ಅನುಭವಗಳೊಂದಿಗೆ ಪಕ್ಷ ಸಂಘಟನೆ ಮಾಡುತ್ತೇನೆ. ಕಾರ್ಯಾಧ್ಯಕ್ಷರಾಗಿ ನೇಮಕವಾಗಿರುವ ಈಶ್ವರ ಖಂಡ್ರೆ, ಪಕ್ಷದ ವರಿಷ್ಠರು ಎಲ್ಲರೂ ಒಗ್ಗೂಡಿ ಪಕ್ಷ ಸಂಘಟನೆ ಮಾಡುತ್ತೇವೆ. ಪಕ್ಷದ ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.
ಪತ್ನಿ ಟಬು ಮಾತನಾಡಿ, ‘ದಿನೇಶ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಬಹಳ ಖುಷಿಯಾಗಿದೆ. ಅವರ ಎಲ್ಲ ಕಾರ್ಯಗಳಿಗೆ ಸದಾ ಬೆಂಬಲವಾಗಿ ಇರುತ್ತೇನೆ’ ಎಂದರು.ಪುತ್ರಿಯರಾದ ಅಮೀರಾ, ಅನನ್ಯಾ ಜತೆಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.