ಕಡತ
(ಸಾಂದರ್ಭಿಕ ಚಿತ್ರ)
ಮೂಡಿಗೆರೆ: ತಾಲ್ಲೂಕಿನಲ್ಲಿ ಪೌತಿ ಖಾತೆ ಅಭಿಯಾನ ನಡೆಯುತ್ತಿದ್ದು, ಇ–ಪೌತಿ ಖಾತೆ ಮಾಡಿಕೊಳ್ಳಲು ಕಂದಾಯ ಇಲಾಖೆಯ ಸಂಬಂಧಿಸಿದ ರಾಜಸ್ವ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ತಹಶೀಲ್ದಾರ್ ಅಶ್ವಿನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕು ವ್ಯಾಪ್ತಿಯಲ್ಲಿ ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ಪೌತಿ ಅಥವಾ ವಾರಸಾ ರೀತ್ಯಾ ಮಾಲೀಕತ್ವವು ಮೃತರ ಉತ್ತರಾಧಿಕಾರಿಗಳ ಹೆಸರಿಗೆ ಬದಲಾವಣೆ ಮಾಡಿಸಿಕೊಳ್ಳಬೇಕಾಗಿದ್ದು, ವಾರಸುದಾರರು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಆಡಳಿತಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ.
ಪೌತಿ ಖಾತೆಯಾಗದ ಜಮೀನನ್ನು ವಾರಸುದಾರರು ಸ್ವಾಧೀನ ಹೊಂದಿದ್ದರೂ, ಕುಟುಂಬಸ್ಥರಿಗೆ ಜಮೀನು ಅಭಿವೃದ್ಧಿಪಡಿಸಲು ಸಾಲ ಸೌಲಭ್ಯ ದೊರೆಯುವುದಿಲ್ಲ. ಪ್ರಕೃತಿ ವಿಕೋಪದಿಂದ ಫಸಲು ನಾಶವಾದಾಗ ಸರ್ಕಾರದಿಂದ ನೀಡಲಾಗುವ ವಿಮೆ ಪರಿಹಾರ ಪಡೆಯಲು ದುಸ್ತರವಾಗುತ್ತದೆ. ಅಲ್ಲದೇ ಅಂತಹ ಜಮೀನುಗಳನ್ನು ಸಾರ್ವಜನಿಕ ಉದ್ದೇಶಕ್ಕೆ ಭೂಸ್ವಾಧೀನ ಕಾಯಿದೆಯಂತೆ ವಶಪಡಿಸಿಕೊಂಡಾಗಲೂ ಕೂಡ ಪರಿಹಾರದ ಹಣ ಪಡೆಯಲು ವಿವಿಧ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಬರುತ್ತದೆ. ಹಾಗಾಗಿ ರೈತಾಪಿ ವರ್ಗದವರ ಸಮಸ್ಯೆಗಳನ್ನು ಪರಿಹರಿಸಿ ಪೌತಿಖಾತೆ ಅಥವಾ ವಾರಸಾ ಸ್ವರೂಪದ ಮ್ಯುಟೇಷನ್ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಿ ಇ-ಪೌತಿ, ವಾರಸಾ ಅಭಿಯಾನ ನಡೆಸಲು ಸರ್ಕಾರ ಆದೇಶಿಸಿದ್ದು, ರೈತರು ಈ ಕೂಡಲೇ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿ, ರಾಜಸ್ವ ನಿರೀಕ್ಷಕರನ್ನು ಸಂಪರ್ಕಿಸಬೇಕು' ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.