ADVERTISEMENT

ಬಿಜೆಪಿಯವರು ಸೌಲಭ್ಯ ಬೇಡ ಎಂದು ಬರೆದುಕೊಡಲಿ: ಶಾಸಕ ಕೆ.ಎಸ್.ಆನಂದ್

​ಪ್ರಜಾವಾಣಿ ವಾರ್ತೆ
Published 3 ಜೂನ್ 2023, 14:02 IST
Last Updated 3 ಜೂನ್ 2023, 14:02 IST
ಕಡೂರು ತಾಲ್ಲೂಕು ಹಿರೇನಲ್ಲೂರು ಗ್ರಾಮದಲ್ಲಿ ಶಾಸಕ ಕೆ.ಎಸ್.ಆನಂದ್ ಅವರನ್ನು ಗ್ರಾಮಸ್ಥರು ಅಭಿನಂದಿಸಿದರು
ಕಡೂರು ತಾಲ್ಲೂಕು ಹಿರೇನಲ್ಲೂರು ಗ್ರಾಮದಲ್ಲಿ ಶಾಸಕ ಕೆ.ಎಸ್.ಆನಂದ್ ಅವರನ್ನು ಗ್ರಾಮಸ್ಥರು ಅಭಿನಂದಿಸಿದರು   

ಕಡೂರು: ‘ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳಿಗೆ ವಿರೋಧ ವ್ಯಕ್ತಪಡಿಸುವ ಬಿಜೆಪಿ ಕಾರ್ಯಕರ್ತರು ಆ ಸೌಲಭ್ಯ ತಮಗೆ ಬೇಡ ಎಂದು ಬರೆದು ಕೊಡಲಿ’ ಎಂದು ಶಾಸಕ ಕೆ.ಎಸ್.ಆನಂದ್ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.

ತಾಲ್ಲೂಕಿನ ಹಿರೇನಲ್ಲೂರು ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಆವರಣದಲ್ಲಿ ಶುಕ್ರವಾರ ಗ್ರಾಮಸ್ಥರು ಆಯೋಜಿಸಿದ್ದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

‘ಯಾವುದೇ ತಾರತಮ್ಯವಿಲ್ಲದೆ ಕಾಂಗ್ರೆಸ್ ಎಲ್ಲರಿಗೂ ಐದು ಗ್ಯಾರಂಟಿಗಳ ಸೌಲಭ್ಯ ನೀಡಲು ಮುಂದಾಗಿದೆ. ಉಚಿತ ಭಾಗ್ಯಗಳಿಗೆ ಕಾಂಗ್ರೆಸ್ ಅನ್ವರ್ಥವಾಗಿದೆ. ಇದನ್ನು ಬಿಜೆಪಿ ಸಹಿಸುತ್ತಿಲ್ಲ. ಹಾಗಾಗಿ ಇಲ್ಲಸಲ್ಲದ ಕಾರಣಗಳನ್ನು ಹೇಳುತ್ತಾ ಜನರನ್ನು ದಿಕ್ಕುತಪ್ಪಿಸುವ ಕಾರ್ಯ ಮಾಡುತ್ತಿದೆ. ಕ್ಷೇತ್ರದ ಮತದಾರರ ಹಾರೈಕೆ ಮತ್ತು ಪಕ್ಷದ ಕಾರ್ಯಕರ್ತರ ಶ್ರಮ ನನ್ನನ್ನು ಈ ಸ್ಥಾನಕ್ಕೆ ತಂದಿದೆ. ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುವುದು ನನ್ನ ಕರ್ತವ್ಯ. ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಹಾಗೂ ಇಲ್ಲಿನ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಮುಂದಾಗುವೆ’ ಎಂದು ಭರವಸೆ ನೀಡಿದರು.

ADVERTISEMENT

ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿ, ‘ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷವನ್ನು ಆಯ್ಕೆ ಮಾಡಿಕೊಂಡು ಕೆ.ಎಸ್.ಆನಂದ್ ಅವರನ್ನು ಗೆಲ್ಲಿಸುವ ಮೂಲಕ ಉತ್ತಮ ತೀರ್ಮಾನ ಮಾಡಿದ್ದಾರೆ. ಮತದಾರರ ಜವಾಬ್ದಾರಿ ಮುಗಿದಿದೆ. ಇನ್ನು 5 ವರ್ಷ ಶಾಸಕರು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತಮ್ಮ ಜವಾಬ್ದಾರಿ ತೋರಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇರುವುದು ಕ್ಷೇತ್ರದ ಅಭಿವೃದ್ಧಿಗೆ ಪೂರಕ’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಸಂದಿ ಕಲ್ಲೇಶ್, ಗುಮ್ಮನಹಳ್ಳಿ ಸರೋಜಮ್ಮ, ಗಿರಿಯಾಪುರದ ಪ್ರಭುಕುಮಾರ್, ಆಶೋಕ್, ಪುಷ್ಪಾ ರಾಜಣ್ಣ, ವೀಣಾ, ಕೃಷ್ಣಮೂರ್ತಿ, ನಿಜಗುಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.