ಆಲ್ದೂರು: ಪಟ್ಟಣದ ಪ್ರಮುಖ ಬೀದಿಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ ಕಾಂಗ್ರೆಸ್ ಮುಖಂಡರು, ನಂತರ ಸಭೆ ನಡೆಸಿದರು.
ಶಾಸಕಿ ನಯನಾ ಮೋಟಮ್ಮ ಮಾತನಾಡಿ, ‘ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ನೀಡಿರುವ ಕೊಡುಗೆ ಶೂನ್ಯ. ಈ ಹಿಂದಿನ ಸರ್ಕಾರ ನೀಡಿದ ಅನುದಾನದಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ವದಂತಿ ಹಬ್ಬಿಸುತ್ತಿರುವ ಬಿಜೆಪಿ ಮುಖಂಡರು, ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಆರೋಪಿಸಿದರು.
ಮತವನ್ನು ನೀಡಿದ ಜನರ ಕೈಗೆ ಬಿಜೆಪಿ ಚೊಂಬು ನೀಡಿದೆ ಎನ್ನುತ್ತ ಚೊಂಬನ್ನು ಎತ್ತಿ ತೋರಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಮಾತನಾಡಿ,‘ಮಲೆನಾಡಿನ ರೈತರು ಎದುರಿಸುತ್ತಿರುವ ಅಡಿಕೆಗೆ ರೋಗ, ಕಾಫಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸಮಗ್ರ ಅಧ್ಯಯನ ಮಾಡಿ, ಜನರ ಧ್ವನಿಯಾಗಿ ಸಂಸತ್ನಲ್ಲಿ ವಿಚಾರ ಮಂಡಿಸುತ್ತೇನೆ. ಇದಕ್ಕೆ ಜನರು ಅವಕಾಶ ಮಾಡಿಕೊಡಬೇಕು’ ಎಂದರು.
ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಮಾಜಿ ಸಚಿವೆ ಮೋಟಮ್ಮ, ಮಾಜಿ ಶಾಸಕ ಬಿ.ಬಿ. ನಿಂಗಯ್ಯ, ಮಾಜಿ ಶಾಸಕ ಕುಮಾರಸ್ವಾಮಿ, ಕೆಪಿಸಿಸಿ ವಕ್ತಾರ ಎಚ್.ಎಚ್ ದೇವರಾಜ್, ಪ್ರಚಾರ ಸಮಿತಿಯ ಅಧ್ಯಕ್ಷ ಹಮೀದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದಾಬಿರ್, ಮುಖಂಡರಾದ ಸವಿತಾ ರಮೇಶ್, ಆಲ್ದೂರು ಪಂಚಾಯಿತಿ ಅಧ್ಯಕ್ಷೆ ಜಯಶೀಲಾ ಚಿದಂಬರ್, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.