ADVERTISEMENT

ಮೌಲ್ಯಯುತ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆ ಉಳಿಸಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ದಾರದಹಳ್ಳಿ ಸರ್ಕಾರಿ ಶಾಲೆಯ ಶತಮಾನೋತ್ಸವ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2026, 4:22 IST
Last Updated 2 ಮಾರ್ಚ್ 2026, 4:22 IST
<div class="paragraphs"><p>ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೊತ್ಸವ ಕಾರ್ಯಕ್ರಮವನ್ನು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಿದರು</p></div>

ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೊತ್ಸವ ಕಾರ್ಯಕ್ರಮವನ್ನು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಿದರು

   

ಮೂಡಿಗೆರೆ: ಸಮಾಜದಲ್ಲಿ ಮೌಲ್ಯಯುತ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ತಾಲ್ಲೂಕಿನ ದಾರದಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಭಾನುವಾರ ನಡೆದ ಶಾಲೆಯ ಶತಮಾನೋತ್ಸವದಲ್ಲಿ ಅವರು ಮಾತನಾಡಿದರು.

ADVERTISEMENT

‘ವಿಧಾನಸೌಧ ಕಟ್ಟಿಸಿದ ಕೆಂಗಲ್ ಹನುಮಂತಯ್ಯ ಅವರು ಈ ಶಾಲೆ ಉದ್ಘಾಟಿಸಿರುವುದು ಚಾರಿತ್ರಿಕ ವಿಚಾರ. ರಾಜ್ಯದಲ್ಲಿ ವರ್ಷಕ್ಕೆ ₹40 ಸಾವಿರ ಕೋಟಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದ್ದು, 7 ಲಕ್ಷಕ್ಕೂ ಅಧಿಕ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ರಾಜ್ಯದಲ್ಲಿರುವ 48 ಸಾವಿರ ಸರ್ಕಾರಿ ಶಾಲೆಯಲ್ಲಿ 7 ಸಾವಿರ ಶಾಲೆ ಮುಚ್ಚುವ ಸ್ಥಿತಿಗೆ ಬಂದಿದೆ ಎಂಬ ವರದಿ ದೊರಕಿದೆ. ಇದಕ್ಕೆ ಖಾಸಗಿ ಶಾಲೆಗಳ ಜತೆಗೆ ಹಲವು ಕಾರಣಗಳಿವೆ. ಇಂಥ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಉಳಿಸಿ ಬೆಳೆಸಿ ಶತಮಾನೋತ್ಸವ ಆಚರಣೆ ನಡೆಸುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು.

ಕಿರುಹೊತ್ತಗೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಮುಖಂಡರಾದ ಡಿ.ಕೆ. ತಾರಾದೇವಿ, ‘ಆಳುವ ಸರ್ಕಾರಗಳು ಆರೋಗ್ಯ ಹಾಗೂ ಶಿಕ್ಷಣಕ್ಕೆ ಅನುದಾನ ಕಡಿಮೆ ಪ್ರಮಾಣದಲ್ಲಿ ಕೊಡುತ್ತಿದೆ. ಇದು ಸರಿಯಲ್ಲ. ಶಿಕ್ಷಣ ಹಾಗೂ ಆರೋಗ್ಯಕ್ಕಾಗಿ ಬಜೆಟ್‌ನಲ್ಲಿ ಅಧಿಕ ಹಣ ಮೀಸಲಿಡಬೇಕು’ ಎಂದರು.

ಸಾಹಿತಿ ಚಟ್ನಳ್ಳಿ ಮಹೇಶ್ ಮಾತನಾಡಿ, ‘ಒಂದು ಶಾಲೆ ಯಶಸ್ಸಿನತ್ತ ಸಾಗಬೇಕೆಂದರೆ ಶಿಕ್ಷಕರು, ಪೋಷಕರು, ಸಂಘ ಸಂಸ್ಥೆಗಳು ಹಾಗೂ ಸ್ಥಳೀಯ ಗ್ರಾಮಸ್ಥರ ಜವಾಬ್ದಾರಿ ಅಗತ್ಯವಾಗಿದೆ. ಸಾಮಾನ್ಯ ಪ್ರಜ್ಞೆ ಜಾಗೃತಗೊಳಿಸುವಂಥ ಭಾವನೆ ಹಾಗೂ ಪ್ರತಿಭೆ ಮಕ್ಕಳಲ್ಲಿರುತ್ತದೆ. ಅದನ್ನು ಗುರುತಿಸಿ ಹೊರ ತರಬೇಕು’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕಿ ನಯನಾ ಮೋಟಮ್ಮ, ಸರ್ಕಾರ ಶಾಲೆಗಳನ್ನು ಕ್ರೋಢೀಕರಿಸಿ ಖಾಸಗಿ ಶಾಲೆಗಳಿಗೆ ಮೀರಿಸುವಂತೆ ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೆಪಿಎಸ್ ಶಾಲೆ ಪ್ರಾರಂಭಿಸಲು ಚಿಂತನೆ ನಡೆದಿದೆ. ಮುಖ್ಯವಾಗಿ ಸರ್ಕಾರಿ ಶಾಲೆಗಳಲ್ಲಿರುವ ಶೌಚಾಲಯಗಳನ್ನು ಅಚ್ಚುಕಟ್ಟಾಗಿ ಇಟ್ಟುಕೊಳ್ಳಬೇಕು. ಸ್ವಚ್ಛತೆ, ಶಿಸ್ತು ಸೇರಿದಂತೆ ಶಾಲೆಯಲ್ಲಿ ಮಕ್ಕಳಿಗೆ ಅಗತ್ಯ ವ್ಯವಸ್ಥೆ ರೂಪಿಸಿಕೊಂಡರೆ ಎಲ್ಲ ಸರ್ಕಾರಿ ಶಾಲೆಗಳು ಶತಮಾನೋತ್ಸವ ಆಚರಿಸಿಕೊಳ್ಳಲು ಸಾಧ್ಯ’ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಜತೆಗೆ ಮಾಜಿ ಯೋಧರು, ವೈದ್ಯರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಯಿತು.

ಸಾಹಿತಿ ಡಿ.ಸಿ. ರವಿಕುಮಾರ್, ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಡಿ.ಬಿ. ಜಯಪ್ರಕಾಶ್, ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಸ್. ರಮೇಶ್, ದಾರದಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎಂ. ಸಿದ್ದೇಶ್, ಕೆಂಪೇಗೌಡ ಒಕ್ಕಲಿಗರ ವೇದಿಕೆ ಅಧ್ಯಕ್ಷ ಬ್ರಿಜೇಶ್ ಕಡಿದಾಳ್, ರಂಜನ್ ಅಜಿತ್‌ಕುಮಾರ್, ಡಿ.ಕೆ. ಉದಯಶಂಕರ್, ದೀಪಕ್‌ದೊಡ್ಡಯ್ಯ, ಡಿ.ಬಿ. ಅಶೋಕ್, ಲಕ್ಷ್ಮಣಗೌಡ ಮಗ್ಗಲಮಕ್ಕಿ, ಡಿ.ಆರ್. ರಘುಪತಿ, ಶಾಲೆಯ ಮುಖ್ಯ ಶಿಕ್ಷಕಿ ಜಿ. ರೂಪ, ಮಂಜಪ್ಪ ಭಾಗವಹಿಸಿದ್ದರು.

ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೊತ್ಸವ ಕಾರ್ಯಕ್ರಮದಲ್ಲಿ ಕಿರುಹೊತ್ತಿಗೆಯನ್ನು ಮಾಜಿ ಕೇಂದ್ರ ಸಚಿವೆ ಡಿ.ಕೆ. ತಾರಾದೇವಿ ಬಿಡುಗಡೆಗೊಳಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.