ಚಿಕ್ಕಮಗಳೂರು: ಕೊಡಬೇಕಿದ್ದ ಹಣ ಕೇಳಿದ್ದಕ್ಕೆ ಕೊಲೆ ಮಾಡಿದ್ದ ಅಪರಾಧಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ನರಸಿಂಹರಾಜಪುರ ತಾಲ್ಲೂಕಿನ ಮೆಣಸೂರು ಗ್ರಾಮದ ಬಾಬು ಶಿಕ್ಷೆಗೆ ಒಳಗಾದವ. ಬಡಗಬೈಲು ಗ್ರಾಮದ ಶಿಶೀರ್ ಎಂಬ ಯುವಕನಿಗೆ ಬಾಬು ಹಣ ಕೊಡಬೇಕಿತ್ತು. ಕೊಡುವುದಾಗಿ ಮನೆಗೆ ಕರೆಸಿದ್ದ ಬಾಬು, ಕತ್ತಿಯಿಂದ ಹಲ್ಲೆ ನಡೆಸಿದ್ದ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದರು. ಶಿಶೀರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿದೆ.
ಸರ್ಕಾರಿ ಅಭಿಯೋಜಕಿ ವೀಣಾ ಪಿ. ಸರ್ಕಾರದ ಪರ ವಾದ ಮಂಡಿಸಿದ್ದರು. ಈ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಶ್ಲಾಘಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.