ನರಸಿಂಹರಾಜಪುರ: ‘ಪಟ್ಟಣದ ಬಸ್ ನಿಲ್ದಾಣದಿಂದ ಪ್ರವಾಸಿ ಮಂದಿರದವರೆಗೆ ಹಾಗೂ ಪಟ್ಟಣ ಪಂಚಾಯಿತಿ ಸಮೀಪದ ವೃತ್ತದಿಂದ ಸುಂಕದ ಕಟ್ಟೆವರೆಗಿನ ರಸ್ತೆ ವಿಸ್ತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹60 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ’ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಹೇಳಿದರು.
ತಾಲ್ಲೂಕಿನ ಹಳೇಮಾಕೋಡು ಗ್ರಾಮದ ವ್ಯಾಪ್ತಿಯ ಎನ್.ಆರ್.ಪುರದಿಂದ ಹೊನ್ನೆಕೂಡಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿಯನ್ನು ಗುರುವಾರ ವೀಕ್ಷಣೆ ಬಳಿಕ ಮಾತನಾಡಿದರು.
‘ತಾಲ್ಲೂಕು ಕೇಂದ್ರದಲ್ಲಿ ನೂರು ವರ್ಷಗಳ ಹಿಂದೆ ರಸ್ತೆ ನಿರ್ಮಾಣವಾಗಿದ್ದು ಬಿಟ್ಟರೆ ಈವರೆಗೆ ರಸ್ತೆ ವಿಸ್ತರಣೆಯಾಗಿಲ್ಲ. ರಸ್ತೆ ವಿಸ್ತರಣೆಗೆ ಅನುದಾನ ಬಿಡುಗಡೆಯಾಗಿದ್ದು ಜನಪ್ರತಿನಿಧಿಗಳ, ಮುಖಂಡರ ಸಭೆ ಕರೆದು ಶೀಘ್ರದಲ್ಲೇ ಭೂಸ್ವಾದೀನ ಪ್ರಕ್ರಿಯೆಗೆ ಚಾಲನೆ ನೀಡಿ ರಸ್ತೆ ವಿಸ್ತರಣೆ ಮಾಡಲಾಗುವುದು. ರಸ್ತೆ ವಿಸ್ತರಣೆ ವೇಳೆ ತೆರವಾಗುವ ಮನೆಗಳನ್ನು ಒಂದೇ ವಿನ್ಯಾಸದಲ್ಲಿ ನಿರ್ಮಿಸಿಕೊಳ್ಳುವಂತೆ ಜನರ ಮನವೋಲಿಸಲು ಸ್ಥಳೀಯ ಆಡಳಿತಕ್ಕೆ ಸೂಚಿಸಲಾಗಿದೆ. ರಸ್ತೆ ವಿಸ್ತರಣೆಯಾಗುವುದರಿಂದ ನರಸಿಂಹರಾಜಪುರದ ಚಿತ್ರಣವೇ ಬದಲಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿಯಾಗಲಿದ್ದು ವ್ಯಾಪಾರ, ವಹಿವಾಟು ಹೆಚ್ಚಾಗಲಿದೆ. ಭದ್ರಾಹಿನ್ನೀರಿನಲ್ಲಿ ಊರು ಮುಳುಗಡೆ ಆಗುವ ಮುನ್ನ ಇದ್ದ ಗತವೈಭವ ಮರಳಿ ಬರುತ್ತದೆ. ಪರಿಹಾರ ನೀಡಿ ರಸ್ತೆ ವಿಸ್ತರಣೆ ಮಾಡುತ್ತಿರುವುದರಿಂದ ಜಮೀನು, ಆಸ್ತಿಯ ಮೌಲ್ಯ ಹೆಚ್ಚಾಗಲಿದೆ. ಹಾಗಾಗಿ ಈ ಭಾಗದ ನಿವಾಸಿಗಳು ಅಪಸ್ವರ ಎತ್ತದೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ರಸ್ತೆ ವಿಸ್ತರಣೆ ಕಾಮಗಾರಿ ಯಾವುದೇ ಅಡೆ–ತಡೆಯಿಲ್ಲದಂತೆ ಕೈಗೊಳ್ಳುವ ನಿಟ್ಟಿನಲ್ಲಿ ಶೀಘ್ರದಲ್ಲೇ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗಳ ಸಭೆ ಕರೆದು ಚರ್ಚಿಸಲಾಗುವುದು. ರಸ್ತೆ ವಿಸ್ತರಣೆಯಾಗುವ ಪ್ರದೇಶದಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿರುವ ಎಲ್ಲಾ ಖಾತೆದಾರರ ಸಭೆ ಶೀಘ್ರವಾಗಿ ಕರೆಯಲಾಗುವುದು. ರಸ್ತೆ ವಿಸ್ತರಣೆ ಸಂಬಂಧ ಚರ್ಚಿಸಲು ಆಗಸ್ಟ್ 8ರಂದು ಪಟ್ಟಣ ಪಂಚಾಯಿತಿ ಎಲ್ಲಾ ಸದಸ್ಯರು, ಮುಖಂಡರ ಸಭೆ ಕರೆಯಲಾಗಿದೆ ಎಂದರು.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಹೊನ್ನೆಕೂಡಿಗೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಗೆ ₹35 ಕೋಟಿ, ತಾಲ್ಲೂಕು ಕೇಂದ್ರದಿಂದ ಹೊನ್ನೆಕೂಡಿಗೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆವರೆಗಿನ ರಸ್ತೆ ನಿರ್ಮಾಣಕ್ಕೆ ₹5 ಕೋಟಿ ಬಿಡುಗಡೆ ಮಾಡಿದ್ದು ಕಾಮಗಾರಿ ತ್ವರಿತರಗತಿಯಲ್ಲಿ ಸಾಗಿದೆ ಎಂದರು.
ಹಿಂದೆ ಕಡಹಿನಬೈಲು ಏತ ನೀರಾವರಿಗೆ ಯೋಜನೆಗೆ ₹16 ಕೋಟಿ ಅನುದಾನ ನೀಡಿ ಅದನ್ನು ಪೂರ್ಣಗೊಳಿಸಲು ಸಹಕಾರ ನೀಡಿದ್ದಾರೆ. ಅಲ್ಪಸಂಖ್ಯಾತರ ಹೆಚ್ಚಾಗಿ ವಾಸಿಸುವ ಕಾಲೊನಿಗಳ ಅಭಿವೃದ್ಧಿಗೆ ₹5 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ವಿವಿಧ ದೇವಸ್ಥಾನಗಳ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ ₹16 ಲಕ್ಷ ಅನುದಾನ ನೀಡಲಾಗಿದೆ ಎಂದರು.
ಯಾವುದೇ ಸ್ವಾರ್ಥವಿಲ್ಲದೇ, ಚುನಾವಣೆಯ ನಿಲ್ಲುವ ಉದ್ದೇಶವೂ ಇಲ್ಲದೆ. ಕೇವಲ ಹುಟ್ಟೂರಿನ ಋಣ ತೀರಿಸಲು, ಜನರು ತೋರಿಸಿದ ಪ್ರೀತಿಗಾಗಿ ಅನುದಾನ ಬಿಡುಗಡೆ ಮಾಡಿಸಲಾಗಿದೆ ಎಂದರು.
ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಆಸ್ಪತ್ರೆ ರಕ್ಷಾ ಸಮಿತಿ ಸದಸ್ಯ ಸುನಿಲ್ ಕುಮಾರ್ ಹಾಜರಿದ್ದರು.
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರಸ್ತಾವ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷವಾಗಿ ಮುಳ್ಳಯ್ಯನಗಿರಿ ಅಭಿವೃದ್ಧಿ, ಹೊನ್ನೆಕೂಡಿಗೆ ವ್ಯಾಪ್ತಿಯ 3 ಎಕರೆ ಜಾಗದಲ್ಲಿ ರೆಸಾರ್ಟ್ ನಿರ್ಮಾಣ ಹಾಗೂ ಜಿಲ್ಲೆಯ ಯಾವುದಾದರೊಂದು ಜಾಗದಲ್ಲಿ ತ್ರಿಸ್ಟಾರ್ ಹೋಟೆಲ್ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.
ಮೇದಾರ ಸಮಾಜಕ್ಕೆ ಮೇದಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವ ಸಲ್ಲಿಸಿದ್ದು ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.