ಕಾನೂರು (ಎನ್.ಆರ್ ಪುರ): ತಾಲ್ಲೂಕಿನ ಕಾನೂರು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕಾರ್ಮಿಕರು ನಿರ್ಮಿಸಿರುವ ಉದ್ಯಾನ ಕಣ್ಮನ ಸೆಳೆಯುತ್ತಿದೆ.
ಉದ್ಯೋಗ ಖಾತರಿ ಯೋಜನೆಯಡಿ ₹ 6.3 ಲಕ್ಷ ವೆಚ್ಚದಲ್ಲಿ ಉದ್ಯಾನ ನಿರ್ಮಿಸಿದ್ದ ಗುಲಾಬಿ, ದಾಸವಾಳ, ಆಲಂಕಾರಿಕ ಗಿಡಗಳು ಒಳಗೊಂಡು ಹಸಿರಿನಿಂದ ಕಂಗೊಳಿಸುತ್ತಿದೆ. ಮೀನುಗಳು ಮತ್ತು ಆಲಂಕಾರಿಕ ವಸ್ತುಗಳು ಕೂಡ ಗಮನ ಸೆಳೆಯುತ್ತಿವೆ.
‘ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಹೈಟೆಕ್ ಉದ್ಯಾನ ನಿರ್ಮಾಣ ಮಾಡಬಹುದು ಎಂಬುದನ್ನು ಕಾನೂರು ಗ್ರಾಮ ಪಂಚಾಯಿತಿ ತೋರಿಸಿಕೊಟ್ಟಿದೆ. ಗ್ರಾಮ ಪಂಚಾಯಿತಿಗೆ ಭೇಟಿ ನೀಡುವ ಗ್ರಾಮಸ್ಥರು ಉದ್ಯಾನದಲ್ಲಿ ಸುತ್ತಾಡಿ ಸೌಂದರ್ಯ ಸವೆಯುವ ಮೂಲಕ ಮನಸ್ಸಿಗೆ ಆಹ್ಲಾದವನ್ನುಂಟು ಮಾಡುತ್ತಿದೆ’ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
ಕಾನೂರು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಉತ್ತಮ ಉದ್ಯಾನ ನಿರ್ಮಾಣ ಮಾಡಲಾಗಿದೆ. ಇದೇ ರೀತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಿಂದ ಗ್ರಾಮೀಣ ಭಾಗವನ್ನು ಅಭಿವೃದ್ಧಿಪಡಿಸಲು ಪ್ರತಿಯೊಬ್ಬರು ಸಹಕರಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ನವೀನ್ ಕುಮಾರ್ ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲ್ಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಉದ್ಯಾನದ ಕಾಮಗಾರಿ ಅಚ್ಚುಕಟ್ಟಾಗಿ ಮಾಡಿದ್ದರಿಂದ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕ ಎನ್.ಎಲ್ ಮನೀಷ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.