ADVERTISEMENT

ಚಿಕ್ಕಮಗಳೂರು| ನರೇಗಾ ಕಾಯ್ದೆ ಬದಲಾವಣೆ ವಿರುದ್ಧ ಹೋರಾಟ: ಸಚಿವ ಕೆ.ಜೆ. ಜಾರ್ಜ್

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 6:04 IST
Last Updated 13 ಜನವರಿ 2026, 6:04 IST
ಕೆ.ಜೆ.ಜಾರ್ಜ್‌
ಕೆ.ಜೆ.ಜಾರ್ಜ್‌   

ಚಿಕ್ಕಮಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬದಲಿಸಿ ಜನವಿರೋಧಿಯಾಗಿ ರೂಪಿಸಲಾಗಿದೆ. ಇದರ ವಿರುದ್ಧ ಹೋರಾಟ ರೂಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

20 ವರ್ಷಗಳ ಕಾಲ ದೇಶದ ಜನರಿಗೆ ಉದ್ಯೋಗದ ಖಾತ್ರಿ ಒದಗಿಸಿದ್ದ ಯೋಜನೆಯನ್ನು ಬದಲಾವಣೆ ಮಾಡಲಾಗುತ್ತಿದೆ. ಆ ಮೂಲಕ ಜನ ಸಾಮಾನ್ಯರ ಹಕ್ಕು ಕೇಂದ್ರೀಕರಿಸಿ ವಿಕೇಂದ್ರಿಕರಣ ವ್ಯವವಸ್ಥೆಗೆ ಧಕ್ಕೆ ತರಲು ಹುನ್ನಾರ ನಡೆಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಆರೋಪಿಸಿದರು.

ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸುವ ಜತೆಗೆ ಸಾರ್ವಜನಿಕ ಆಸ್ತಿ ನಿರ್ಮಾಣ ಮಾಡುವುದು ನರೇಗಾ ಯೋಜನೆಯ ಉದ್ದೇಶ. 2005ರಲ್ಲಿ ಯುಪಿಎ ಸರ್ಕಾರ ಇದನ್ನು ಜಾರಿಗೆ ತಂದಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಕಾಮಗಾರಿ ಆಯ್ಕೆ ಮಾಡಿ ಕನಿಷ್ಠ 100 ದಿನ ಕೆಲಸ ನೀಡಲಾಗುತ್ತಿತ್ತು. ಹೊಸ ಕಾಯ್ದೆ ಪ್ರಕಾರ ಕಾಮಗಾರಿಗಳ ಆಯ್ಕೆ ದೆಹಲಿಯಿಂದ ನಡೆಯಲಿದೆ. ಇದು ಗ್ರಾಮ ಪಂಚಾಯಿತಿ ಅಧಿಕಾರ ಕಸಿದುಕೊಳ್ಳುವ ಪ್ರಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಈ ಹಿಂದೆ ಶೇ 90ರಷ್ಟು ಅನುದಾನ ನೀಡುತ್ತಿದ್ದ ಕೇಂದ್ರ ಸರ್ಕಾರ, ಈಗ ಅದನ್ನು ಶೇ 60ಕ್ಕೆ ಇಳಿಕೆ ಮಾಡಿದೆ. ಶೇ 40ರಷ್ಟು ಅನುದಾನವನ್ನು ರಾಜ್ಯ ಸರ್ಕಾರ ಭರಿಸಬೇಕಿದ್ದು, ರಾಜ್ಯಗಳ ಮೇಲೆ ಹೊರೆ ಹೆಚ್ಚಾಗಲಿದೆ ಎಂದು ತಿಳಿಸಿದರು.

ಗ್ರಾಮೀಣ ಬದುಕಿನ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ, ರೈತರ ಹೊಟ್ಟೆ ಮೇಲೆ ಬರೆ ಎಳೆಯಲು ಹೊರಟಿದೆ. ಈ ಅನ್ಯಾಯ ಖಂಡಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ‘ಜನಪರವಾದ ಈ ಯೋಜನೆಯನ್ನು ಕೇಂದ್ರ ಸರ್ಕಾರ ಬದಲಿಸಲು ಹೊರಟಿದೆ. ಯೋಜನೆಯಿಂದ ಮಹಾತ್ಮ ಗಾಂಧೀಜಿ ಅವರ ಹೆಸರು ತೆಗೆದಿರುವುದು ತಪ್ಪು. ಇದನ್ನು ಖಂಡಿಸಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾದಯಾತ್ರೆ ನಡೆಸಲಾಗವುದು’ ಎಂದು ತಿಳಿಸಿದರು.

ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ‘ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಕಾರ್ಯಕ್ರಮಗಳಿಗೆ ಬಿಜೆಪಿ ಹೊಸ ಹೆಸರು ನೀಡಿ ಜನರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದೆ’ ಎಂದು ಟೀಕಿಸಿದರು.

ಕಡೂರು ಶಾಸಕ ಕೆ.ಎಸ್.ಆನಂದ್ ಮಾತನಾಡಿ, ‘ಸಾರ್ವಜನಿಕ ಆಸ್ತಿಗಳಿಗೆ ಕಾಂಪೌಂಡ್ ಹಾಗೂ ನಮ್ಮ ಹೊಲ ನಮ್ಮ ರಸ್ತೆ ರೀತಿಯ ಕಾಮಗಾರಿ ನಡೆಯುತ್ತಿತ್ತು. ಈ ರೀತಿಯ ಯೋಜನೆಯನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸಲು ಹೊರಟಿದೆ’ ಎಂದರು.

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಮಾತನಾಡಿ, ‘ವಿಕೇಂದ್ರೀಕರಣ ವ್ಯವಸ್ಥೆ ಬದಲಿಸಿ ಕೇಂದ್ರೀಕೃತ ಆಡಳಿತಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟುಕಾಗುತ್ತಿದೆ’ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಅಂಶುಮಂತ್, ಮುಖಂಡರಾದ ಗಾಯತ್ರಿ ಶಾಂತೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಎಂ.ಪಿ.ಕುಮಾರಸ್ವಾಮಿ, ಜಿಲ್ಲಾ ವಕ್ತಾರ ರೂಬಿನ್ ಮೋಸೆಸ್, ಹೇಮಣ್ಣ ಹಾಜರಿದ್ದರು.