
ಅಜ್ಜಂಪುರ: ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ನ ಮಹತ್ವಕಾಂಕ್ಷಿ ಯೋಜನೆ. ಕಡಿಮೆ ದರದಲ್ಲಿ ಹಸಿವು ನೀಗಿಸುವ ಕಾರ್ಯಕ್ರಮ. ಇದನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಮನವಿ ಮಾಡಿದರು.
ಪಟ್ಟಣದಲ್ಲಿ ಗುರುವಾರ ನಡೆದ ಇಂದಿರಾ ಕ್ಯಾಂಟೀನ್ ಮತ್ತು ನವೀಕೃತ ಖಾಸಗಿ ಬಸ್ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಇಒ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ ಆರಂಭಿಸಲು ಸರ್ಕಾರಕ್ಕೆ ಒತ್ತಡ ಹಾಕಲಾಗಿದೆ. ಆಸ್ಪತ್ರೆ ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗಿದೆ. ಏಪ್ರಿಲ್ ವೇಳೆಗೆ ₹ 8.64 ಕೋಟಿ ವೆಚ್ಚದ ಪ್ರಜಾ ಸೌಧ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುವುದು. ಪ್ರಸ್ತುತ ಬಸ್ ನಿಲ್ದಾಣದಲ್ಲಿ ಮಹಿಳಾ ಶೌಚಾಲಯ ನಿರ್ಮಿಸಲಾಗುವುದು. ಆಟೊ ನಿಲ್ದಾಣ ವಿಸ್ತರಣೆಗೆ ಹೆಚ್ಚುವರಿ ಅನುದಾನ ನೀಡಲಾಗುವುದು. 11 ವಾರ್ಡ್ ಗಳಲ್ಲೂ ನಾಮಫಲಕ ಅಳವಡಿಕೆಗೆ ₹ 25 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಕೆಡಿಪಿ ಸದಸ್ಯ ಜಿ.ನಟರಾಜ್, ಇಂದಿರಾ ಕ್ಯಾಂಟೀನ್ ಬಡವರ ಪಾಲಿನ ಅಕ್ಷಯ ಪಾತ್ರೆ. ಕ್ಯಾಂಟೀನ್ನಲ್ಲಿ ಶುಚಿ, ರುಚಿ ಕಾಪಾಡಿಕೊಳ್ಳಬೇಕು. ಇದರ ನಿರ್ವಹಣೆ ಹೊತ್ತವರು ಸರಿಯಾಗಿ ಜವಾಬ್ದಾರಿ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಕೆಡಿಪಿ ಸದಸ್ಯ ಗಿರೀಶ್, ಮಹೇಂದ್ರಾಚಾರ್, ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ತಿಪ್ಪೇಶ್ ಮಡಿವಾಳ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಯಾನಂದ್, ಗ್ಯಾರಂಟಿ ಯೋಜನೆ ಸಮಿತಿ ತಾಲ್ಲೂಕು ಅಧ್ಯಕ್ಷ ಎನ್.ಜೆ.ಕುಮಾರ್, ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪುಟ್ಟಸ್ವಾಮಿ ಭಾಗವಹಿಸಿದ್ದರು.
ಇಂದಿರಾ ಕ್ಯಾಂಟೀನ್ ಯೋಜನೆ ಸಮಿತಿ ಅಧ್ಯಕ್ಷ ಪ್ರಸನ್ನ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರೇವಣ್ಣ, ಸದಸ್ಯ ಜೋಗಿ ಪ್ರಕಾಶ್, ಆರ್.ಅಣ್ಣಪ್ಪ, ತೀರ್ಥ ಪ್ರಸಾದ್, ನಿಸಾರ್ ಅಹ್ಮದ್, ಸುಮಲತಾ ಮಲ್ಲಿಕಾರ್ಜುನ್, ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಕ ಉಮೇಶ್ ಭಾಘವಹಿಸಿದ್ದರು. ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ ಮತ್ತು ಪಟ್ಟಣ ಪಂಚಾಯಿತಿ ಸಂಯುಕ್ತವಾಗಿ ಕಾರ್ಯಕ್ರಮ ಆಯೋಜಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.