ADVERTISEMENT

ಕೋವಿಡ್ ಕಾರಣದಿಂದ ಕಳಸತಾಲ್ಲೂಕು ಅಧಿಸೂಚನೆ ವಿಳಂಬ: ಎಂ.ಕೆ ಪ್ರಾಣೇಶ್

ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 7:33 IST
Last Updated 4 ಡಿಸೆಂಬರ್ 2020, 7:33 IST
ಎಂ.ಕೆ ಪ್ರಾಣೇಶ್
ಎಂ.ಕೆ ಪ್ರಾಣೇಶ್   

ಮೂಡಿಗೆರೆ: ‘ಕೋವಿಡ್– 19 ಹಾಗೂ ಪ್ರಾಕೃತಿಕ ವಿಕೋಪದಿಂದಾಗಿ ಕಳಸ ತಾಲ್ಲೂಕು ಅಧಿಸೂಚನೆ ತಡವಾಗಿದೆ’ ವಿಧಾನ ಪರಿಷತ್ ಸದಸ್ಯ ಎಂ.ಕೆ ಪ್ರಾಣೇಶ್ ಸ್ಪಷ್ಟಪಡಿಸಿದ್ದಾರೆ.

‘ಕಳಸ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ, ಕಳಸವನ್ನು ಯಾವಾಗ ಸಂಪೂರ್ಣ ತಾಲ್ಲೂಕನ್ನಾಗಿ ಪರಿವರ್ತಿಸುತ್ತೀರಿ ಎಂದು ಅನೇಕರು ಪ್ರಶ್ನಿಸಿದ್ದು, ಕೋವಿಡ್, ಪ್ರಾಕೃತಿಕ ವಿಕೋಪ ಕಾರಣಗಳಿಂದ ಸವಲತ್ತುಗಳನ್ನು ನೀಡಲು ತಡವಾಗಿದೆ. ಈ ಹಿಂದೆ ಕಳಸವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡಬೇಕು ಎಂದು ನಮ್ಮ ಪಕ್ಷದ ವತಿಯಿಂದ ಹಲವಾರು ಹೋರಾಟಗಳನ್ನು ಮಾಡಿದ್ದೇವೆ. ಮೂಡಿಗೆರೆ ತಾಲ್ಲೂಕು ಕೇಂದ್ರಕ್ಕೆ ಕಳಸದ ಗಡಿಭಾಗದಿಂದ ಬರಲು 120 ಕಿ.ಮೀ ಆಗುತ್ತಿತ್ತು. ಇಂತಹ ಸಮಸ್ಯೆಯನ್ನು ತಪ್ಪಿಸಬೇಕು ಎಂಬುದು ನಮ್ಮ ನಿಲುವಾಗಿತ್ತು’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಕಳಸದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನಾಂಗದವರು, ಕೂಲಿ ಕಾರ್ಮಿಕರು ವಾಸಿಸುತ್ತಿದ್ದು, ತಾಲ್ಲೂಕು ಕೇಂದ್ರಕ್ಕೆ ಬರಲು ತಮ್ಮ ದುಡಿಮೆಯ ಬಹುಪಾಲನ್ನು ಕಳೆದುಕೊಳ್ಳಬೇಕಾಗಿತ್ತು. ಅದ್ದರಿಂದ ನಮ್ಮ ಪಕ್ಷದ ಕಾರ್ಯಕರ್ತರು, ನಾನು ಹಾಗೂ ಕ್ಷೇತ್ರದ ಶಾಸಕರು ವಿರೋಧ ಪಕ್ಷದಲ್ಲಿ ಇದ್ದ ಸಂದರ್ಭದಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್‍ನಲ್ಲಿ ಇದರ ಪರವಾಗಿ ಹೋರಾಟ ಮಾಡಿ ಅಂದಿನ ಮುಖ್ಯಮಂತ್ರಿ ಹಾಗೂ ಸರ್ಕಾರದ ಗಮನ ಸೆಳೆದಿದ್ದೆವು. ಕಳಸದಿಂದ ಚಿಕ್ಕಮಗಳೂರು ನಗರದವರೆಗೆ ಪಾದಯಾತ್ರೆಯನ್ನು ನಡೆಸಲಾಗಿತ್ತು’ ಎಂದು ತಿಳಿಸಿದ್ದಾರೆ.

ADVERTISEMENT

‘ಕಳಸವನ್ನು ತಾಲ್ಲೂಕನ್ನಾಗಿ ಮಾಡುವ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾನು ಹಾಗೂ ನಮ್ಮ ಕ್ಷೇತ್ರದ ಶಾಸಕರು ಮುಖ್ಯಮಂತ್ರಿಗಳನ್ನು ಹಾಗೂ ಕಂದಾಯ ಸಚಿವರನ್ನು ಭೇಟಿ ಮಾಡಿ ತಾಲ್ಲೂಕು ಕೇಂದ್ರ ಮಾಡಲು ಅನುದಾನ ಹಾಗೂ ಇನ್ನಿತರ ಸವಲತ್ತುಗಳನ್ನು ನೀಡುವಂತೆ ಕೋರಿದ್ದೇವೆ. ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸಕರಾತ್ಮಕವಾಗಿ ಸ್ವಂದಿಸಿದ್ದಾರೆ. ಮುಂದಿನ ಅಧಿವೇಶನದಲ್ಲಿ ಕಳಸವನ್ನು ಸಂಪೂರ್ಣ ತಾಲ್ಲೂಕನ್ನಾಗಿ ಪರಿವರ್ತಿಸಲು ಪ್ರಸ್ತಾಪಿಸಲಾಗುವುದು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.