ಚಿಕ್ಕಮಗಳೂರು: ವೀರಶೈವ – ಲಿಂಗಾಯತ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರಿಸಬೇಕು ಎಂದು ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದವರು ಆಗ್ರಹಿಸಿದರು.
ತಾಲ್ಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೂ ಮೆರವಣಿಗೆ ಸಾಗಿದರು. ಆಜಾದ್ ಪಾರ್ಕ್ದಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರು.
ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ಎಂ.ಲೋಕೇಶ್ ಮಾತನಾಡಿ, ರಾಜ್ಯದಲ್ಲಿ ವೀರಶೈವ ಸಮುದಾಯವನ್ನು ಇತರ ಹಿಂದುಳಿದ ವರ್ಗ ಪಟ್ಟಿಯಲ್ಲಿದೆ. ಆದರೆ, ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಿಲ್ಲ ಎಂದು ಹೇಳಿದರು.
ಸಮುದಾಯದಲ್ಲಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಸಮಕ್ಕಳ ಶಿಕ್ಷಣ, ಉದ್ಯೋಗದ ಭವಿಷ್ಯ ಹಿತದೃಷ್ಟಿಯಿಂದ ಸಮುದಾಯದ ಸ್ಥಿತಿ ಪರಿಗಣಿಸಿ ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ಮಹಾಸಭಾದ ರಾಜ್ಯ ಘಟಕದ ಉಪಾಧ್ಯಕ್ಷ ಚಂದ್ರಶೇಖರ್ ಮಾತನಾಡಿ, ವೀರಶೈವ–ಲಿಂಗಾಯತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರವು ಶಿಫಾರಸು ಮಾಡಬೇಕು. ಸರ್ಕಾರ ಕ್ರಮ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.
ಮಹಾಸಭಾ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವನಮಾಲಾ ಮೃತ್ಯುಂಜಯ ಮಾತನಾಡಿ, ವೀರಶೈವ–ಲಿಂಗಾಯತರನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸದಿರುವುದರಿಂದ ಸಮುದಾಯದ ಪ್ರತಿಭಾವಂತರು ಅವಕಾಶಗಳಿಂದ ವಂಚಿರಾಗುವಂತಾಗಿದೆ. ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ರೂಪಾ ಅವರಿಗೆ ಮನವಿ ಸಲ್ಲಿಸಿದರು. ಮುಖಂಡರಾದ ಬಿ.ಜಿ. ಸೋಮಶೇಖರಪ್ಪ, ಜಿ. ವೀರೇಶ್, ಏಕಾಂತರಾಮು, ಎಂ.ಸಿ. ಬಸವರಾಜ್, ಗುರುಶಾಂತಪ್ಪ, ನಿರಂಜನ್, ಸತೀಶ್ ಮಹಡಿಮನೆ, ಸಿ.ಇ.ಚೇತನ್, ಜಿ.ಬಿ.ಪವನ್, ರೇಣುಕಾರಾಧ್ಯ, ಚಂದ್ರಮೌಳಿ, ಗೀತಾನಾಗೇಶ್, ಈಶ್ವರಪ್ಪ ಕೋಟೆ, ನಿಶಾಂತ್, ಮಮತಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.