ADVERTISEMENT

ಚಿಕ್ಕಮಗಳೂರು: ವಸತಿ ಶಾಲೆಗಳ ನೌಕರರ ಸಂಘದಿಂದ ಧರಣಿ

​ಪ್ರಜಾವಾಣಿ ವಾರ್ತೆ
Published 31 ಮೇ 2025, 14:23 IST
Last Updated 31 ಮೇ 2025, 14:23 IST
ದೀಪಾ
ದೀಪಾ   

ಚಿಕ್ಕಮಗಳೂರು: ಸಮಾಜ ಕಲ್ಯಾಣ ಇಲಾಖೆ ಅಧೀನದ ಕ್ರೈಸ್ ವಸತಿ ಶಾಲೆಗಳ ಕಾಯಂ ಶಿಕ್ಷಕರು ಹಾಗೂ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜೂನ್‌ 2ರಂದು ನಗರ ಆಜಾದ್ ಪಾರ್ಕ್‌ ವೃತ್ತದಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ವಸತಿ ಶಾಲೆಗಳ ನೌಕರರ ಸಂಘದ ಜಿಲ್ಲಾ ಘಕಟದ ಅಧ್ಯಕ್ಷೆ ದೀಪಾ ತಿಳಿಸಿದರು. 

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್.ಸಿ, ಎಸ್.ಟಿ, ಬಿ.ಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡುವುದು. ನಗದು ರಹಿತ ಚಿಕಿತ್ಸೆಗಾಗಿ ಜ್ಯೋತಿ ಸಂಜೀವಿನಿ ಅನುಷ್ಠಾನ, ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸಬೇಕು. ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ ನೀಡಬೇಕು. ಹೆಚ್ಚುವರಿ ಕಾರ್ಯಭಾರ ಇರುವುದರಿಂದ ಶೇ 10 ವಿಶೇಷ ಭತ್ಯೆ ಮಂಜೂರಾತಿ ಮಾಡಬೇಕು ಎಂದು ಒತ್ತಾಯಿಸಿದರು.

ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪರಿಹಾರ ಸಿಕ್ಕಿಲ್ಲ. ವಸತಿ ಶಾಲೆಗಳ ನೌಕರರ ಸಂಘದ ವತಿಯಿಂದ ಮೇ 26ರಿಂದ 28ರವರೆಗೆ ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ಸಂವಿಧಾನಾತ್ಮಕ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.

ADVERTISEMENT

ಮೇ 29ರಂದು ವಸತಿ ಶಾಲೆಯಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿತ್ತು. 30ರಂದು ತರಗತಿಗಳ ಬಹಿಷ್ಕಾರ ಮಾಡಿ ಅಸಹಕಾರ ವ್ಯಕ್ತಪಡಿಸಿದ್ದೆವು. 31ರಂದು ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಜೂನ್ 2ರಂದು ನಗರ ಆಜಾದ್ ಪಾರ್ಕ್‌ ವೃತ್ತದಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸಂಘಟನಾ ಕಾರ್ಯದರ್ಶಿ ಪ್ರಭುಕುಮಾರ್, ಲಿಂಗರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.