ADVERTISEMENT

ಚಿಕ್ಕಮಗಳೂರು: ಬಸ್ ನಿಲುಗಡೆಗೆ ಆಗ್ರಹಿಸಿ ರಸ್ತ ತಡೆ

ಕೆಎಸ್‌ಆರ್‌ಟಿಸಿ ವಿರುದ್ಧ ಮುಗುಳವಳ್ಳಿ ಗ್ರಾಮಸ್ಥರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 30 ಜೂನ್ 2025, 14:03 IST
Last Updated 30 ಜೂನ್ 2025, 14:03 IST
ಚಿಕ್ಕಮಗಳೂರು ತಾಲ್ಲೂಕಿನ ಮುಗುಳವಳ್ಳಿ ಬಳಿ ಗ್ರಾಮಸ್ಥರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು
ಚಿಕ್ಕಮಗಳೂರು ತಾಲ್ಲೂಕಿನ ಮುಗುಳವಳ್ಳಿ ಬಳಿ ಗ್ರಾಮಸ್ಥರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು   

ಚಿಕ್ಕಮಗಳೂರು: ತಾಲ್ಲೂಕಿನ ಮುಗುಳುವಳ್ಳಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲುಗಡೆಗೆ ಆಗ್ರಹಿಸಿ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಸೋಮವಾರ ಪ್ರತಿಭಟನೆ ನಡೆಸಿದರು.

ಚಿಕ್ಕಮಗಳೂರು–ಬೇಲೂರು ರಸ್ತೆಯಲ್ಲಿ ವಾಹನ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಸ್ಥಳಕ್ಕೆ ಬರುವ ತನಕ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದರು. ಗಂಟೆ ಗಟ್ಟಲೆ ವಾಹನಗಳು ನಿಂತಿದ್ದರಿಂದ ಕಿಲೋ ಮೀಟರ್‌ ತನಕ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಚಿಕ್ಕಮಗಳೂರಿನಿಂದ ಬೇಲೂರು, ಹಾಸನ, ಬೆಂಗಳೂರು, ಮೈಸೂರಿಗೆ ಪ್ರತಿನಿತ್ಯ ನೂರಾರು ಬಸ್‌ಗಳು ಸಂಚರಿಸುತ್ತಿವೆ. ಆದರೆ, ಗ್ರಾಮದಲ್ಲಿ ಬಸ್ ನಿಲುಗಡೆ ಇಲ್ಲದಿರುವುದಿಂದ ಕೆಲಸಕ್ಕೆ ಹೋಗುವವರು, ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಸರಿಯಾದ ಸಮಯಕ್ಕೆ ಶಾಲೆಗೆ ಹೊಗಲು ಸಾಧ್ಯವಾಗುತ್ತಿಲ್ಲ. ಪ್ರತಿ ನಿತ್ಯ ಆಟೊರಿಕ್ಷಾದಲ್ಲಿ ಹೋಗಲು ಹಣವಿಲ್ಲ. ಪ್ರತಿ ದಿನ ಇದೇ ಸಮಸ್ಯೆಯಾಗಿದೆ’ ಎಂದು ವಿದ್ಯಾರ್ಥಿನಿ ಪುಣ್ಯ ಹೇಳಿದರು.

ಗ್ರಾಮದ ಮುಖಂಡ ರಘುನಂದನ್ ಮಾತನಾಡಿ, ‘ಬಸ್ ನಿಲುಗಡೆ ಕೋರಿ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ, ತಹಶೀಲ್ದಾರ್‌ಗೆ 15 ದಿನಗಳ ಹಿಂದೆ ಮನವಿ ಸಲ್ಲಿಸಲಾಗಿದೆ. ಆದರೆ, ಅಧಿಕಾರಿಗಳು ಸ್ಪಂದಿಸಿಲ್ಲ. ಆದ್ದರಿಂದ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದರು.

ಗ್ರಾಮಕ್ಕೆ ಬರುವ ಬಸ್ ಕೂಡ ನಿಗದಿತ ಸಮಯಕ್ಕೆ ಬರುತ್ತಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಬಸ್ ಕೆಟ್ಟಿದೆ, ಪರ್ಯಾಯ ಬಸ್ ಇಲ್ಲ ಎಂಬ ಸಬೂಬನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಬೆಂಗಳೂರು, ಮೈಸೂರು ಕಡೆಯಿಂದ ರಾತ್ರಿ ವೇಳೆ ಬರುವ ಪ್ರಯಾಣಿಕರಿಗೂ ತೊಂದರೆಯಾಗಿದೆ ಎಂದು ಹೇಳಿದರು.

ಮುಖಂಡ ಪರಮೇಶ್ವರಪ್ಪ ಮಾತನಾಡಿ, ‘ಗ್ರಾಮಗಳಿಗೆ ಸರ್ಕಾರಿ ಬಸ್ ಕಾರ್ಯಾಚರಣೆ ಮಾಡದೆ ಬಹಳ ತೊಂದರೆಯಾಗಿದೆ. ಶಕ್ತಿ ಯೋಜನೆಯಿಂದ ನಮ್ಮ ಗ್ರಾಮಕ್ಕೆ ಸರ್ಕಾರಿ ಬಸ್ಸುಗಳು ಇಲ್ಲದಂತಾಗಿವೆ. ಗ್ರಾಮಕ್ಕೆ ಬಸ್ ಕಾರ್ಯಾಚರಣೆ ಜತೆಗೆ ವೇಗದೂತ ಬಸ್ ನಿಲುಗಡೆಗೂ ಅವಕಾಶ ನೀಡಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ತಿಳಿಸಿದರು.

ಸ್ಥಳಕ್ಕೆ ಚಿಕ್ಕಮಗಳೂರು ತಹಶೀಲ್ದಾರ್ ರೇಷ್ಮಾ ಶೆಟ್ಟಿ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಿದರು. ಬಸ್ ನಿಲುಗಡೆಯ ಭರವಸೆ ನೀಡಿದರು. ಬಳಿಕ ಗ್ರಾಮಸ್ಥರು ರಸ್ತೆತಡೆ ಕೈಬಿಟ್ಟರು.

ಪಾಲನೆಯಾಗದ ಆದೇಶ

‘ವೇಗದೂತ ಬಸ್‌ಗಳ ನಿಲುಗಡೆಗೆ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶಿಸಿದ್ದರೂ ಚಾಲಕ ಹಾಗೂ ನಿರ್ವಾಹಕರು ಇದನ್ನು ಪಾಲಿಸುತ್ತಿಲ್ಲ’ ಎಂದು ರೈತ ಸಂಘದ ಮುಖಂಡ ಗುರುಶಾಂತಪ್ಪ ಹೇಳಿದರು. ಬಸ್ ನಿಲುಗಡೆ ಮಾಡದೆ ಹೋಗುವ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ನೋಟಿಸ್ ನೀಡಿ ಎಚ್ಚರಿಕೆ ನೀಡಬೇಕು ಎಂದು ಆಗ್ರಹಿಸಿದರು. ಗ್ರಾಮಸ್ಥ ದಿನೇಶ್ ಮಾತನಾಡಿ ‘ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಿರಿಯ ನಾಗರಿಕರು ಮಹಿಳೆಯರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಸಮಸ್ಯೆ ಸರಿಪಡಿಸಬೇಕು’ ಎಂದು ಒತ್ತಾಯಿಸಿದರು. ಗ್ರಾಮ ಪಂಚಾಯಿತಿ ಸದಸ್ಯೆ ನಳಿನಾಕ್ಷಿ ಮಾತನಾಡಿ ‘ಮಹಿಳೆಯರ ಅನುಕೂಲಕ್ಕೆ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಬಸ್‌ಗಳೇ ಇಲ್ಲವಾಗಿವೆ. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.