ಪುತ್ತೂರು/ಉಪ್ಪಿನಂಗಡಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರ ಮನೆತನದ ಕಡಬ ತಾಲ್ಲೂಕಿನ ಪಾಲ್ತಾಡಿ ಗ್ರಾಮದ ಕೆಳಗಿನ ಕುಂಜಾಡಿ ತರವಾಡು ಮನೆಯಲ್ಲಿ ಧರ್ಮ ನೇಮೋತ್ಸವವು ಅಚ್ಚುಕಟ್ಟಾದ ವ್ಯವಸ್ಥೆಗಳೊಂದಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ವೈಭವದಿಂದ ಆರಂಭಗೊಂಡಿತು.
ವಿವಿಧ ಭಜನಾ ತಂಡಗಳಿಂದ ಭಜನೆ ಸೇವೆ, ಬಂಬಿಲ, ಕುಂಜಾಡಿ, ಸರ್ವೆ ಎಂಬಲ್ಲಿಂದ ಪಿಲಿಚಾಮುಂಡಿ, ರಕ್ತೇಶ್ವರಿ, ಮತ್ತು ಪರಿವಾರ ದೈವಗಳ ಭಂಡಾರ ತರಲಾಯಿತು. ಬಳಿಕ ಪಲ್ಲ ಪೂಜೆ, ಅನ್ನ ಸಂತರ್ಪಣೆ ನಡೆಯಿತು. ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ, ಕುಂಜಾಡಿ ಸುಶೀಲಾವತಿ ಎನ್. ಶೆಟ್ಟಿ, ನಳಿನ್ ಕುಮಾರ್ ಕಟೀಲು, ಕುಂಜಾಡಿ ನಾರಾ ಯಣ ರೈ, ಮಂಜುನಾಥ ರೈ ಇದ್ದರು.
ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಸಚಿವ ಎಸ್.ಅಂಗಾರ, ಸಂಸದರಾದ ಶೋಭಾ ಕರಂದ್ಲಾಜೆ, ಅಣ್ಣಾ ಸಾಹೇಬ್ ಜೊಲ್ಲೆ, ಗದ್ದಿಗೌಡರ್, ಭಗವಂತ ಖೂಬಾ, ಡಿ.ಕೆ. ಸುರೇಶ್, ಪ್ರತಾಪಸಿಂಹ, ವಿಧಾನ ಪರಿಷತ್ ಸದಸ್ಯ ಮುನಿರಾಜು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್, ಕಾಂಗ್ರೆಸ್ ಮುಖಂಡ ಮಿಥುನ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಮುನಿರತ್ನ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಎಸ್ಪಿ ಸೋವವಣೆ ಹೃಷಿಕೇಶ್ ಭಗವಾನ್, ಡಿವೈಎಸ್ಪಿ ಗಾನಾ ಪಿ. ಕುಮಾರ್ ಇದ್ದರು. ಅಲ್ಲದೆ, ವಿವಿಧ ಸ್ಥರದ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡರು, ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಧರ್ಮ ನೇಮೋತ್ಸವದ ಪಾಕಶಾಲೆ ಯಲ್ಲಿ ಪಲ್ಲ ಪೂಜೆ ನೆರವೇರಿಸಲಾಯಿತು. ಗೋಮಾತೆಗೆ ಪೂಜೆ ಸಲ್ಲಿಸಿ ಪ್ರಸಾದ ನೀಡಲಾಯಿತು. ಇದಾದ ಬಳಿಕ ಅನ್ನ ಪ್ರಸಾದ ವಿತರಿಸಲಾಯಿತು. ನಿರಂತರ ಅನ್ನದಾನ ವ್ಯವಸ್ಥೆ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.